ಮಡಿಕೇರಿ ಆ.28 : ಜಿಲ್ಲೆಯಲ್ಲಿ ಯಾವ ಗ್ರಾಮಗಳಲ್ಲಿಯೂ ಸಹ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಗಮನಹರಿಸುವಂತೆ ತಾ.ಪಂ.ಇಒಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಸೂಚಿಸಿದ್ದಾರೆ.
ಕುಡಿಯುವ ನೀರನ್ನು ಸಮರ್ಪಕವಾಗಿ ಪೂರೈಸಬೇಕು. ಯಾವುದೇ ಕಾರಣಕ್ಕೂ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಬಾರದು ಎಂದರು.
ತಾ.ಪಂ.ಇಒಗಳಾದ ಶೇಖರ್, ಜಯಣ್ಣ, ಅಪ್ಪಣ್ಣ ಅವರು ಕುಡಿಯುವ ನೀರು ಸಂಬಂಧಿಸಿದಂತೆ ಮಾಹಿತಿ ನೀಡಿದರು.
ಗ್ರಾಮೀಣ ಜನರಿಗೆ ಆರೋಗ್ಯ ಸೇವೆಗಳು ಸಮರ್ಪಕವಾಗಿ ತಲುಪಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.
ಇತ್ತೀಚೆಗೆ ಕಂದಾಯ ಸಚಿವರು ಕೊಡಗು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ 94ಸಿ ಮತ್ತು 94ಸಿಸಿ ಅರ್ಜಿಗಳ ವಿಲೇವಾರಿ ಸಂಬಂಧ ತ್ವರಿತ ವಿಲೇವಾರಿ ಮಾಡಲು ಸೂಚಿಸಿದರು. ಅದರಂತೆ ವಿಲೇವಾರಿ ಮಾಡಲಾಗಿದೆಯೇ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್ ಅವರು 94ಸಿ ಮತ್ತು 94 ಸಿಸಿ ಅರ್ಜಿಗಳ ವಿಲೇವಾರಿ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.
ಭೂ ದಾಖಲೆಗಳ ಉಪ ನಿರ್ದೇಶಕ ಪಿ.ಶ್ರೀನಿವಾಸ್ ಪೊನ್ನಂಪೇಟೆಯಲ್ಲಿ ಶೇ.60ರಷ್ಟು ಅರ್ಜಿಗಳ ವಿಲೇವಾರಿಯಾಗಿದೆ. ಮಡಿಕೇರಿಯಲ್ಲಿ 50 ಅರ್ಜಿಗಳು ಬಾಕಿ ಇದ್ದು, ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಶಾಸಕರಾದ ಡಾ.ಮಂತರ್ ಗೌಡ ಅವರು ಮರಗೋಡು ಗ್ರಾಮದಲ್ಲಿ 66 ಕೆ.ವಿ. ವಿದ್ಯುತ್ ಘಟಕ ನಿರ್ಮಾಣ ಸಂಬಂಧ ಜಾಗವನ್ನು ತ್ವರಿತವಾಗಿ ಒದಗಿಸುವಂತೆ ತಹಶೀಲ್ದಾರರಿಗೆ ಸೂಚಿಸಿದರು.
ಈ ಬಗ್ಗೆ ಮಾಹಿತಿ ನೀಡಿದ ತಹಶೀಲ್ದಾರ್ ಪ್ರವೀಣ್ ಕುಮಾರ್ ಜಾಗ ಸಂಬಂಧಿಸಿದಂತೆ ಸ್ಥಳೀಯರ ಜೊತೆ ಚರ್ಚಿಸಲಾಗಿದೆ ಎಂದು ಮಾಹಿತಿ ನೀಡಿದರು.








