ಮಡಿಕೇರಿ ಮಾ.28 NEWS DESK : ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಅವರಿಗೆ ಬೆಂಬಲ ಸೂಚಿಸಿ ಕೊಡಗು ಜೆಡಿಎಸ್ ಸಾಮೂಹಿಕ ನಾಯಕತ್ವದಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಸಿ.ಎಲ್.ವಿಶ್ವ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದ ನಾಯಕರ ನಿರ್ಧಾರದಂತೆ ಕೊಡಗು ಜೆಡಿಎಸ್ ಪ್ರಮುಖರು ಹಾಗೂ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ಪರ ಮತಯಾಚಿಸಲಿದ್ದಾರೆ. ಮಾ.30 ರಂದು ಮಡಿಕೇರಿಯ ಹೊಟೇಲ್ ವ್ಯಾಲಿವ್ಯೂ ಸಭಾಂಗಣದಲ್ಲಿ ಜಿಲ್ಲಾ ಜೆಡಿಎಸ್ ಮುಂಚೂಣಿ ನಾಯಕರುಗಳ ಸಭೆ ನಡೆಯಲಿದ್ದು, ಮಾಜಿ ಸಚಿವ ಸಾ.ರಾ.ಮಹೇಶ್ ಹಾಗೂ ವಿಧಾನ ಪರಿಷತ್ ಸದಸ್ಯ, ಜೆಡಿಎಸ್ ಕೊಡಗು ಉಸ್ತುವಾರಿ ಮಂಜೇಗೌಡ ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಕೋರ್ ಕಮಿಟಿ ರಚಿಸಿ ತಾಲ್ಲೂಕು ಅಧ್ಯಕ್ಷರುಗಳಿಗೆ ಸಂಪೂರ್ಣ ಜವಾಬ್ದಾರಿ ನೀಡಲಾಗುವುದು. ಜಿಲ್ಲಾಧ್ಯಕ್ಷರು ಇಲ್ಲದ ಕಾರಣ ಸಾಮೂಹಿಕ ನಾಯಕತ್ವದಲ್ಲಿ ಚುನಾವಣಾ ಕಾರ್ಯ ನಿರ್ವಹಿಸಲಿದ್ದೇವೆ ಎಂದರು.
ಜೆಡಿಎಸ್ ನಲ್ಲಿ ಇನ್ನೂ ಕೂಡ ಪಕ್ಷ ನಿಷ್ಠ ಹಿರಿಯರು ಹಾಗೂ ಕಾರ್ಯಕರ್ತರು ಇದ್ದು, ಯದುವೀರ್ ಅವರ ಗೆಲುವಿಗೆ ಅಗತ್ಯವಿರುವ ಮತಗಳಿಕೆಯಲ್ಲಿ ಯಶಸ್ಸು ಸಾಧಿಸುತ್ತೇವೆ. ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ಕೊಡಗು ಜಿಲ್ಲೆಗೆ ಸಾಕಷ್ಟು ಕೊಡಗುಗೆಗಳನ್ನು ನೀಡಿದ್ದಾರೆ. ಅತಿವೃಷ್ಟಿ ಮತ್ತು ಭೂಕುಸಿತದ ಸಂದರ್ಭ ಏಳು ಬಾರಿ ಜಿಲ್ಲೆಗೆ ಆಗಮಿಸಿ ಸಂತ್ರಸ್ತರಿಗೆ ಧೈರ್ಯ ತುಂಬಿದ್ದಾರೆ. ಮನೆ ಕಳೆದುಕೊಂಡವರಿಗೆ 800 ಕ್ಕೂ ಅಧಿಕ ಮನೆಗಳನ್ನು ನಿರ್ಮಿಸಿಕೊಟ್ಟಿದ್ದಾರೆ. ಜಿಲ್ಲೆಗೆ ಎರಡು ನೂತನ ತಾಲ್ಲೂಕುಗಳನ್ನು ನೀಡಿದ್ದಾರೆ. ಕುಮಾರಸ್ವಾಮಿ ಅವರ ಕೊಡುಗೆ ಮತ್ತು ಪ್ರಧಾನಿ ನರೇಂದ್ರಮೋದಿ ಅವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಜನ ಯದುವೀರ್ ಅವರನ್ನು ಗೆಲ್ಲಿಸಲಿದ್ದಾರೆ ಎಂದು ವಿಶ್ವ ವಿಶ್ವಾಸ ವ್ಯಕ್ತಪಡಿಸಿದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರು ಯಾವ ಪಕ್ಷದಲ್ಲಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಇಲ್ಲವೆಂದು ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ಪಾಣತ್ತಲೆ ವಿಶ್ವನಾಥ್, ಕುಶಾಲನಗರ ತಾಲ್ಲೂಕು ಅಧ್ಯಕ್ಷ ಪಿ.ಡಿ.ರವಿಕುಮಾರ್, ವಿರಾಜಪೇಟೆ ಅಧ್ಯಕ್ಷ ಪಿ.ಎ.ಮಂಜುನಾಥ್, ಸೋಮವಾರಪೇಟೆ ಅಧ್ಯಕ್ಷ ಸಿ.ಎಸ್.ನಾಗರಾಜು ಹಾಗೂ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಕೆ.ಜಿ.ಜಾಶೀರ್ ಮೂರ್ನಾಡು ಉಪಸ್ಥಿತರಿದ್ದರು.







