ಮಡಿಕೇರಿ ಫೆ.21 NEWS DESK : ನಾಗರಹೊಳೆ ಅರಣ್ಯ ಪ್ರದೇಶ ವ್ಯಾಪ್ತಿಯ ಲೈನ್ ಮನೆಗಳಲ್ಲಿ ವಾಸವಿರುವ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಾಗಿದೆ ಎಂದು ಆರೋಪಿಸಿರುವ ಕರ್ನಾಟಕ ಅರಣ್ಯ ಬುಡಕಟ್ಟು ಒಕ್ಕೂಟದ ಮೈಸೂರು ಜಿಲ್ಲಾ ಪ್ರಮುಖ ಶೈಲೇಂದ್ರ ಕುಮಾರ್, ಪೊಲೀಸ್
ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಪ್ರಾಪ್ತ ಹೆಣ್ಣು ಮಕ್ಕಳನ್ನು ಪ್ರೀತಿ, ಪ್ರೇಮದ ವಿಚಾರದಲ್ಲಿ ನಂಬಿಸಿ ಮೋಸ ಮಾಡುತ್ತಿರುವ ಪ್ರಕರಣಗಳು ಮತ್ತು ಒಂಟಿಯಾಗಿರುವ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ನಡೆಸಿ, ಸಂತ್ರಸ್ತರಿಗೆ ಹಣ ಕೊಟ್ಟು ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.
ಹಣ ನೀಡಿದರೆ ಎಲ್ಲವೂ ಸಾಧ್ಯ ಎನ್ನುವ ಮನೋಸ್ಥಿತಿ ಹಲವರಲ್ಲಿದೆ. ದೌರ್ಜನ್ಯ ಪ್ರಕರಣಗಳು ನಡೆಯದಂತೆ ಪೊಲೀಸ್ ಇಲಾಖೆ ಎಚ್ಚರ ವಹಿಸಬೇಕು. ಬಾಲಕಿಯರು ಹಾಗೂ ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಆಗ್ರಹಿಸಿದರು.
ಇತ್ತೀಚೆಗೆ ದಕ್ಷಿಣ ಕೊಡಗಿನ ಗ್ರಾಮವೊಂದರಲ್ಲಿ ಅತ್ಯಾಚಾರಕ್ಕೊಳಗಾಗಿ ಆತ್ಮಹತ್ಯೆಗೊಳಗಾದ ಅಪ್ರಾಪ್ತ ಬಾಲಕಿಯ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಲು ಹೋದ ಸಂದರ್ಭ ಕೆಲವು ಪೊಲೀಸರು ಸೂಕ್ತ ರೀತಿಯಲ್ಲಿ ಸ್ಪಂದಿಸಿಲ್ಲ. ಪ್ರಕರಣವನ್ನು ತಿರುಚುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿ ಸಂತ್ರಸ್ತೆಯ ಪೋಷಕರು ಸಂಘಟನೆಗೆ ದೂರು ನೀಡಿದ್ದು, ಪ್ರಕರಣವನ್ನು ಕೂಲಂಕುಶವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶೈಲೇಂದ್ರ ಕುಮಾರ್ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಬುಡಕಟ್ಟು ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ವೈ.ಬಿ.ಗಪ್ಪು, ಸದಸ್ಯರಾದ ರಾಣಿ, ಜೆ.ಕೆ.ಪುಷ್ಪ ಹಾಗೂ ಆತ್ಮಹತ್ಯೆಗೆ ಒಳಗಾದ ಸಂತ್ರಸ್ತೆಯ ಪೋಷಕರು ಉಪಸ್ಥಿತರಿದ್ದರು.







