ಮಡಿಕೇರಿ ಏ.17 NEWS DESK : ಕೊಡಗು ಗೌಡ ಯುವ ವೇದಿಕೆ ವತಿಯಿಂದ ಏ.28 ರವರೆಗೆ ನಡೆಯಲಿರುವ 25ನೇ ವರ್ಷದ ಗೌಡ ಸಮೂಹದ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಂಡಿತು.
ಹತ್ತು ಪ್ರಾಂಚೈಸಿ ತಂಡಗಳ ನಡುವೆ ಇಂದಿನಿಂದ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿ ನಡೆಯಲಿದ್ದು, ಮಾಜಿ ಶಾಸಕ ಕೆ.ಜಿ.ಬೋಪಯ್ಯ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಎಳೆಯ ಕ್ರೀಡಾ ಪ್ರತಿಭೆಗಳನ್ನು ಬೆಳಕಿಗೆ ತರುವ ಮತ್ತು ಸಮಾಜವನ್ನು ಒಗ್ಗೂಡಿಸಿ ಸೌಹಾರ್ದತೆಯನ್ನು ಮೂಡಿಸುವ ಶಕ್ತಿ ಕ್ರೀಡಾಕೂಟಗಳಿಗೆ ಇದೆ ಎಂದು ಅಭಿಪ್ರಾಯಪಟ್ಟರು.
ಕೊಡಗು ಗೌಡ ಯುವ ವೇದಿಕೆ ಕ್ರೀಡಾಕೂಟದ ಆಯೋಜನೆಯೊಂದಿಗೆ ಉತ್ತಮ ಕೆಲಸಗಳನ್ನು ಮುಂದುವರಿಸಿಕೊಂಡು ಹೋಗುತ್ತಿರುವುದು ಶ್ಲಾಘನೀಯವೆಂದರು.
ಮಡಿಕೇರಿ ಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ ಮಾತನಾಡಿ, ಕೊಡಗು ಗೌಡ ಯುವ ವೇದಿಕೆ ಈ ಹಿಂದೆ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸುತ್ತಿತ್ತು. ಪ್ರಸ್ತುತ ಕ್ರೀಡಾ ಪ್ರತಿಭೆಗಳ ಬೆಳವಣಿಗೆಗೆ ಪೂರಕವಾಗಿ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಆಯೋಜನೆಗೆ ಮುಂದಾಗಿರುವುದು ಉತ್ತಮ ಬೆಳವಣಿಗೆ ಎಂದರು.
ಕರ್ನಾಟಕ ಅರೆಭಾಷಾ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿಯ ಮಾಜಿ ಅಧ್ಯಕ್ಷ ಕೊಲ್ಯದ ಗಿರೀಶ್ ಮಾತನಾಡಿ, ಕ್ರೀಡಾ ಪ್ರತಿಭೆಗಳ ಉತ್ತೇಜನಕ್ಕಾಗಿ ಮತ್ತು ಸಮಾಜದ ಒಗ್ಗೂಡುವಿಕೆಗಾಗಿ ನಡೆಸುವ ಕಾರ್ಯಕ್ರಮಗಳಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.
ಕೊಡಗು ಗೌಡ ವಿದ್ಯಾಭಿವೃದ್ಧಿ ನಿಧಿಯ ಅಧ್ಯಕ್ಷ ಅಂಬೆಕಲ್ ನವೀನ್ ಯುವ ಕ್ರೀಡಾ ಪಟುಗಳ ಉತ್ತೇಜನಕ್ಕಾಗಿ ಪಂದ್ಯಾವಳಿ ಆಯೋಜಿಸಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕೊಡಗು ಗೌಡ ಮಹಿಳಾ ಘಟಕದ ಅಧ್ಯಕ್ಷರಾದ ಅಮೆ ದಮಯಂತಿ ಮಾತನಾಡಿ, ಮಾನಸಿಕ ಮತ್ತು ದೈಹಿಕ ಆರೋಗ್ಯ ಸಂರಕ್ಷಣೆಗೆ ಪೂರಕವಾದ ಕ್ರೀಡಾ ಚಟುವಟಿಕೆಗಳ ಅರಿವನ್ನು ಪ್ರತಿಯೊಬ್ಬರು ಹೊಂದಿಕೊಳ್ಳುವ ಅಗತ್ಯವಿದೆ. ಆರೋಗ್ಯಯುತ ಬದುಕು ಮತ್ತು ಸದೃಢವಾದ ಸಮಾಜ ನಿರ್ಮಾಣಕ್ಕೆ ಪೂರಕವಾಗಿರುವ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ತಂಡಗಳು ಸೋಲು ಗೆಲುವನ್ನು ಮೀರಿ ಸಂಭ್ರಮವನ್ನು ಆಚರಿಸಬೇಕು ಎಂದರು.
ಗೌಡ ಯುವ ವೇದಿಕೆಯ ಕಾನೂನು ಸಲಹೆಗಾರ ಕೊಟ್ಟಕೇರಿಯನ ದಯಾನಂದ ಪಂದ್ಯಾವಳಿಗೆ ಶುಭ ಕೋರಿದರು.
ವೇದಿಕೆಯ ಕಾರ್ಯದರ್ಶಿ ಪುದಿಯನೆರವನ ರಿಷಿತ್ ಮಾದಯ್ಯ ಪ್ರಾಸ್ತಾವಿಕವಾಗಿ ಮಾತನಾಡಿ, ಕೊಡಗು ಗೌಡ ಯುವ ವೇದಿಕೆ ವತಿಯಿಂದ 1997ರಿಂದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ನಡೆಸಲಾಗುತ್ತಿದೆ, ಇದೀಗ ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಪಂದ್ಯಾವಳಿ ನಡೆಯುತ್ತಿದೆ ಎಂದು ತಿಳಿಸಿದರು.
ಕಳೆದ 23 ವರ್ಷಗಳ ಕಾಲ ಟೆನ್ನಿಸ್ ಬಾಲ್ ಪಂದ್ಯಾವಳಿ ನಡೆಯುತಿತ್ತು. ಯುವ ಕ್ರೀಡಾಪಟುಗಳಿಗೆ ಉತ್ತಮ ಅವಕಾಶ ಒದಗಿಸುವ ಚಿಂತನೆಯಡಿ, ಕಳೆದ ಸಾಲಿನಿಂದ ಲೆದರ್ ಬಾಲ್ ಪಂದ್ಯಾವಳಿ ನಡೆಸಲಾಗುತ್ತಿದೆ ಎಂದರು.
ವೇದಿಕೆಯ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ರಣಜಿ ಕ್ರಿಕಟ್ ಆಟಗಾರ ಸುಳ್ಯಕೋಡಿ ರಿಷಿ ಬೋಪಣ್ಣ, ವೇದಿಕೆಯ ಸ್ಥಾಪಕಾಧ್ಯಕ್ಷ ಪೊನ್ನಚ್ಚನ ಮಧು ಸೋಮಣ್ಣ, ಗೌರವ ಸಲಹೆಗಾರ ಕಟ್ಟೆಮನೆ ಸೋನಾಜಿತ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
::: ಟ್ರೋಫಿ ಅನಾವರಣ :::
ಪಂದ್ಯಾವಳಿಯ ಆಕರ್ಷಕ ಟ್ರೋಫಿಯನ್ನು ಇದೇ ಸಂದರ್ಭ ಗಣ್ಯರು ಅನಾವರಣ ಗೊಳಿಸಿದರು. ಮಡಿಕೇರಿಯ ಕೊಡಗು ಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ ಅವರು ಬ್ಯಾಟ್ ಮಾಡುವ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಿದರು.








