ಮಡಿಕೇರಿ ಜು.22 : ಮಣಿಪುರದಲ್ಲಿ ನಡೆದಿರುವ ಮಹಿಳೆಯರ ಮೇಲಿನ ಅತ್ಯಾಚಾರ ಮತ್ತು ಬೆತ್ತಲೆ ಮೆರವಣಿಗೆ ಖಂಡಿಸಿ ವಿಮೆನ್ ಇಂಡಿಯಾ ಮೂಮೆಂಟ್ ಕೊಡಗು ಘಟಕ ನಗರದಲ್ಲಿ ಪ್ರತಿಭಟನೆ ನಡೆಸಿತು.
ನಗರದ ಇಂದಿರಾಗಾಂಧಿ ವೃತ್ತದಲ್ಲಿ ಜಮಾಯಿಸಿ ಸಂಘಟನೆಯ ಕಾರ್ಯಕರ್ತರು ಕೇಂದ್ರ ಹಾಗೂ ಮಣಿಪುರದ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದರ್ಭ ಮಾತನಾಡಿದ ರಾಜ್ಯ ಪ್ರಧಾನ ಕಾರ್ಯದರ್ಶಿ ತನುಜಾವತಿ ಮಾತನಾಡಿ, ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವು ವಿಶ್ವವೇ ತಲೆತಗ್ಗಿಸುವಂತ ಕೃತ್ಯವಾಗಿದೆ. ಘಟನೆ ನಡೆದು ತಿಂಗಳುಗಳೇ ಕಳೆದರು ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿರುವುದು ಖಂಡನೀಯ ಎಂದರು.
ದೇಶದ ಹೃದಯ ಭಾಗವಾಗಿರುವ ರಾಜಧಾನಿಯಲ್ಲಿ ಮಹಿಳಾ ಕ್ರೀಡಾಪಟುಗಳು ನ್ಯಾಯಕ್ಕಾಗಿ ಮೊರೆಯಿಡುತ್ತಿರಬೇಕಾದರೆ ಪ್ರಧಾನಿ ಮೌನ ವಹಿಸಿದ್ದರು, ಬಿಲ್ಕೀಸ್ ಬಾನು ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾದವರನ್ನು “ಸನ್ನಡತೆ” ಹೆಸರಿನಲ್ಲಿ ಬಿಡುಗಡೆಗೊಳಿಸಲಾಗಿತ್ತು ಇದು ದುಷ್ಕರ್ಮಿಗಳಿಗೆ ಆಡಳಿತಾತ್ಮಕ ಧೈರ್ಯ ನೀಡಿದಂತಾಗಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶದ ಮಾನ ಹರಾಜು ಆಗುತ್ತಿದೆ ಎಂದು ಆರೋಪಿಸಿದರು.
ಈ ಘಟನೆಯನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿರುವ ಅಲ್ಲಿನ ಸರ್ಕಾರವನ್ನು ವಜಾಗೊಳಿಸಿ ರಾಷ್ಟಪತಿ ಆಡಳಿತವನ್ನು ನಡೆಸಬೇಕು ಎಂದು ಆಗ್ರಹಿಸಿದರು.
ರಾಜ್ಯ ಸಮಿತಿ ಸದಸ್ಯೆ ಮೇರಿ ವೆಗಸ್, ಪದಾಧಿಕಾರಿಗಳಾದ ಸೆಲಿಕತ್, ಸೌದ, ಅಜ್ಮಿಲಾ, ಸಂಶುನ್ನೀಸ, ಜೆಸಿಲಾ, ತಾಹಿರಾ, ಪೌಜಿಯಾ ಸೇರಿದಂತೆ ಮತ್ತಿತರ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.







