ಮಡಿಕೇರಿ ಸೆ.8: ಸನಾತನ ಧರ್ಮದ ಕುರಿತು ತಮಿಳುನಾಡು ಸಚಿವ ಉದಯ ಸ್ಟಾಲಿನ್ ಅವರು ನೀಡಿರುವ ಹೇಳಿಕೆಯನ್ನು ಬಿಜೆಪಿಯ ಮಾಜಿ ಶಾಸಕದ್ವಯರು ತೀವ್ರವಾಗಿ ಖಂಡಿಸಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಶಾಸಕ ಕೆ.ಜಿ.ಬೋಪಯ್ಯ, ತಮಿಳುನಾಡಿನ ಡಿಎಂಕೆ ಪಕ್ಷ ಹಿಂದೂ ಧರ್ಮವನ್ನು ಅವಹೇಳನ ಮಾಡುತ್ತಲೇ ರಾಜಕೀಯಕ್ಕೆ ಬಂದಿದೆ. ಸನಾತನ ಧರ್ಮದ ಕುರಿತ ತಮಿಳುನಾಡು ಸಚಿವ ಉದಯನಿಧಿ ಹೇಳಿಕೆ ಖಂಡನೀಯ. ರಾಜ್ಯದ ಸಚಿವರಾದ ಡಾ.ಜಿ.ಪರಮೇಶ್ವರ್ ಹಾಗೂ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯೂ ಖಂಡನಾರ್ಹವಾಗಿದ್ದು, ದೇಶದ ಸಂವಿಧಾನ ತಮಗೆ ಇಷ್ಟ ಬಂದ ಧರ್ಮವನ್ನು ಅನುಸರಿಸಲು ಅವಕಾಶ ನೀಡಿದೆ. ಆದರೆ ಮತ್ತೊಂದು ಧರ್ಮವನ್ನು ಟೀಕಿಸುವುದಕ್ಕೆ ಅವಕಾಶ ನೀಡಿಲ್ಲ. ಸಚಿವರ ಹೇಳಿಕೆ ಸಂವಿಧಾನ ವಿರೋಧಿಯಾಗಿದ್ದು, ಇವರು ಅಧಿಕಾರದಲ್ಲಿ ಮುಂದುವರೆಯುವ ಅರ್ಹತೆಯನ್ನು ಕಳೆದುಕೊಂಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
‘ಇಂಡಿಯಾ’ ಹೆಸರು ಬ್ರಿಟಿಷರ ಬಳುವಳಿಯಾಗಿದೆ. ಕೊಡಗು ಜಿಲ್ಲೆಗೆ ‘ಕೂರ್ಗ್’, ಮಡಿಕೇರಿಗೆ ‘ಮರ್ಕರಾ’ ಹೀಗೆ ಕೊಡಗಿನಲ್ಲೂ ಅನೇಕ ಊರುಗಳ ಹೆಸರು ಬದಲಾವಣೆಯಾಗಿದೆ. ಭಾರತ ಹೆಸರು ಬದಲಾವಣೆ ವಿಚಾರವಾಗಿ ವೃಥಾ ಗೊಂದಲ ಸೃಷ್ಟಿಸಲಾಗುತ್ತಿದೆ ಎಂದು ಕೆ.ಜಿ.ಬೋಪಯ್ಯ ಹೇಳಿದರು.
ಮಾಜಿ ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, ಬ್ರಿಟಿಷರು ಬಿಟ್ಟು ಹೋದ ಹೆಸರನ್ನು ಏಕೆ ಇಟ್ಟುಕೊಳ್ಳಬೇಕು. ನಾವೆಲ್ಲರೂ ‘ಭಾರತ್ ಮಾತಾ ಕೀ ಜೈ’ ಎಂದು ಸಂತೋಷದಿಂದ ಹೇಳಿಕೊಳ್ಳಬೇಕು ಎಂದು ನುಡಿದರು.
ಪ್ರಧಾನಿ ಮೋದಿ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ 350 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.








