ಮಡಿಕೇರಿ ಆ.12 : ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ವತಿಯಿಂದ ಸ್ವಾವಲಂಬಿ ಬದುಕಿನ ಗ್ಯಾರಂಟಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಆ.14ರಂದು ಧರಣಿ ಸತ್ಯಾಗ್ರಹ ನಡೆಯಲಿದೆ ಎಂದು ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಡಿ.ಎಸ್.ನಿರ್ವಾಣಪ್ಪ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಜಿಲ್ಲೆಗಳ ಸಾವಿರಾರು ಮಂದಿ ಭೂಮಿ-ವಸತಿ ವಂಚಿತ ಬಡ ಜನರು ಈ ಸತ್ಯಾಗ್ರಹದಲ್ಲಿ ಭಾಗವಹಿಸಲಿದ್ದಾರೆ ಎಂದರು.
ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಬಡ ಜನರಿಗೆ ನೀಡಿರುವ ಐದು ಗ್ಯಾರಂಟಿಗಳ ಬದಲು ಸ್ವಾವಲಂಬಿ ಬದುಕಿನ ಗ್ಯಾರಂಟಿ ನೀಡಬೇಕಿತ್ತು. ಕಳೆದ ಹಲವು ವರ್ಷಗಳಿಂದ ಭೂಮಿಯ ಹಕ್ಕುಪತ್ರಕ್ಕಾಗಿ ಧ್ವನಿ ಎತ್ತುತ್ತಿದ್ದರೂ ಚುನಾವಣೆ ಸಂದರ್ಭದಲ್ಲಿ ಭರವಸೆ ಮಾತ್ರ ನೀಡಿ ಆಡಳಿತಕ್ಕೆ ಬಂದ ನಂತರ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿದರು.
ಆದಿವಾಸಿಗಳನ್ನು ಲೈನ್ಮನೆಗಳಿಂದ ಬಿಡುಗಡೆಗೊಳಿಸಿ ಸ್ವಂತ ಸೂರು, ಕೃಷಿ ಭೂಮಿ ನೀಡಬೇಕು, ಬ್ಯಾಡಗೊಟ್ಟ ಮತ್ತು ಬಡವನಹಳ್ಳಿ ಪುನರ್ವಸತಿ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳನ್ನು ನೀಡಬೇಕು. ಸ್ಲಂ ನಿವಾಸಿಗಳಿಗೆ ಮನೆಗಳ ಹಕ್ಕುಪತ್ರ ನೀಡಬೇಕು. ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಭೂ ಮಂಜೂರಾತಿ ಸಮಿತಿ ರಚಿಸಬೇಕು. ಸಮಿತಿಗಳಲ್ಲಿ ಭೂಮಿ-ವಸತಿ ಹೋರಾಟದ ಒಬ್ಬ ಪ್ರತಿನಿಧಿ ಇರಬೇಕು. ಯಾವುದೇ ಸರ್ಕಾರಿ ಅಥವಾ ಅರಣ್ಯ ಭೂಮಿಯಲ್ಲಿ 5 ಎಕರೆಗಿಂತ ಕಡಿಮೆ ಸಾಗುವಳಿ ಇಲ್ಲವೇ ಒತ್ತುವರಿ ಮಾಡಿಕೊಂಡಿರುವ ಅರ್ಜಿದಾರರನ್ನು ಪರ್ಯಾಯ ವ್ಯವಸ್ಥೆ ನೀಡದೆ ತೆರವುಗೊಳಿಸಬಾರದು.
ಶ್ರೀಮಂತರು ಮಾಡಿರುವ ಒತ್ತುವರಿಯನ್ನು ತೆರವುಗೊಳಿಸಿ ಭೂ ರಹಿತರಿಗೆ ಹಂಚಬೇಕು ಎಂದು ನಿರ್ವಾಣಪ್ಪ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಹೋರಾಟಗಾರ್ತಿ ಅನಿತ, ಸಮಿತಿ ಸದಸ್ಯರಾದ ಎಚ್.ಜೆ.ಪ್ರಕಾಶ್ ಹಾಗೂ ಹೆಚ್.ಹೆಚ್.ತನುಜಾವತಿ ಉಪಸ್ಥಿತರಿದ್ದರು.







