ಮಡಿಕೇರಿ ಜು.3 : ಪರಿಸರ ಜಾಗೃತಿ ಮತ್ತು ಜಿಲ್ಲೆಯಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಆಗಬೇಕಾದ ಕಾರ್ಯಗಳ ಬಗ್ಗೆ ಗ್ರೀನ್ ಸಿಟಿ ಫೋರಂ ವತಿಯಿಂದ ನೂತನ ಜಿಲ್ಲಾಧಿಕಾರಿ ವೆಂಕಟ್ರಾಜಾ ಅವರ ಗಮನ ಸೆಳೆಯಲಾಯಿತು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ವೆಂಕಟ್ರಾಜಾ ಅವರನ್ನು ಭೇಟಿಯಾದ ಫೋರಂ ಅಧ್ಯಕ್ಷ ಚೆಯ್ಯಂಡ ಸತ್ಯ ಗಣಪತಿ ಹಾಗೂ ನಿರ್ದೇಶಕ ಕುಕ್ಕೇರ ಜಯ ಚಿಣ್ಣಪ್ಪ, ಗ್ರೀನ್ ಸಿಟಿ ಫೋರಂ ವತಿಯಿಂದ ಹಮ್ಮಿಕೊಳ್ಳಲಾಗುತ್ತಿರುವ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಜತೆಗೆ ಜಿಲ್ಲಾಡಳಿತ ವತಿಯಿಂದ ಕಾರ್ಯರೂಪಕ್ಕೆ ಬರಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಮಡಿಕೇರಿ ನಗರದಲ್ಲಿನ ಸ್ಟೋನ್ಹಿಲ್ನಲ್ಲಿರುವ ಕಸದ ರಾಶಿ ನಗರಕ್ಕೆಕಪ್ಪು ಚುಕ್ಕೆಯಾಗಿದೆ. ಅದಕ್ಕೆ ವೈಜ್ಞಾನಿಕವಾಗಿ ಪರಿಹಾರ ಕ್ರಮವನ್ನು ತುರ್ತಾಗಿ ಕಾರ್ಯರೂಪಕ್ಕೆ ತಂದು ನಗರದ ಸೌಂದರ್ಯ ಹಾಳಾಗದಂತೆ ಕ್ರಮ ವಹಿಸುವಂತೆ ಮನವಿ ಮಾಡಿದರು.
ಪರಿಸರ ಸ್ನೇಹಿ ಪ್ರವಾಸೋದ್ಯಮ ಬೆಳೆಯಬೇಕು. ಜಿಲ್ಲೆಗೆ ಬರುವ ಪ್ರವಾಸಿಗರಿಗೆ ಶೌಚಾಲಯ, ನೀರಿನ ವ್ಯವಸ್ಥೆ, ವಾಹನ ಪಾರ್ಕಿಂಗ್ ಸೇರಿ ಇತರೆ ಅಗತ್ಯ ಮೂಲ ಸೌಕರ್ಯ ವ್ಯವಸ್ಥೆಯನ್ನು ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಆಸಕ್ತಿ ವಹಿಸಬೇಕೆಂದು ಕೋರಿದರು.
ಜಿಲ್ಲೆಯ ಎಲ್ಲಾ ಭಾಗದಲ್ಲೂ ಸ್ವಚ್ಛತೆಗೆ ಆದ್ಯತೆಕೊಡಬೇಕು. ಈ ನಿಟ್ಟಿನಲಿ ಕೊಡಗು ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ಕಸ ವಿಲೇವಾರಿ ಘಟಕ ಸ್ಥಾಪನೆ. ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧವಿದ್ದು, ಆ ನಿಯಮವನ್ನು ಕಟ್ಟುನಿಟ್ಟಾಗಿ ಪಾಲನೆಯಾಗುವಂತೆ ಜನರಲ್ಲಿ ಅರಿವು ಮೂಡಿಸಬೇಕು. ಪ್ಲಾಸ್ಟಿಕ್ಗೆ ಪರ್ಯಾವಾಗಿ ಪೇಪರ್ ಹಾಗೂ ಬಟ್ಟೆಯ ಬ್ಯಾಗ್ಗಳ ಬಳಕೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಕಾರ್ಯಕ್ರಮವಾಗಬೇಕೆಂದು ಜಿಲ್ಲಾಧಿಕಾರಿಗಳ ಗಮನ ಸೆಳೆದು ಮನವಿ ಪತ್ರ ನೀಡಿದರು.







