ಮಡಿಕೇರಿ ಫೆ.9 NEWS DESK : ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರಾದ ಪವನ್ ಕುಮಾರ್ ಅವರು ನಗರದ ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ಕಂದಾಯ ನಿಗಧಿ ಸೇರಿದಂತೆ ಭೂಮಿ ದಾಖಲೆ ಮತ್ತಿತರ ಸಂಬಂಧ ಹಲವು ಅರ್ಜಿಗಳು ಸಾರ್ವಜನಿಕರಿಂದ ಸಲ್ಲಿಕೆಯಾದವು.
ಈ ಸಂದರ್ಭದಲ್ಲಿ ಮಾತನಾಡಿದ ಪವನ್ ಕುಮಾರ್ ಅವರು ಲೋಕಾಯುಕ್ತ ಅಹವಾಲು ಸ್ವೀಕಾರ ಹಾಗೂ ಕುಂದುಕೊರತೆ ಸಭೆಗೆ ಅರ್ಜಿಗಳು ಕಡಿಮೆಯಾಗುತ್ತಿದೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಸಾರ್ವಜನಿಕರಿಗೆ ಮತ್ತಷ್ಟು ಸ್ಪಂದಿಸುವಂತಾಗಬೇಕು ಎಂದರು.
ನೊಂದವರ ಅಹವಾಲು ಆಲಿಸಿದಲ್ಲಿ ಹಲವು ಸಮಸ್ಯೆಗಳನ್ನು ಇತ್ಯರ್ಥಪಡಿಸಬಹುದಾಗಿದೆ. ಆ ನಿಟ್ಟಿನಲ್ಲಿ ಕೆಲಸ ಮಾಡಿಕೊಡಬೇಕು. ತಮ್ಮ ಹಂತದಲ್ಲಿ ಕೆಲಸವಾಗದಿದ್ದಲ್ಲಿ ಹಿಂಬರಹವನ್ನಾದರೂ ನೀಡಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಗಮನಹರಿಸುದು ಮೊದಲ ಆದ್ಯತೆ ಆಗಬೇಕು. ಯಾವುದೇ ಕಾರಣಕ್ಕೂ ಪಾಪದವರನ್ನು ಅಲೆಸಬಾರದು ಎಂದು ಸೂಚಿಸಿದರು. ಲೋಕಾಯುಕ್ತ ಇನ್ಸ್ಪೆಕ್ಟರ್ ಲೋಕೇಶ್, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.







