ಮಡಿಕೇರಿ ಏ.7 : ಪಕ್ಷದಲ್ಲಿ ಭಿನ್ನಾಭಿಪ್ರಾಯ ಬದಿಗೊತ್ತಿ ಕೊಡಗು ಜಿಲ್ಲೆಯಲ್ಲಿ ಎರಡು ವಿಧಾನಸಭಾ ಸ್ಥಾನಗಳನ್ನು ಕಾಂಗ್ರೆಸ್ಸಿಗೆ ಒಲಿಸಿಕೊಳ್ಳುವ ಮೂಲಕ ಕೊಡಗು ಜಿಲ್ಲೆಯನ್ನು ಬಿಜೆಪಿ ಮುಕ್ತವನ್ನಾಗಿಸಬೇಕಾಗಿದೆ ಎಂದು ಕಾಂಗ್ರೆಸ್ ಪ್ರಮುಖರು ಹಾಗೂ ಟಿಕೆಟ್ ಆಕಾಂಕ್ಷಿಯಾಗಿದ್ದ ಹೆಚ್.ಎಸ್.ಚಂದ್ರಮೌಳಿ ತಿಳಿಸಿದ್ದಾರೆ.
ಕುಶಾಲನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪಕ್ಷದಲ್ಲಿ ಅಭ್ಯರ್ಥಿಗಳು ಸಾಂಕೇತಿಕ ಮಾತ್ರ, ಕಾಂಗ್ರೆಸ್ ಪಕ್ಷದ ಗೆಲುವು ಮುಖ್ಯ ಎಂದರು. ಜಿಲ್ಲೆಯಲ್ಲಿರುವ ಬಿಜೆಪಿ ವಿರುದ್ಧದ ಅಲೆಯನ್ನು ಬಂಡವಾಳವನ್ನಾಗಿಸಿಕೊoಡು ಕಾರ್ಯನಿರ್ವಹಿಸಿ ಪ್ರತಿಯೊಬ್ಬರು ಕಾಂಗ್ರೆಸ್ ಗೆಲುವಿಗೆ ಶ್ರಮಿಸಬೇಕಾಗಿದೆ ಎಂದರು
ಈ ನಿಟ್ಟಿನಲ್ಲಿ ಪಕ್ಷದಲ್ಲಿ ಒಗ್ಗಟ್ಟಿನ ಅಗತ್ಯವಿದೆ ಎಂದ ಚಂದ್ರಮೌಳಿ, ರಾಜಕಾರಣದಲ್ಲಿ ಆಕಾಂಕ್ಷಿಗಳ ಸಂಖ್ಯೆ ಅಧಿಕವಿದ್ದರೂ ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ದರಾಗಬೇಕಾಗಿದೆ ಎಂದು ಹೇಳಿದರು.
ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಪಕ್ಷದಿಂದ ಡಾ. ಮಂತರ್ ಗೌಡ ಅವರ ಆಯ್ಕೆಯನ್ನು ಸ್ವಾಗತಿಸುತ್ತೇನೆ, ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ಮತಗಳೊಂದಿಗೆ ಒಂದು ಪ್ರಬಲ ಸಮುದಾಯದ ಮತಗಳು ಸೇರಿ ಒಟ್ಟಾರೆ ಮಂತರ್ ಗೌಡ ಅವರ ಗೆಲುವಿಗೆ ಶ್ರಮಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ತಾನು ಈಗಾಗಲೇ ಕಾರ್ಯಾಂಗ, ನ್ಯಾಯಾಂಗದಲ್ಲಿ ತೊಡಗಿಸಿಕೊಂಡಿದ್ದು, ಶಾಸಕಾಂಗದ ಮೂಲಕ ಜನರ ಸಮಸ್ಯೆಗಳಿಗೆ ಧ್ವನಿಯಾಗುವ ಆಶಾಭಾವನೆ ಹೊಂದಿದ್ದೆ. ಆದರೆ ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ. ಈ ಹಿನ್ನೆಲೆಯಲ್ಲಿ ಡಾ.ಮಂತರ್ ಗೌಡ ಅವರನ್ನು ಬೆಂಬಲಿಸಬೇಕು ಎಂದರು. ಪಕ್ಷದಲ್ಲಿ ವೈಯಕ್ತಿಕ ಬೆಳವಣಿಗೆ, ಆಸೆ ಆಕಾಂಕ್ಷೆಗಳಿಗೆ ಸ್ಥಾನವಿಲ್ಲ, ಕಾಂಗ್ರೆಸ್ ಪಕ್ಷದಲ್ಲಿ ರೋಗಗ್ರಸ್ತ ಮನಸ್ಸುಗಳಿಗೆ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದ ಅವರು, ಪಕ್ಷದ ಚೌಕಟ್ಟಿನಲ್ಲಿ ಅಭ್ಯರ್ಥಿ ಆಯ್ಕೆ ನಡೆದಿದೆ. ಯಾವುದೇ ರೀತಿಯ ಅಸಮಾಧಾನಗಳು ನಮ್ಮೊಳಗೆ ಇದ್ದರೂ ಅದನ್ನು ಶಮನಗೊಳಿಸುವ ಕೆಲಸ ನಡೆಯುತ್ತಿದೆ ಎಂದರು. ಹತಾಶೆ ಮನೋಭಾವನೆಯನ್ನು ಮೀರಿ ನಿಲ್ಲುವ ರಾಜಕಾರಣ ನಾವು ಕಾಣಬೇಕಾಗಿದೆ. ಪ್ರಸಕ್ತ ಬಿಜೆಪಿ ಸರ್ಕಾರ ಜಿಲ್ಲೆಗೆ ಮಾಡಲು ಸಾಧ್ಯವಾಗದ ಕೆಲಸಗಳನ್ನು ಕಾಂಗ್ರೆಸ್ ಪಕ್ಷದ ಪ್ರತಿನಿಧಿಗಳು ಸರ್ಕಾರದ ಮೂಲಕ ಮಾಡುವ ಭರವಸೆ ವ್ಯಕ್ತಪಡಿಸಿದರು.
ತನಗೆ ದೊರೆತ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳುವ ನೈಪುಣ್ಯತೆ ಸಂಘಟನಾ ಕಲೆಗಳು ಮಂತರ್ ಗೌಡ ಅವರಿಗೆ ಇದೆ ಎಂದು ಚಂದ್ರಮೌಳಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಡಿಸಿಸಿ ಪ್ರಧಾನ ಕಾರ್ಯದರ್ಶಿ ಕಾಂತರಾಜು, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಜನಾರ್ಧನ್, ಡಿಸಿಸಿ ಸದಸ್ಯರಾದ ಶೇಖರ್, ಪಕ್ಷದ ಪ್ರಮುಖರಾದ ಉದಯಕುಮಾರ್, ರಂಗಸ್ವಾಮಿ ಅಶೋಕ್ ಇದ್ದರು.








