
ಮಡಿಕೇರಿ ಏ.15 NEWS DESK : ಆದಿ ದ್ರಾವಿಡ ಸಮಾಜ ಸೇವಾ ಸಂಘ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜನ್ಮ ದಿನವನ್ನು ಬಿಳಿಗೇರಿ ಗ್ರಾಮದಲ್ಲಿ ಅರ್ಥಪೂರ್ಣವಾಗಿ ಆಚರಿಸಿತು.
ಗ್ರಾಮದ ಜಂಬೂರು ತೋಟದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಆದಿ ದ್ರಾವಿಡ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ ಹೆಚ್.ಎಂ.ಸೋಮಪ್ಪ ಶಿಕ್ಷಣದಿಂದ ಮಾತ್ರ ಈ ದೇಶದ ಅಭಿವೃದ್ಧಿ ಸಾಧ್ಯ ಎಂದರು.
ಅಂಬೇಡ್ಕರ್ ಅವರು ಶಿಕ್ಷಣಕ್ಕೆ ಆದ್ಯತೆ ನೀಡುವಂತೆ ಸಂದೇಶ ನೀಡಿದ್ದಾರೆ. ನಮ್ಮ ಹಕ್ಕುಗಳನ್ನು ಪ್ರತಿಪಾದಿಸಲು ಇಂದು ಸಂವಿಧಾನ ನಮಗೆ ನೆರವಾಗಿದೆ. ಸಮಾನತೆ, ಮತದಾನದ ಹಕ್ಕು ಮತ್ತು ಪ್ರಶ್ನೆ ಮಾಡುವ ಅವಕಾಶವನ್ನು ಕಲ್ಪಿಸಿದೆ. ಶಿಕ್ಷಣದಿಂದ ಮಾತ್ರ ಈ ದೇಶ ಅಭಿವೃದ್ಧಿ ಹೊಂದಲು ಸಾಧ್ಯವಾಗಿದೆ. ಆದ್ದರಿಂದ ಪ್ರತಿಯೊಬ್ಬರು ಶಿಕ್ಷಣವನ್ನು ಪಡೆಯುವ ಮೂಲಕ ದೇಶವನ್ನು ಕಟ್ಟಿ ಬೆಳೆಸಲು ಕೈಜೋಡಿಸಬೇಕು ಎಂದು ಕರೆ ನೀಡಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳನ್ನು ಇಂದಿನ ಯುವ ಪೀಳಿಗೆ ಪಾಲಿಸಬೇಕು ಎಂದು ಸೋಮಪ್ಪ ಹೇಳಿದರು.
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ಮಧು, ಸದಸ್ಯರಾದ ಹೆಚ್.ಎಂ.ಕೃಷ್ಣಪ್ಪ. ಗೋಪಾಲ, ಗಣೇಶ, ಲೋಕೇಶ, ರಾಮು, ನಾರಾಯಣ, ಸೀನ ಮತ್ತಿತರರು ಉಪಸ್ಥಿತರಿದ್ದರು.








