ಮಡಿಕೇರಿ ಸೆ.29 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಡಿಕೇರಿ ತಾಲ್ಲೂಕಿನ ನೂತನ ಯೋಜನಾ ಕಛೇರಿಯನ್ನು ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್.ಹೆಚ್.ಮಂಜುನಾಥ್ ಅವರು ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು 2018-19 ನೇ ಸಾಲಿನಲ್ಲಿ ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಸಂಭವಿಸಿದಾಗ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೊಂದ ಸಾವಿರಾರು ಕುಟುಂಬಗಳ ನೆರವಿಗೆ ಬಂದು ಪರಿಹಾರ ಧನ ಒದಗಿಸಿದೆ. ಬ್ಯಾಂಕಿನಿಂದ ಪಡೆದ ಸಾಲ ಮರುಪಾವತಿಗೆ ತೊಂದರೆಯಾದ ಕುಟುಂಬಗಳಿಗೆ ನೆರವು ನೀಡಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಾಲುದಾರರು ಬ್ಯಾಂಕಿನ ವ್ಯವಹಾರವನ್ನು ಉತ್ತಮ ರೀತಿಯಲ್ಲಿ ಮಾಡಿಕೊಂಡು ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗಿದೆ ಎಂದರು.
ಯೋಜನೆಯಲ್ಲಿ ಪಾಲುದಾರ ಕುಟುಂಬಗಳಿಗೆ ಪ್ರಗತಿ ರಕ್ಷಾ ಕವಚ ವಿಮೆ, ಸಂಪೂರ್ಣ ಸುರಕ್ಷಾ ಆರೋಗ್ಯ ವಿಮೆ, ಮೈಕ್ರೋ ಬಚತ್ ವಿಮೆ, ಭೀಮಾ ಜ್ಯೋತಿ ವಿಮೆ ಮುಂತಾದ ಕಾರ್ಯಕ್ರಮಗಳ ಮೂಲಕ ನೆರವಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಯೋಜನೆಯ ವತಿಯಿಂದ ಅರ್ಹ ಫಲಾನುಭವಿಗಳಿಗೆ ವಿವಿಧ ಅನುದಾನ ವಿತರಿಸಲಾಯಿತು. ಐಡಿಬಿಐ ಬ್ಯಾಂಕ್ ವ್ಯವಸ್ಥಾಪಕ ಮಿಥುನ್ ಕೆ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾದ ಪ್ರಾದೇಶಿಕ ವ್ಯವಸ್ಥಾಪಕ ಶ್ರೀಜಿತ್, ಸಂಸ್ಥೆಯ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ, ಜಿಲ್ಲಾ ನಿರ್ದೇಶಕರಾದ ಲೀಲಾವತಿ, ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಅಭಿಮನ್ಯು ಕುಮಾರ್, ಕಚೇರಿಯ ಕಟ್ಟಡ ಮಾಲೀಕ ಗಜಾನನ, ಜಿಲ್ಲೆಯ ಎಲ್ಲಾ ಯೋಜನಾಧಿಕಾರಿಗಳು ಹಾಗೂ ಒಕ್ಕೂಟದ ಅಧ್ಯಕ್ಷರು ಉಪಸ್ಥಿತರಿದ್ದರು. ಲೋಹಿತ್ ಹೆಚ್. ನಿರೂಪಿಸಿ, ಪುರುಷೋತ್ತಮ ಎನ್. ಸ್ವಾಗತಿಸಿ, ದಿನೇಶ್ ಬಿ. ವಂದಿಸಿದರು.







