
ಮಡಿಕೇರಿ ಏ.12 NEWS DESK : ಲೋಕಸಭಾ ಚುನಾವಣೆ ಹಿನ್ನೆಲೆ ಮೈಸೂರು- ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಗೌಡರ ಪರ ಮತಯಾಚಿಸಲು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಉಪಸ್ಥಿತಿಯಲ್ಲಿ ಮಡಿಕೇರಿಯಲ್ಲಿ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಭಾನುವಾರ ಬೆಳಿಗ್ಗೆ 11.30 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಭೋಸರಾಜು, ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಕೊಡಗು ಜಿಲ್ಲೆಯ ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ ಸೇರಿದಂತೆ ಹಿರಿಯ ನಾಯಕರುಗಳು ಪಾಲ್ಗೊಳ್ಳಲಿದ್ದಾರೆ ಎಂದರು.
ಈಗಾಗಲೇ ಕೊಡಗು ಜಿಲ್ಲೆಯಾದ್ಯಂತ ಕಾಂಗ್ರೆಸ್ ಪಕ್ಷದಿಂದ ಬಿರುಸಿನ ಪ್ರಚಾರ ಕಾರ್ಯ ನಡೆದಿದೆ. ಜನರಿಂದ ಎಂ.ಲಕ್ಷ್ಮಣ ಗೌಡ ಅವರ ಪರ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಐದು ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಕಾಂಗ್ರೆಸ್ ಸರಕಾರ ಹೆಚ್ಚು ಜನಪ್ರಿಯತೆಯನ್ನು ಗಳಿಸಿದ್ದು, ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತವೆಂದು ಧರ್ಮಜ ಉತ್ತಪ್ಪ ವಿಶ್ವಾಸ ವ್ಯಕ್ತಪಡಿಸಿದರು.
::: ಗ್ಯಾರಂಟಿ ಋಣ ತೀರಿಸಲಿದ್ದಾರೆ :::
ಕಾಂಗ್ರೆಸ್ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ ರಾಜ್ಯದ ಜನ ಕಾಂಗ್ರೆಸ್ ಸರಕಾರ ನೀಡಿರುವ ಐದು ಗ್ಯಾರಂಟಿ ಯೋಜನೆಗಳ ಲಾಭದ ಋಣ ತೀರಿಸಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಗೌಡ ಅವರು ಗೆಲವು ಸಾಧಿಸಲಿದ್ದಾರೆ. ಪಕ್ಷಾತೀತವಾಗಿ ಎಲ್ಲರೂ ಗ್ಯಾರಂಟಿ ಯೋಜನೆಗಳ ಲಾಭ ಪಡೆದಿದ್ದು, ಬಿಜೆಪಿ, ಜೆಡಿಎಸ್ ಸೇರಿದಂತೆ ಇತರ ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಗುರುತಿಸಿಕೊಂಡಿರುವ ಮತದಾರರು ಕೂಡ ಈ ಬಾರಿ ಕಾಂಗ್ರೆಸ್ ಗೆ ಮತ ಚಲಾಯಿಸಲಿದ್ದಾರೆ ಎಂದರು.
ಕಳೆದ ವರ್ಷ ವಿಧಾನಸಭಾ ಚುನಾವಣೆ ನಡೆದಾಗ ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದ್ದೆವು. ನಮ್ಮ ನಿರೀಕ್ಷೆಯಂತೆ ಇಬ್ಬರು ಕಾಂಗ್ರೆಸ್ ಶಾಸಕರು ಆಯ್ಕೆಯಾಗಿ ಕೇವಲ 9 ತಿಂಗಳಿನಲ್ಲಿ 500 ಕೋಟಿ ರೂ.ಗೂ ಅಧಿಕ ಅನುದಾನದ ಮೂಲಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ರಸ್ತೆ, ಸೇತುವೆ, ಮೋರಿ ನಿರ್ಮಾಣವಾಗುತ್ತಿದೆ, ಕುಡಿಯುವ ನೀರಿನ ಯೋಜನೆಗಳು ಸಾಕಾರಗೊಳ್ಳುತ್ತಿದೆ. ಇದರ ಜೊತೆಯಲ್ಲೇ ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪುತ್ತಿದೆ. ಕಾಂಗ್ರೆಸ್ ಸರಕಾರದ ಜನಪರ ಕಾಳಜಿಯನ್ನು ಜನ ಅರ್ಥಮಾಡಿಕೊಂಡಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಮತ್ತೊಮ್ಮೆ ಹೇಳುತ್ತಿದ್ದೇವೆ ಎಂದು ತಿಳಿಸಿದರು.
ಐದು ಗ್ಯಾರಂಟಿ ಯೋಜನೆಗಳಂತೆ ರಾಷ್ಟ್ರ ಮಟ್ಟದಲ್ಲಿ 25 ಗ್ಯಾರಂಟಿಗಳನ್ನು ಕಾಂಗ್ರೆಸ್ ಪಕ್ಷ ಘೋಷಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮುಖಂಡ ರಾಹುಲ್ ಗಾಂಧಿ ಅವರ ಸಹಿ ಇರುವ ಗ್ಯಾರಂಟಿ ಕಾರ್ಡ್ಗಳನ್ನು ಮನೆ ಮನೆಗೆ ತಲುಪಿಸುತ್ತಿದ್ದೇವೆ. ನಿರುದ್ಯೋಗಿಗಳಿಗೆ ವಾರ್ಷಿಕ ರೂ.1 ಲಕ್ಷ, ಬಡ ಮಹಿಳೆಗೆ ರೂ.1 ಲಕ್ಷ, ನರೇಗಾದಡಿ ಕಾರ್ಮಿಕರಿಗೆ ದಿನಕ್ಕೆ 400 ರೂ. ವೇತನ, ಉದ್ಯೋಗ ಭಾಗ್ಯ ಸೇರಿದಂತೆ 25 ಗ್ಯಾರಂಟಿಗಳ ಭರವಸೆಯನ್ನು ನೀಡಲಾಗಿದೆ. ಏ.14 ರಂದು ಮಡಿಕೇರಿಯಲ್ಲಿ ನಡೆಯುವ ಕಾಂಗ್ರೆಸ್ ಸಮಾವೇಶದಲ್ಲಿ ಈ 25 ಗ್ಯಾರಂಟಿ ಯೋಜನೆಗಳ ಕುರಿತು ಮುಖ್ಯಮಂತ್ರಿಗಳು ವಿವರಿಸಲಿದ್ದಾರೆ ಎಂದು ರಮೇಶ್ ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮ್ಮದ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ, ನಗರಾಧ್ಯಕ್ಷ ಬಿ.ವೈ.ರಾಜೇಶ್ ಹಾಗೂ ಸದಸ್ಯ ಭವಿನ್ ಕುಮಾರ್ ಉಪಸ್ಥಿತರಿದ್ದರು.








