ಕೂಡಿಗೆ ಅ.9 : ಉತ್ತರ ಕೊಡಗಿನ ಕೂಡಿಗೆಯ ಸರ್ಕಾರಿ ಕ್ರೀಡಾಶಾಲೆಯ ಹಾಕಿ ಟರ್ಫ್ ಮೈದಾನದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕರು ಮತ್ತು ಬಾಲಕಿಯರ ಎರಡು ದಿನಗಳ ರಾಜ್ಯಮಟ್ಟದ ಮಕ್ಕಳ ಹಾಕಿ ಪಂದ್ಯಾವಳಿ ಆರಂಭಗೊಂಡಿತು.
ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ( ಡಯಟ್ ) ಯ ಉಪ ನಿರ್ದೇಶಕ ಹಾಗೂ ಸಂಸ್ಥೆಯ ಪ್ರಾಂಶುಪಾಲ ಎಂ.ಚಂದ್ರಕಾಂತ್ ಕ್ರೀಡಾ ಧ್ವಜಾರೋಹಣ ನೆರವೇರಿಸುವ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಕ್ರೀಡೆಯು ನಮ್ಮ ದೈಹಿಕ ದೃಢತೆ ಮತ್ತು ಮಾನಸಿಕ ಆರೋಗ್ಯ ಸ್ವಾಸ್ಥ್ಯ ಕಾಪಾಡುವುದರೊಂದಿಗೆ ಶಿಸ್ತಿನ ಜೀವನ ಮತ್ತು ಉತ್ತಮ ಬದುಕನ್ನು ರೂಪಿಸಲು ಸಹಕಾರಿಯಾಗಿವೆ ಎಂದರು.
ಕೊಡಗಿನಲ್ಲಿ ಹಾಕಿ ಕ್ರೀಡೆಗೆ ನೀಡುತ್ತಿರುವ ಪ್ರೋತ್ಸಾಹದಿಂದ ಜಿಲ್ಲೆಯ ಕ್ರೀಡಾಪಟುಗಳು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಹಾಕಿ ಟೂರ್ನಿಯಲ್ಲಿ ಉತ್ತಮ ಹೆಸರು ಗಳಿಸಿದ್ದಾರೆ. ಪ್ರತಿಯೊಬ್ಬರೂ ಇಂತಹ ಕ್ರೀಡಾಕೂಟಗಳಿಗೆ ಹೆಚ್ಚಿನ ಸಹಕಾರ ನೀಡುವ ಮೂಲಕ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಬೇಕು ಎಂದರು.
ಏಷ್ಯನ್ ಕ್ರೀಡಾಕೂಟದಲ್ಲಿ ಚೀನಾ ಮತ್ತು ಜಪಾನ್ ಮಾದರಿಯಲ್ಲಿ ಭಾರತದ ಕ್ರೀಡಾಳುಗಳಿಗೂ ಹೆಚ್ಚಿನ ಪ್ರೋತ್ಸಾಹ ನೀಡುವ ಮೂಲಕ ಕ್ರೀಡಾಪಟುಗಳು ಅಂತರಾಷ್ಟ್ರೀಯ ಕ್ರೀಡೆಯಲ್ಲಿ ಮತ್ತಷ್ಟು ಉತ್ತಮ ಸಾಧನೆ ಮಾಡಲು ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಚಂದ್ರಕಾಂತ್ ಹೇಳಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕೂಡುಮಂಗಳೂರು ಗ್ರಾ.ಪಂ ಅಧ್ಯಕ್ಷ ಡಿ.ಭಾಸ್ಕರ್ ನಾಯಕ್, ಸೈನಿಕರು ಮತ್ತು ಕ್ರೀಡೆಯ ತವರು ಜಿಲ್ಲೆಯಾದ ಕೊಡಗಿನಲ್ಲಿ ಹಾಕಿ ಪಂದ್ಯಾವಳಿಗೆ ಹೆಚ್ಚಿನ ಪ್ರೋತ್ಸಾಹ ದೊರಕುತ್ತಿದೆ. ಜಿಲ್ಲೆಯಲ್ಲಿ ಕೊಡವ ಹಾಕಿ ಉತ್ಸವ ಸೇರಿದಂತೆ ವಿವಿಧೆಡೆ ಹಾಕಿ ಪಂದ್ಯಾವಳಿ ನಿರಂತರವಾಗಿ ನಡೆಯುತ್ತಿರುವುದು ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಕ್ರೀಡಾಳುಗಳು ಮತ್ತು ಕ್ರೀಡಾಕೂಟಗಳಿಗೆ ಎಲ್ಲರೂ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದರು.
