ಮಡಿಕೇರಿ ಆ.9 : ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದಲ್ಲಿ ಪರಮಾಣು ಜ್ಯೋತಿ ಕಾರ್ಯಕ್ರಮ ನಡೆಯಿತು.
ಮುಂಬಯಿ ಬಾಬಾ ಅಣುಶಕ್ತಿ ಸಂಶೋಧನಾ ಕೇಂದ್ರ(ಬಾರ್ಕ್) ಇಲ್ಲಿಂದ ಬಂದ ಪರಮಾಣು ವಿಜ್ಞಾನಿಗಳಾದ ಜಸರಾಜ್ ವೈಷ್ಣವ ಮತ್ತು ಊರ್ವಶಿ ಕರ್ನಾಣಿ ಗೋರ್ ಇವರುಗಳು ವಿದ್ಯಾಲಯದ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು.
ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ವಿಜ್ಞಾನಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಿ ತಮ್ಮ ಅನುಮಾನಗಳನ್ನು ಪರಿಹರಿಸಿಕೊಂಡರು.
ಆಗಮಿಸಿದ ಅತಿಥಿಗಳು ವಿದ್ಯಾರ್ಥಿಗಳಿಗಾಗಿ ವಿಜ್ಞಾನ ರಸಪ್ರಶ್ನೆಗಳನ್ನು ನಡೆಸಿ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಿದರು. ವಿಜ್ಞಾನಿಗಳು ವಿದ್ಯಾರ್ಥಿಗಳ ಜೊತೆ ನೇರ ಸಂವಾದ ನಡೆಸಿದರು. ವಿದ್ಯಾರ್ಥಿಗಳಿಗೆ ಮೂಲ ವಿಜ್ಞಾನದಲ್ಲಿ ವಿಶೇಷವಾಗಿ ಪರಮಾಣು ವಿಜ್ಞಾನದಲ್ಲಿ ಆಸಕ್ತಿ ಹೆಚ್ಚುವ ಹಾಗೆ ಮಾಡಿದರು. ಕಾರ್ಯಕ್ರಮದಲ್ಲಿ ವಿದ್ಯಾಲಯದ ಪ್ರಾಂಶುಪಾಲರಾದ ಪಂಕಜಾಕ್ಷನ್ ಹಾಗೂ ವಿಜ್ಞಾನ ಶಿಕ್ಷಕರು ಹಾಜರಿದ್ದರು.
ಆಗಮಿಸಿದ ಅತಿಥಿಗಳು ವಿದ್ಯಾಲಯದ ಚಟುವಟಿಕೆಗಳನ್ನು ವೀಕ್ಷಿಸಿದರು. ನಂತರ ವಿದ್ಯಾರ್ಥಿಗಳ ಹಾಸ್ಟೇಲ್ಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಪ್ರಾಚಾರ್ಯರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಸಂಭ್ರಮಿಸಿದ ವಿಜ್ಞಾನಿಗಳಿಗೆ ವಿದ್ಯಾಲಯದ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಪರವಾಗಿ ವಂದಿಸಿದರು.







