ಮಡಿಕೇರಿ ಜು.18 : ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ತಾಲ್ಲೂಕಿನ ವಿವಿಧ ಇಲಾಖೆಗಳ ಸಾಮಾನ್ಯ ಸಭೆಯು ಜಿ.ಪಂ.ಉಪ ಕಾರ್ಯದರ್ಶಿ ಜಗದೀಶ್ ಅಧ್ಯಕ್ಷತೆಯಲ್ಲಿ ನಡೆಯಿತು.
ನಂತರ ಮಾತನಾಡಿದ ಅವರು ಶಿಕ್ಷಣ ಇಲಾಖೆಯಲ್ಲಿ ಬಾಕಿ ಇರುವ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಿ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ಸಲಹೆ ನೀಡಿದರು.
ನರೇಗಾ ಯೋಜನೆಯಡಿ ಶಾಲಾ ಶೌಚಾಲಯ ಕಾಮಗಾರಿ ತೆಗೆದುಕೊಳ್ಳಲಾಗಿದ್ದು, ಶೀಘ್ರ ಪೂರ್ಣಗೊಳಿಸಲಾವುದು ಎಂದು ಮಾಹಿತಿ ನೀಡಿದರು.
ಮಳೆಗಾಲ ಪ್ರಾರಂಭವಾಗಿದ್ದು ಶಾಲಾ ಕಟ್ಟಡ ದುರಸ್ತಿಗಳಿದ್ದಲ್ಲಿ ಕೂಡಲೇ ಕ್ರಮ ತೆಗೆದುಕೊಂಡು ಯಾವುದೇ ರೀತಿ ಹಾನಿಯಾಗದಂತೆ ನೋಡಿಕೊಳ್ಳುವಂತೆ ಸೂಚಿಸಿದರು.
ಹಾಡಿಗಳಲ್ಲಿ ವಾಸಿಸುವ ಜನರ ಆರೋಗ್ಯದ ಮೇಲೆ ಹೆಚ್ಚು ಗಮನ ನೀಡಬೇಕು. ಅನುದಾನದ ಕೊರತೆಗಳಿದ್ದರೆ ಗಮನಕ್ಕೆ ತಂದು ಬಗೆಹರಿಸಿಕೊಳ್ಳಿ ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅಂಗನವಾಡಿ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ಪೂರಕವಾಗಿ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಜಲ ಜೀವನ್ ಮೀಷನ್ ಯೋಜನೆಯಡಿ ಬಾಕಿ ಇರುವ ಕಾಮಗಾರಿಯನ್ನು ಪೂರ್ಣಗೊಳಿಸಿ, ಕುಡಿಯುವ ನೀರಿನ ಸಮಸ್ಯೆ ಬರದಂತೆ ನೋಡಿಕೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ನರೇಗಾ ಯೋಜನೆಯಡಿ ಹಲವು ವೈಯಕ್ತಿಕ ಸೌಲಭ್ಯಗಳಿದ್ದು ಸದುಪಯೋಗಪಡಿಸಿಕೊಳ್ಳಲು ಜನರಿಗೆ ಮಾಹಿತಿ ನೀಡಿ ಎಂದು ನರೇಗಾ ತಾಂತ್ರಿಕ ಸಹಾಯಕ ಅಭಿಯಂತರಿಗೆ ತಿಳಿಸಿದರು.
ಸಭೆಯಲ್ಲಿ ವಿರಾಜಪೇಟೆ ತಾ.ಪಂ.ಇಒ ಕೆ.ಸಿ.ಅಪ್ಪಣ್ಣ, ವಿವಿಧ ಇಲಾಖೆಗಳ ಅಧಿಕಾರಿಗಳು, ನರೇಗಾ ತಾಂತ್ರಿಕ ಸಹಾಯಕ ಅಭಿಯಂತರರು ಹಾಗೂ ಇತರರು ಉಪಸ್ಥಿತರಿದ್ದರು.







