
ಮಡಿಕೇರಿ ಮೇ 25 NEWS DESK : ಶಿಕ್ಷಣದಿಂದ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಮೊಗೇರ ಸೇವಾ ಸಮಾಜದ ಜಿಲ್ಲಾ ಗೌರವ ಸಲಹೆಗಾರ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ನಿಕಟ ಪೂರ್ವ ಸದಸ್ಯ ಪಿ.ಎಂ. ರವಿ ಹೇಳಿದರು.
ಸೋಮವಾರಪೇಟೆಯ, ಬಜೆಗುಂಡಿ ಮೊಗೇರ ಸೇವಾ ಸಮಾಜ ಮತ್ತು ಕುಸುಬೂರು ಮೊಗೇರ ಗ್ರಾಮ ಸಮಿತಿಯ ವತಿಯಿಂದ ಕುಸುಬೂರಿನಲ್ಲಿ ಮೊಗೇರ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಸಮಾಜವು ಬಲಿಷ್ಠವಾಗಬೇಕಾದರೆ ಶಿಕ್ಷಣವು ಪ್ರಮುಖವಾಗಿದ್ದು, ಪೋಷಕರು ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣವನ್ನು ನೀಡುವಲ್ಲಿ ಶ್ರಮವಹಿಸಬೇಕೆಂದರು. ಪ್ರಸ್ತುತ ದಿನಗಳಲ್ಲಿ ಮೊಗೇರ ಸಮುದಾಯದವರು ಎಲ್ಲಾ ಕ್ಷೇತ್ರದಲ್ಲೂ ಮುಂದೆ ಬರುತ್ತಿದ್ದು, ಸಮಾಜದ ಅಭಿವೃದ್ಧಿಗೆ ಎಲ್ಲರ ಕೊಡುಗೆ ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಸಮಾಜ ಬಾಂಧವರು ಕೈಜೋಡಿಸುವಂತೆ ಮನವಿ ಮಾಡಿದರು.
ವಿದ್ಯಾರ್ಥಿಗಳಿಗೆ ಮಕ್ಕಳಿಗೆ ಸರಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದೇವೆ ಎಂಬ ಕೀಳರಿಮೆ ಬೇಡ. ಸರ್ಕಾರಿ ಶಾಲೆಯಲ್ಲೂ ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದು, ಸರಕಾರದ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು.
ಅಧ್ಯಕ್ಷತೆ ವಹಿಸಿದ ಗ್ರಾಮ ಶಾಖೆಯ ಅಧ್ಯಕ್ಷ ಹೆಚ್.ಬಿ.ರಾಮಚಂದ್ರ ಮಾತನಾಡಿ, ಪೋಷಕರು ವಿದ್ಯಾರ್ಥಿಗಳ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ಸಲಹೆ ನೀಡಿದರು.
ಮೊಗೇರ ಗ್ರಾಮ ಶಾಖೆಯಿಂದ ಕಳೆದ ಒಂಬತ್ತು ವರ್ಷದಿಂದ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಸಲಾಗುತ್ತಿದ್ದು, ನಮ್ಮ ಸಮುದಾಯದ ಅಭಿವೃದ್ಧಿಗಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರಲಾಗುತ್ತಿದೆ. ಎಲ್ಲರೂ ತಮ್ಮ ಸಂಪೂರ್ಣ ಸಹಕಾರ ನೀಡುವಂತೆ ಮನವಿ ಮಾಡಿದರು.
ವೇದಿಕೆಯಲ್ಲಿ ಮೊಗೇರ ಸೇವಾ ಸಮಾಜದ ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಪಿ.ಕೆ.ವಸಂತ, ಗ್ರಾಮದ ಶಾಖೆಯ ಉಪಾಧ್ಯಕ್ಷ ತನಿಯಪ್ಪ, ಕಾರ್ಯದರ್ಶಿ ಲೋಕೇಶ್, ಖಜಾಂಚಿ ಸುರೇಶ್ ಕುಸುಬೂರು, ಸಮಾಜದ ಹಿರಿಯ ಸದಸ್ಯ ಕುಮಾರ ಸೇರಿದಂತೆ ಅನೇಕರು ಹಾಜರಿದ್ದರು.
ಸದಸ್ಯರಾದ ದಿನೇಶ್ ಕುಸುಬೂರು ಕಾರ್ಯಕ್ರಮದಲ್ಲಿ ನಿರೂಪಿಸಿ, ಸ್ವಾಗತಿಸಿದರು. ಶಿವಕುಮಾರ್ ಮಾಸ್ಟರ್ ವಂದಿಸಿದರು.








