ಮಡಿಕೇರಿ ಆ.11 : ನಗರದ ತಹಶೀಲ್ದಾರ್ ಅವರ ಕಚೇರಿಯ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಠಾಣೆ ಮಡಿಕೇರಿ ವತಿಯಿಂದ ಸಾರ್ವಜನಿಕರ ದೂರು ಸ್ವೀಕಾರ ಮತ್ತು ಕುಂದುಕೊರತೆ ಸಭೆ ನಡೆಯಿತು.
ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಎಂ.ಎಸ್.ಪವನ್ ಕುಮಾರ್ ಸಭೆಯಲ್ಲಿ ಪಾಲ್ಗೊಂಡು ತಾಲ್ಲೂಕು ಮಟ್ಟದ ಸರ್ಕಾರಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿ, ಸರ್ಕಾರಿ ಅಧಿಕಾರಿಗಳು ತಮ್ಮ ಕಚೇರಿಯಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಕಡ್ಡಾಯವಾಗಿ ಹಾಜರಾತಿ ಪುಸ್ತಕ, ಬಯೋಮೆಟ್ರಿಕ್ ವ್ಯವಸ್ಥೆ, ಚಲನವಲನ ರಿಜಿಸ್ಟರ್, ನಗದು ಘೋಷನಾ ರಿಜಿಸ್ಟರ್ನ್ನು ನಿರ್ವಹಿಸಬೇಕು ಹಾಗೂ ಇದರ ನಿರ್ವಹಣೆಯನ್ನು ಖುದ್ದು ಅಧಿಕಾರಿಗಳೇ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಸರ್ಕಾರಿ ಅಧಿಕಾರಿ ಮತ್ತು ಸಿಬ್ಬಂದಿಗಳು ಯಾವುದೇ ಲಂಚ ಮತ್ತು ಇತರೆ ಆಮೀಷಗಳಿಗೆ ಒಳಗಾಗದೆ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕರನ್ನು ವಿನಾ ಕಾರಣ ಸತಾಯಿಸದೆ ಕಾನೂನು ರೀತಿಯಲ್ಲಿ ಕೆಲಸ ಮಾಡಿಕೊಡುವಂತೆ ಸೂಚಿಸಿದರು.
ಸಭೆಯಲ್ಲಿ ಸಾರ್ವಜನಿಕರಿಂದ 15 ಅರ್ಜಿಗಳು ಸ್ವೀಕೃತವಾಗಿದ್ದು, ಇವುಗಳನ್ನು ಪರಿಶೀಲಿಸಿ 3 ಅರ್ಜಿದಾರರಿಗೆ ಲೋಕಾಯುಕ್ತ ಸಂಸ್ಥೆಯ ಫಾರಂ 1 ಮತ್ತು 2 ನ್ನು ನೀಡಲಾಯಿತು. ಉಳಿದಂತೆ 12 ಅರ್ಜಿಗಳಿಗೆ ಸಂಬಂಧಿಸಿದಂತೆ ಸಭೆಯಲ್ಲಿ ಹಾಜರಿದ್ದ ತಹಶೀಲ್ದಾರ್, ಸರ್ವೇ ಇಲಾಖೆ, ತಾಲ್ಲೂಕು ಪಂಚಾಯಿತಿ, ಅರಣ್ಯ ಇಲಾಖೆ, ಪಿಡಬ್ಲ್ಯುಡಿ ಇಲಾಖೆ, ಜಿಲ್ಲಾ ಖಜಾನೆ, ನಗರಸಭೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಮಕ್ಷಮದಲ್ಲಿ ಅರ್ಜಿಯನ್ನು ವಿಚಾರಣೆ ಮಾಡಿ ಸಭೆಯಲ್ಲಿಯೇ ವಿಲೇವಾರಿ ಮಾಡಲಾಯಿತು.







