ಮಡಿಕೇರಿ ಸೆ.29 : ಕೊಡಗು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ರೈಲು ಮಾರ್ಗದ ಯೋಜನೆ ನೆನೆಗುದಿಗೆ ಬಿದ್ದಿದ್ದು, ಈ ಕುರಿತು ವಸ್ತುಸ್ಥಿತಿಯನ್ನು ಬಹಿರಂಗ ಪಡಿಸಬೇಕೆಂದು ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ರೈಲು ಮಾರ್ಗದ ಯೋಜನೆಯ ಪ್ರಕ್ರಿಯೆ ಯಾವ ಹಂತದಲ್ಲಿದೆ ಎಂದು ಕೇಂದ್ರ ಸರ್ಕಾರದ ಬಳಿ ಪತ್ರದ ಮೂಲಕ ಹಲವು ಬಾರಿ ಮಾಹಿತಿ ಬಯಸಿದ್ದರೂ ಇಲ್ಲಿಯವರೆಗೆ ಯಾವುದೇ ರೀತಿಯ ಉತ್ತರ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಸಂಸತ್ ಅಧಿವೇಶನದಲ್ಲಿ ಕೊಡಗು ರೈಲು ಮಾರ್ಗದ ಕುರಿತು ರೈಲ್ವೆ ಸಚಿವರಿಂದ ವಿವರ ಪಡೆಯಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯಸಭಾ ಸದಸ್ಯರಾದ ರಾಘವ್ ಚಡ್ಡಾ ಹಾಗೂ ಸಂಜಯ್ ಸಿಂಗ್ ಅವರ ಬಳಿ ಮನವಿ ಮಾಡಿ ಪತ್ರ ಬರೆದಿರುವುದಾಗಿ ಭೋಜಣ್ಣ ಸೋಮಯ್ಯ ತಿಳಿಸಿದ್ದಾರೆ.









