ಮಡಿಕೇರಿ ಫೆ.2 : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ತಿಳಿಸಿದ್ದಾರೆ.
ಕೊಡಗು ಜಿಲ್ಲಾ ಪಂಚಾಯತ್, ಗಾಳಿಬೀಡು ಗ್ರಾಮ ಪಂಚಾಯತ್ ಮತ್ತು ಕರ್ನಾಟಕ ರಾಜ್ಯ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದೊಂದಿಗೆ ಗಾಳಿಬೀಡು ಗ್ರಾ.ಪಂ.ನ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಗುರುವಾರ ನಡೆದ ‘ನರೇಗಾ ದಿನಾಚರಣೆ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯು ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಗ್ರಾಮೀಣ ಅಭಿವೃದ್ಧಿಯಲ್ಲಿ ಮನರೇಗಾ ಯೋಜನೆಯಲ್ಲಿ ಕೊಡಗು ಜಿಲ್ಲೆ ಮಹತ್ವದ್ದಾಗಿದೆ ಎಂದು ಅವರು ಹೇಳಿದರು.
ಮನರೇಗಾ ಯೋಜನೆಯ ಪ್ರಗತಿಯಲ್ಲಿ ತಾಂತ್ರಿಕ ಸಿಬ್ಬಂದಿಗಳು ಮಹತ್ತರ ಪಾತ್ರ ವಹಿಸುತ್ತಾರೆ. ಇದುವರೆಗೂ ಜಿಲ್ಲೆಯಲ್ಲಿ ಮನರೇಗಾ ಯೋಜನೆಯನ್ನು ಗ್ರಾಮಮಟ್ಟದ ಜನರಿಗೆ ತಲುಪಿಸುವಲ್ಲಿ ಸಿಬ್ಬಂದಿಗಳು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಗ್ರಾಮೀಣ ಭಾಗದ ಶಾಲೆ, ಅಂಗನವಾಡಿಗಳಿಗೆ ಮೂಲ ಸೌಕರ್ಯ ಒದಗಿಸುವಲ್ಲಿ ನರೇಗಾ ಯೋಜನೆಯು ಯಶಸ್ವಿಯಾಗಿದೆ. ಮುಂದಿನ ದಿನಗಳಲ್ಲಿಯೂ ಯೋಜನೆಯನ್ನು ಮತ್ತಷ್ಟು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗುವಂತೆ ಅವರು ಸಲಹೆ ನೀಡಿದರು.
ಜಿ.ಪಂ.ಉಪ ಕಾರ್ಯದರ್ಶಿ ಜಿ.ಧನರಾಜು ಅವರು ಮಾತನಾಡಿ 2005 ರಲ್ಲಿ ಜಾರಿಯಾದ ಈ ಯೋಜನೆಯು ಇಂದಿನ ದಿನದವರೆಗೂ ಯಶಸ್ವಿಯಾಗಿ ಸಾಗಿದೆ. ಗ್ರಾಮೀಣ ಭಾಗದ ಜನರಿಗೆ ಈ ಯೋಜನೆಯು ಅಕ್ಷಯ ಪಾತ್ರೆಯಾಗಿದೆ ಎಂದರು.
ಇದೇ ವೇಳೆ ಗಾಳಿಬೀಡು ಗ್ರಾ.ಪಂ.ನಲ್ಲಿ 100 ದಿನ ಯಶಸ್ವಿಯಾಗಿ ಮನರೇಗ ಯೋಜನೆಯಡಿ ಕೆಲಸ ನಿರ್ವಹಿಸಿದ ಹಮ್ಮಿಯಾಲ ಗ್ರಾಮದ ಕೆ.ಎ.ದೇವಯ್ಯ ಅವರನ್ನು ಗೌರವಿಸಲಾಯಿತು.
ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ಗಳಲ್ಲಿ ಆಚರಣೆ: ಸೋಮವಾರಪೇಟೆ ತಾಲೂಕಿನ ಹಾನಗಲ್ಲು ಗ್ರಾಮ ಪಂಚಾಯತಿಯಲ್ಲಿ ನರೇಗಾ ದಿನದ ಅಂಗವಾಗಿ ಆರೋಗ್ಯ ಶಿಬಿರ ಏರ್ಪಡಿಸಲಾಯಿತು. ಕಂಬಿಬಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉದ್ಯೋಗ ಚೀಟಿದಾರರಿಗೆ ಇ-ಶ್ರಮ್ ಕಾರ್ಡ್ಗಳನ್ನು ವಿತರಿಸಲಾಯಿತು. ತೋಳೂರುಶೆಟ್ಟಳ್ಳಿ, ಸುಂಠಿಕೊಪ್ಪ, ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಮಿಕರಿಗೆ ಉದ್ಯೋಗ ಚೀಟಿ ವಿತರಿಸಲಾಯಿತು. ವಿರಾಜಪೇಟೆ ತಾಲೂಕು ನಿಟ್ಟೂರು ಗ್ರಾಮ ಪಂಚಾಯಿತಿಯಲ್ಲಿ 100 ದಿವಸ ಪೂರ್ಣಗೊಳಿಸಿದ ಕುಟುಂಬದ ಮುಖ್ಯಸ್ಥರಿಗೆ ಸನ್ಮಾನಿಸಲಾಯಿತು.







