ಮಡಿಕೇರಿ ಜು.23 : ಚಿನ್ನಾಭರಣ ಕಳ್ಳತನ ಮಾಡಿದ ಆರೋಪದಡಿ ಮಹಿಳೆಯೊಬ್ಬರನ್ನು ಸೋಮವಾರಪೇಟೆ ಪೊಲೀಸರು ಬಂಧಿಸಿದ್ದಾರೆ.
ಕರ್ಕಳ್ಳಿ ಗ್ರಾಮದ ನಿವಾಸಿ ಜಯಂತಿ ಬಂಧಿತ ಆರೋಪಿಯಾಗಿದ್ದು, ಇವರಿಂದ 120 ಗ್ರಾಂ ನಷ್ಟು ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಸೋಮವಾರಪೇಟೆ ಜೂನಿಯರ್ ಕಾಲೇಜು ರಸ್ತೆಯ ಕೆ.ರಾಜೀವನ್ ಎಂಬುವವರ ಮನೆ ಕೆಲಸ ಮಾಡುತ್ತಿದ್ದ ಜಯಂತಿ, ಮಾಲೀಕರ ಮನೆಯಲ್ಲೇ ಕಳ್ಳತನ ಮಾಡಿದ್ದಳು ಎಂದು ಆರೋಪಿಸಲಾಗಿದೆ. ಈ ಬಗ್ಗೆ ಠಾಣೆಯಲ್ಲಿ ದೂರು ದಾಖಲಾಗಿ ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಚಿನ್ನಾಭರಣ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಳು.
ಆರೋಪಿ ಜಯಂತಿಯನ್ನು ಬಂಧಿಸಿದ ಪೊಲೀಸರು, ಮಾರಾಟ ಮಾಡಿದ್ದ ಚಿನ್ನಾಭರಣವನ್ನು ವಶಪಡಿಸಿಕೊಂಡರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಎಎಸ್ಪಿ ಸುಂದರ್ ರಾಜ್ ಅವರ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಗಂಗಾಧರಪ್ಪ ನೇತೃತ್ವದಲ್ಲಿ, ಇನ್ಸ್ಪೆಕ್ಟರ್ ರಾಮಚಂದ್ರ ನಾಯಕ್, ಪಿಎಸ್ಐಗಳಾದ ರಮೇಶ್, ವಿರೂಪಾಕ್ಷ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.