ಪಥ ಸಂಚಲನದಲ್ಲಿ ಗೌರವ ವಂದನೆ ಸ್ವೀಕರಿಸಿದ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ(ಆಡಳಿತ) ಸೌಮ್ಯ ಪೊನ್ನಪ್ಪ, ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.
ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ( ಪ್ರಭಾರಿ) ಡಾ.ಸದಾಶಿವಯ್ಯ ಎಸ್.ಪಲ್ಲೇದ್ ಮಾತನಾಡಿ, ಶಿಕ್ಷಣ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಡಿಸೆಂಬರ್ ವೇಳೆಗೆ ನಡೆಯಲಿರುವ ರಾಷ್ಟ್ರೀಯ ಬಾಲಕಿಯರ ಹಾಕಿ ಟೂರ್ನಿಗೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್ ಮಾತನಾಡಿ, ಹಾಕಿಯ ತವರಾದ ಕೊಡಗಿನಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಕ್ರೀಡಾಭಿಮಾನಿಗಳು ಭಾಗವಹಿಸಿ ಮಕ್ಕಳ ಕ್ರೀಡೆಗೆ ಪ್ರೋತ್ಸಾಹಿಸಬೇಕು ಎಂದರು.
ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ವಿ.ಮಂಜೇಶ್, ವಿದ್ಯಾರ್ಥಿಗಳಿಂದ ಕ್ರೀಡಾಜ್ಯೋತಿ ಸ್ವೀಕರಿಸಿದರು.
ಡಿಡಿಪಿಐ ಕಛೇರಿಯ ಶಿಕ್ಷಣಾಧಿಕಾರಿ ಮಹದೇವಸ್ವಾಮಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಚ್.ಕೆ.ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಚ್.ಎನ್.ಮಂಜುನಾಥ್, ತಾಲ್ಲೂಕು ಘಟಕದ ಅಧ್ಯಕ್ಷ ಟಿ.ಕೆ.ಬಸವರಾಜ್, ಜಿಲ್ಲಾ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ಎ. ಪ್ರವೀಣ್, ಜಿಲ್ಲಾ ವೃತ್ತಿ ಶಿಕ್ಷಕರ ಸಂಘದ ಅಧ್ಯಕ್ಷ ಎ.ಪಿ. ಸೋಮಯ್ಯ, ಕೂಡಿಗೆ ಸರ್ಕಾರಿ ಕ್ರೀಡಾಶಾಲೆಯ ಮುಖ್ಯ ಶಿಕ್ಷಕ ಬಿ.ಟಿ.ದೇವಕುಮಾರ್, ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಬಿ.ಆರ್. ಗಾಯಿತ್ರಿ, ಎಂ.ಎಲ್.ಸುಕುಮಾರಿ, ವಿವಿಧ ದೈಹಿಕ ಶಿಕ್ಷಣ ಶಿಕ್ಷಕರ ಪ್ರಮುಖರಾದ ಎ.ಎ.ಲಕ್ಷ್ಮಣ್, ಬಿ.ಟಿ.ಪೂರ್ಣೇಶ್, ಎಚ್.ಪಿ.ಕರುಂಬಯ್ಯ, ಬಿ.ಕೆ.ಶಿವಶಂಕರ್, ಎಂ.ಎಸ್.ತಮ್ಮಯ್ಯ, ಬಿ.ಆರ್ ಪಿ.ಎಸ್.ಎನ್.ಲೋಕೇಶ್, ದೈಹಿಕ ಶಿಕ್ಷಣ ಶಿಕ್ಷಕರು ಪಾಲ್ಗೊಂಡಿದ್ದರು.
ಶಿಕ್ಷಕ ಉ.ರಾ.ನಾಗೇಶ್ ಕಾರ್ಯಕ್ರಮ ನಿರ್ವಹಿಸಿದರು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ ಸದಾಶಿವಯ್ಯ ಎಸ್.ಪಲ್ಲೇದ್ ಸ್ವಾಗತಿಸಿದರು. ತಾಲ್ಲೂಕು ಶಿಕ್ಷಣ ಪರಿವೀಕ್ಷಕಿ ಎಂ.ಎಲ್. ಸುಕುಮಾರಿ ವಂದಿಸಿದರು.







