ಮಡಿಕೇರಿ ಆ.24 : ಕಾರ್ಮಿಕ ಇಲಾಖೆಯಲ್ಲಿ ನೈಜ ಕಾರ್ಮಿಕರನ್ನು ಮಾತ್ರ ನೋಂದಾಯಿಸಿಕೊಳ್ಳಬೇಕು, ಪ್ರಸ್ತುತ ಇರುವ ‘ಬೋಗಸ್’ ಕಾರ್ಡ್ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಸೇರಿದಂತೆ ವಿವಿಧ 18 ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ನ ಕೊಡಗು ಜಿಲ್ಲಾ ಘಟಕ ನಗರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ಸಿಐಟಿಯು ಸಂಯೋಜಿತ ಕಾರ್ಮಿಕ ಸಂಘಟನೆಯ ಜಿಲ್ಲಾಧ್ಯಕ್ಷ ಎ.ಸಿ.ಸಾಬು ಹಾಗೂ ಸಿಐಟಿಯು ಜಿಲ್ಲಾ ಖಜಾಂಚಿ ಎನ್.ಡಿ.ಕುಟ್ಟಪ್ಪ ಅವರ ನೇತೃತ್ವದಲ್ಲಿ ಜಿಲ್ಲೆಯ ವಿವಿಧೆಡೆಯ ಕಾರ್ಮಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಘೋಷಣೆಗಳನ್ನು ಕೂಗಿದರು.
ಜಿಲ್ಲಾಧ್ಯಕ್ಷ ಎ.ಸಿ.ಸಾಬು ಮಾತನಾಡಿ, ದೇಶವ್ಯಾಪಿ ಕಾರ್ಮಿಕ ಸಂಘಟನೆಗಳು ತಮ್ಮ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದು, ಬೋಗಸ್ ಕಾರ್ಡ್ಗಳ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು.
ಕಾರ್ಮಿಕ ಕಾರ್ಡ್ಗಳ ವಿತರಣೆ ಮತ್ತು ನೋಂದಣಿ ಸಂದರ್ಭ ಕಾರ್ಮಿಕ ವರ್ಗಕ್ಕೆ ಒಳಪಡದವರಿಗು ಗ್ರಾಮ ಒನ್, ಸೇವಾಸಿಂಧು ಕೇಂದ್ರಗಳಲ್ಲಿ ಕಾರ್ಡ್ ನೀಡಲಾಗಿದೆ ಎಂದು ಆರೋಪಿಸಿದರು.
ಅರ್ಹ ಕಾರ್ಮಿಕರಿಗೆ ಮಾತ್ರ ಕಾರ್ಡ್ಗಳು ದೊರಕುವಂತೆ ಮಾಡಬೇಕು, ಗ್ರಾಮ ಒನ್ ಮತ್ತು ಸೇವಾಸಿಂಧುವಿನಲ್ಲಿ ನಡೆಯುವ ನೋಂದಣಿ, ನವೀಕರಣವನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
::: ಬೇಡಿಕೆಗಳು :::
2021-22 ನೇ ಸಾಲಿನ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಅರ್ಜಿಗಳಿಗೆ ಕೂಡಲೆ ಹಣ ಒದಗಿಸಬೇಕು, ಕಾರ್ಮಿಕ ಕಾರ್ಡ್ ನವೀಕರಣಕ್ಕೆ ವೇತನ ಚೀಟಿ ಮತ್ತು ಹಾಜರಾತಿ ಪಟ್ಟಿ ಕಡ್ಡಾಯ ಆದೇಶವನ್ನು ಹಿಂದಕ್ಕೆ ಪಡೆಯಬೇಕು, ರಾಜ್ಯ ಸರ್ಕಾರದ ಆರೋಗ್ಯ ಸಂಜೀವಿನಿ ಯೋಜನೆಯನ್ನು ಕಟ್ಟಡ ಕಾರ್ಮಿರ್ಕರು ಮತ್ತು ಅವರ ಕುಟುಂಬಕ್ಕೆ ವಿಸ್ತರಿಸಬೇಕು, ಜೀವಿತಾವಧಿ ಪ್ರಮಾಣಪತ್ರವನ್ನು ಕಂದಾಯ ಇಲಾಖೆಯ ಬದಲಾಗಿ ಕಾರ್ಮಿಕ ಇಲಾಖೆಯೇ ನೀಡಬೇಕು.
ಕಾರ್ಮಿಕ ಮಂಡಳಿಯಿಂದ ಆರಂಭಿಸಲಾದ ಶಿಶು ವಿಹಾರ ಹಾಗೂ ಮೊಬೈಲ್ ಕ್ಲಿನಿಕ್ಗಳು, ವಿವಿಧ ಕಿಟ್ಗಳ ವಿತರಣೆ, ಬಸ್ ಪಾಸ್ಗಳನ್ನು ನಿಲ್ಲಿಸುವ ಮೂಲಕ ಕಟ್ಟಡ ಕಾರ್ಮಿಕ ಕಲ್ಯಾಣ ನಿಧಿಯ ದುರ್ಬಳಕೆ ನಿಲ್ಲಿಸಬೇಕು, ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ಸಹಾಯಧನ ಒದಗಿಸಬೇಕು, ನಿರ್ಮಾಣ ಕಾರ್ಮಿಕರಿಗೆ ಭವಿಷ್ಯ ನಿಧಿ ಯೋಜನೆ ಜಾರಿಗೆ ತರಬೇಕು, ಮಂಡಳಿ ಹಾಗೂ ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಒತ್ತಾಯಿಸಿರುವ ಮನವಿ ಪತ್ರವನ್ನು ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸಿದರು.
ಕಟ್ಟಡ ಕಾರ್ಮಿಕ ಸಂಘಟನೆಯ ಪದಾಧಿಕಾರಿಗಳಾದ ಕೆ.ಕೆ.ಹರಿದಾಸ್, ಸುರೇಶ್, ಪದ್ಮಿನಿ ಸೇರಿದಂತೆ ಹಲವು ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.








