ಮಡಿಕೇರಿ ಏ.12 : ಕಾಂಗ್ರೆಸ್ ಪಕ್ಷದಿಂದ ಕೊಡಗು ಜಿಲ್ಲೆಯ ವಿರಾಜಪೇಟೆ ಕ್ಷೇತ್ರದಿಂದ ಸ್ಪರ್ಧಿಸಿರುವ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಡಾ.ಮಂಥರ್ ಗೌಡ ಅವರುಗಳ ಗೆಲುವಿಗಾಗಿ ಅವಿರತ ಶ್ರಮ ವಹಿಸುವುದಾಗಿ ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಇಬ್ಬರ ಗೆಲುವು ಅನಿವಾರ್ಯವಾಗಿದ್ದು, ಮತದಾರರ ಒಲವು ಈ ಉತ್ಸಾಹಿ ಅಭ್ಯರ್ಥಿಗಳ ಪರ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಯುವ ಮುಖಂಡರುಗಳ ಯೋಜನೆ ಮತ್ತು ಯೋಚನೆಗಳು ಕೊಡಗಿನ ಅಭಿವೃದ್ಧಿಗೆ ಪೂರಕವಾಗಿದೆ. ಡಾ.ಮಂತರ್ ಗೌಡ ಅವರು ಅಭಿವೃದ್ಧಿ ಪರ ಚಿಂತನೆಯ ಮೂಲಕವೇ ಜನ ಮಾನಸದಲ್ಲಿ ಹೆಸರು ಮಾಡಿದ್ದಾರೆ. ಕೊಡಗಿನಲ್ಲಿ ಪುಷ್ಪ ಹರಾಜು ಕೇಂದ್ರ ಹಾಗೂ ಪುಷ್ಪ ಸಂಸ್ಕರಣಾ ಕೇಂದ್ರ ಆರಂಭಿಸುವ ಯೋಜನೆಯನ್ನು ಹಾಕಿಕೊಂಡಿದ್ದಾರೆ. ಇದರಿಂದ ಸ್ಥಳೀಯ ಮಹಿಳೆಯರ ಆರ್ಥಿಕ ಸ್ಥಿತಿ ಉತ್ತಮಗೊಳ್ಳಲಿದೆ ಎಂದರು.
ಸಣ್ಣ ಉದ್ಯಮಗಳ ಪ್ರೋತ್ಸಾಹಕ್ಕೆ ಕುಶಾಲನಗರದಲ್ಲಿ ಇನ್ಕ್ಯುಬೇಟರ್ ಸೆಂಟರ್, ಕೃಷಿ ಆಧಾರಿತ ಉದ್ಯಮ, ಆಹಾರ ಉತ್ಪನ್ನಗಳ ಕೈಗಾರಿಕೆ, ಉದ್ಯೋಗ ಸೃಷ್ಟಿಸುವ ಬಗ್ಗೆ ಯೋಜನೆಗಳನ್ನು ಹೊಂದುವ ಮೂಲಕ ಸಮೃದ್ಧ ಕೊಡಗು ಪರಿಕಲ್ಪನೆಯನ್ನು ಮಂತರ್ ಹೊಂದಿದ್ದಾರೆ ಎಂದು ತಿಳಿಸಿದರು.
ವಿರಾಜಪೇಟೆ ಕ್ಷೇತ್ರದ ಅಭ್ಯರ್ಥಿ ಎ.ಎಸ್.ಪೊನ್ನಣ್ಣ ಅವರು ಅಭಿವೃದ್ಧಿಗೆ ಒತ್ತು ನೀಡಿ, ಕಳೆದ ಮೂರು ವರ್ಷಗಳಿಂದ ಕೊಡಗಿನಲ್ಲಿ ಸಕ್ರಿಯರಾಗಿದ್ದಾರೆ. ಪ್ರಾಕೃತಿಕ ವಿಕೋಪದ ಸಂದರ್ಭ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಹಲವು ಬೇಡಿಕೆಗಳನ್ನು ಈಡೇರಿಸುವಲ್ಲಿ ಮುಂಚೂಣಿಯಲ್ಲಿದ್ದರು ಎಂದರು.
ಕುಶಾಲನಗರ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸುನಿತಾ ಮಂಜುನಾಥ್ ಮಾತನಾಡಿ, ಕಾಂಗ್ರೆಸ್ ಪಕ್ಷದ ಇಬ್ಬರು ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರತಿ ಗ್ರಾಮ ಗ್ರಾಮಗಳಲ್ಲಿ ಮತದಾರರನ್ನು ಭೇಟಿಯಾಗಿ ಜಿಲ್ಲೆಯ ಅಭಿವೃದ್ಧಿಗಾಗಿ ಭರವಸೆ ನೀಡುತ್ತಿದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಿನಾಜ್ ಪ್ರವೀಣ್ ಹಾಗೂ ಮಡಿಕೇರಿ ಬ್ಲಾಕ್ ಅಧ್ಯಕ್ಷೆ ಮೀನಾಕ್ಷಿ ಕೇಶವ ಉಪಸ್ಥಿತರಿದ್ದರು.







