ಮಡಿಕೇರಿ ಜು.18 : ಕೇಂದ್ರದ ಮಾಜಿ ಸಚಿವ ಹಾಗೂ ಆರ್ಥಿಕ ತಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರು ತಮ್ಮ ರಾಜ್ಯಸಭಾ ನಿಧಿಯಿಂದ ನೀಡಿದ ಅನುದಾನದಲ್ಲಿ ಕುಶಾಲನಗರ ತಾಲ್ಲೂಕಿನ “ನೂರೊಕ್ಕನಾಡ್ ಹಿಲ್ಸ್” ರಸ್ತೆ ಮತ್ತು ಮಡಿಕೇರಿ ತಾಲ್ಲೂಕಿನ ಕತ್ತಲೆಕಾಡು ರಸ್ತೆ ಅಭಿವೃದ್ಧಿಯಾಗಿದ್ದು, ಇದರ ಉದ್ಘಾಟನಾ ಕಾರ್ಯಕ್ರಮ ಜು.19 ರಂದು ನಡೆಯಲಿದೆ.
ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ಕೋರಿಕೆಯ ಮೇರೆಗೆ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಸಂಸತ್ ಸದಸ್ಯರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆಯ ನಿಧಿಯಡಿ ಕೊಡಗಿನ ಕುಗ್ರಾಮಗಳ “ಬಲ್ಯಮನೆ” ರಸ್ತೆ ಮತ್ತು ಇತರ ರಸ್ತೆಗಳ ಅಭಿವೃದ್ಧಿಗೆ 2.46 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದರು. ಮೊದಲ ಹಂತದಲ್ಲಿ ಒಂದೂವರೆ ಕೋಟಿ ರೂ. ವೆಚ್ಚದಲ್ಲಿ “ನೂರೊಕ್ಕನಾಡ್ ಹಿಲ್ಸ್” ರಸ್ತೆ ಮತ್ತು ಕತ್ತಲೆಕಾಡು ರಸ್ತೆ ನಿರ್ಮಾಣವಾಗಿದೆ. ಇದನ್ನು ಬುಧವಾರ ಬೆಳಗ್ಗೆ 10 ಗಂಟೆಗೆ ಡಾ.ಸುಬ್ರಮಣಿಯನ್ ಸ್ವಾಮಿ ಅವರ ಆಪ್ತ ಹಾಗೂ ವಿಹೆಚ್ಎಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಶೆಟ್ಟಿ ಅವರು ಉದ್ಘಾಟಿಸಲಿದ್ದಾರೆ.
ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಉಪಸ್ಥಿತರಿರುವರು ಎಂದು ಸಿಎನ್ಸಿ ಪ್ರಕಟಣೆ ತಿಳಿಸಿದೆ.







