ಮಡಿಕೇರಿ ಆ.31 : ಕೊಡಗು ಜಿಲ್ಲೆಯ ಹಿಂದುಳಿದ ವರ್ಗಗಳ ಅರ್ಹ ಕಾನೂನು ಪದವೀಧರರಿಗೆ 2023-24 ನೇ ಸಾಲಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಕಾನೂನು ತರಬೇತಿ ಪಡೆಯಲು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರ.ವರ್ಗ-1 ಮತ್ತು ಪ್ರ.ವರ್ಗ-2ಎ, 3ಎ, 3ಬಿ ಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯದ ಮಿತಿ ಪ್ರ.ವರ್ಗ-1 ರ ಅಭ್ಯರ್ಥಿಗಳಿಗೆ ರೂ.3.50 ಲಕ್ಷ ಹಾಗೂ ಪ್ರ.ವರ್ಗ-2ಎ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ.2.50 ಲಕ್ಷ ಒಳಪಟ್ಟಿರಬೇಕು. ಪ್ರ.ವರ್ಗ-1 ರ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಪ್ರ.ವರ್ಗ-1 ರ ಅಭ್ಯರ್ಥಿಗಳ ಕೊರತೆ ಇದ್ದಲ್ಲಿ ಸರ್ಕಾರದ ಆದೇಶದನ್ವಯ ನಿಯಮಾನುಸಾರ ಇತರೆ ವರ್ಗದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಜಿಯನ್ನು ಸ್ವೀಕರಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕಾನೂನು ಪದವಿ ಪಡೆದ 02 ವರ್ಷದ ಒಳಗಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅರ್ಜಿದಾರರ ವಯಸ್ಸು ಪ್ರ.ವರ್ಗ-1ರ ಅಭ್ಯರ್ಥಿಗಳಿಗೆ 31 ಮತ್ತು ಪ್ರ.ವರ್ಗ-2ಎ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ 30 ವರ್ಷದ ಒಳಗಿರಬೇಕು. ಅಭ್ಯರ್ಥಿಯು ಬಾರ್ ಕೌನ್ಸಿಲ್ನಲ್ಲಿ ನೋಂದಾಯಿಸಲ್ಪಟ್ಟಿರಬೇಕು.
ಕಾನೂನು ತರಬೇತಿಯು 4 ವರ್ಷಗಳ ಅವಧಿಯಾಗಿದ್ದು, ಮಾಸಿಕ ರೂ.4 ಸಾವಿರದಂತೆ ಶಿಷ್ಯವೇತನ ನೀಡಲಾಗುವುದು. ಕಾನೂನು ತರಬೇತಿಯನ್ನು ಕೊಡಗು ಜಿಲ್ಲೆಯ ಹಿಂದುಳಿದ ವರ್ಗಗಳ 10 ಅಭ್ಯರ್ಥಿಗಳಿಗೆ ನೀಡಲು ಅವಕಾಶವಿದೆ. ಆಯ್ಕೆಯಾದ ಅಭ್ಯರ್ಥಿಯು ವಕೀಲ ತರಬೇತಿಯನ್ನು ಅರ್ಧಕ್ಕೆ ನಿಲ್ಲಿಸಿದಲ್ಲಿ, ತರಬೇತಿ ವೆಚ್ಚಕ್ಕೆ ಶೇ.10 ಬಡ್ಡಿಯನ್ನು ಸೇರಿಸಿ ಸರ್ಕಾರಕ್ಕೆ ಪಾವತಿ ಮಾಡುತ್ತೇನೆಂದು ರೂ.100 ರ ಛಾಪಾ ಕಾಗದದಲ್ಲಿ ಬರೆದುಕೊಡಬೇಕು.
ಅರ್ಜಿ ನಮೂನೆಯನ್ನು ಈ ಕಚೇರಿಯಿಂದ ಪಡೆಯಲು ಸೆಪ್ಟೆಂಬರ್, 10 ರವರೆಗೆ ಅವಧಿ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದೇವರಾಜ ಅರಸು ಭವನ, ಮ್ಯಾನ್ಸ್ ಕಾಂಪೌಂಡ್ ಹತ್ತಿರ, ಮಡಿಕೇರಿ ಇವರನ್ನು ಹಾಗೂ ದೂ.08272-295628 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎನ್.ಮಂಜುನಾಥ್ ತಿಳಿಸಿದ್ದಾರೆ.







