*ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ : ಸದುಪಯೋಗ ಪಡಿಸಿಕೊಳ್ಳಲು ಮನವಿ*

ಮಡಿಕೇರಿ ಮೇ 31 : ಕೊಡಗು ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜು, ಸಾರ್ವಜನಿಕ ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಗರ ಆರೋಗ್ಯ ಕೇಂದ್ರದಲ್ಲಿ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತ ಬಂದಿದೆ.
ಈ ಯೋಜನೆಯಡಿ ಬಿಪಿಎಲ್ ಕುಟುಂಬ ವರ್ಗದವರಿಗೆ 5 ಲಕ್ಷದವರೆಗೆ ಉಚಿತ ಚಿಕಿತ್ಸೆ ಹಾಗೂ ಎಪಿಎಲ್ ಕುಟುಂಬ ವರ್ಗದವರಿಗೆ ಪ್ಯಾಕೇಜ್ ದರದ ಶೇ.30 ರಿಯಾಯಿತಿ ಇದೆ. ಈ ಸೇವೆಗಳನ್ನು ಪಡೆದುಕೊಳ್ಳಲು ಆರೋಗ್ಯ ಇಲಾಖೆಯಿಂದ ಹಾಗೂ ಗ್ರಾಮ ಒನ್ ಕೇಂದ್ರಗಳಿಂದ ನೀಡಿರುವ ಆರೋಗ್ಯ ಕಾರ್ಡ್ಗಳು. ಬಿಪಿಎಲ್, ಎಪಿಎಲ್, ಆಧಾರ್ ಕಾರ್ಡ್ಗಳು ಅವಶ್ಯಕವಾಗಿ ಬೇಕಾಗಿರುತ್ತದೆ. ಹಾಗೂ ಜಿಲ್ಲೆಯ ರೋಗಿಗಳು ಮತ್ತು ಸಾರ್ವಜನಿಕರು ಎಬಿಎಆರ್ಕೆ ಯೋಜನೆಯಡಿ ಹೆಚ್ಚಿನ ಚಿಕಿತ್ಸೆಗೆ ಹೊರ ಜಿಲ್ಲೆಗಳಿಗೆ ತೆರಳುವ ಸಂದರ್ಭದಲ್ಲಿ ಕಡ್ಡಾಯವಾಗಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ರೆಫರಲ್ ನಮೂನೆಗಳನ್ನು ಪಡೆದುಕೊಂಡು ತೆರಳಬೇಕು ಎಂದು ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಜಿಲ್ಲೆಯ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಉಚಿತ ಚಿಕಿತ್ಸೆಗಾಗಿ ಸಾರ್ವಜನಿಕರು ಹಾಗೂ ರೋಗಿಗಳು ತಮ್ಮ ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ಗಳನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕು ಎಂದು ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ತಿಳಿಸಿದ್ದಾರೆ.
