
ಮಡಿಕೇರಿ ಜೂ.10 NEWS DESK : ಕೊಡಗು ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಸರಕಾರಿ ಜಾಗವನ್ನು ಕಡಿಮೆ ದರಕ್ಕೆ ಗುತ್ತಿಗೆ ಆಧಾರದಲ್ಲಿ ನೀಡುವ ಆದೇಶ ಹಿಂಪಡೆಯಬೇಕು, ಅಪಾಯಕಾರಿ ಜಾಗದಲ್ಲಿರುವ ಬಡ ಕುಟುಂಬಗಳಿಗೆ ನಿವೇಶನ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಎಂ) ನೆಲ್ಲಿಹುದಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.
ನೆಲ್ಲಿಹುದಿಕೇರಿ ಗ್ರಾ.ಪಂ ಎದುರು ಜಮಾಯಿಸಿದ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಬಡವರ, ಕೂಲಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆಗಳನ್ನು ಕೂಗಿದರು.
ಈ ಸಂದರ್ಭ ಮಾತನಾಡಿದ ಸಿಪಿಐಎಂ ಕಾರ್ಯದರ್ಶಿ ಪಿ.ಆರ್.ಭರತ್, ಉಳ್ಳವರ ಪರವಾದ ನಿಯಮಗಳನ್ನು ತಕ್ಷಣ ರೂಪಿಸುವ ಸರಕಾರಗಳು ಬಡವರು ಹಾಗೂ ಕೂಲಿ ಕಾರ್ಮಿಕರನ್ನು ನಿರ್ಲಕ್ಷಿಸುತ್ತಲೇ ಬರುತ್ತಿವೆ. ಬಡವರಿಗೆ ವಾಸವಿರಲು ನಿವೇಶನ ಅಥವಾ ವಸತಿಯನ್ನು ನೀಡಿ ಎಂದು ಒತ್ತಾಯಿಸಿ ಕಳೆದ ಹಲವು ವರ್ಷಗಳಿಂದ ಸಿಪಿಐಎಂ ಪಕ್ಷ ಹೋರಾಟಗಳನ್ನು ನಡೆಸಿಕೊಂಡು ಬಂದಿದ್ದರೂ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸ್ಪಂದಿಸಿಲ್ಲವೆಂದು ಟೀಕಿಸಿದರು.
ನೆಲ್ಲಿಹುದಿಕೇರಿ ಗ್ರಾಮ ವ್ಯಾಪ್ತಿಯಲ್ಲಿ ಕಡು ಬಡತನದಲ್ಲಿರುವ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು, ದಲಿತರು, ಆದಿವಾಸಿಗಳು, ಅಲ್ಪಸಂಖ್ಯಾತರು ಸೇರಿದಂತೆ ಇತರ ಕೆಲಸಗಳನ್ನು ಮಾಡುವ ಬಡ ಕುಟುಂಬಗಳು ಹುಟ್ಟಿನಿಂದಲೂ ಬಾಡಿಗೆ ಮನೆಯಲ್ಲೇ ವಾಸಿಸುತ್ತಿದ್ದಾರೆ. ತೋಟದ ಲೈನ್ ಮನೆಗಳಲ್ಲಿ ಆಶ್ರಯ ಪಡೆದಿದ್ದಾರೆ. ನದಿದಡ, ಬೆಟ್ಟಗುಡ್ಡಗಳ ಮೇಲೆ ಅಪಾಯಕಾರಿ ಸ್ಥಳಗಳಲ್ಲಿ ಬದುಕು ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ಜೀತ ವ್ಯವಸ್ಥೆ ಜೀವಂತವಾಗಿದೆ, ಸರಕಾರ ನಿಗದಿ ಮಾಡಿರುವ ಕನಿಷ್ಟ ವೇತನ ಮತ್ತು ಮೂಲಭೂತ ಸೌಲಭ್ಯಗಳನ್ನು ನೀಡದೆ ವಂಚಿಸಲಾಗುತ್ತಿದೆ ಎಂದು ಆರೋಪಿಸಿದರು.
ಜಿಲ್ಲೆಯಲ್ಲಿ 2019ರಲ್ಲಿ ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡ ಕುಟುಂಬಗಳಿಗೆ ಮನೆ ನಿರ್ಮಿಸಲು ನಿಗದಿಪಡಿಸಿರುವ ವಾಲ್ನೂರು ಗ್ರಾ.ಪಂ ವ್ಯಾಪ್ತಿಗೆ ಒಳಪಡುವ 8.5 ಏಕರೆ ಜಾಗದಲ್ಲಿ ಮೂಲಭೂತ ಸೌಕರ್ಯ ಒದಗಿಸಬೇಕು, ಮನೆ ನಿರ್ಮಿಸಿಕೊಳ್ಳು ತಲಾ ರೂ.10 ಲಕ್ಷ ನೀಡಬೇಕು, ನಿರಾಶ್ರಿತರ ಪಟ್ಟಿಯನ್ನು ಬದಲಾಯಿಸಿ ಹೊಸಪಟ್ಟಿಯನ್ನು ತಯಾರಿಸಬೇಕು, ನಿವೇಶನ ಹೊಂದಿರುವ ದಾಖಲಾತಿಗಳಿಲ್ಲದ ಸಾವಿರಾರು ಮನೆಗಳಿದ್ದು, 94 ಸಿ ಮೂಲಕ ಹಕ್ಕು ಪತ್ರ ವಿತರಣೆಯಾಗದೆ ಇರುವ ಕುಟುಂಬಗಳಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿದರು.
ವನ್ಯಜೀವಿಗಳ ದಾಳಿಯಿಂದ ಮನುಷ್ಯರನ್ನು ಮತ್ತು ಕೃಷಿಯನ್ನು ರಕ್ಷಿಸಬೇಕು, ನೆಲ್ಲಿಹುದಿಕೇರಿ ಗ್ರಾ.ಪಂ ವ್ಯಾಪ್ತಿಯ ರಸ್ತೆಗಳನ್ನು ಡಾಂಬರು ಅಥವಾ ಕಾಂಕ್ರಿಟೀಕರಣಗೊಳಿಸಬೇಕು, ರಸ್ತೆಗಳಿಗೆ ತಕ್ಷಣ ಚರಂಡಿ ನಿರ್ಮಾಣ ಮಾಡಬೇಕು, ನೆಲ್ಲಿಹುದಿಕೇರಿ ಪಟ್ಟಣದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಿಸಬೇಕು, ಒತ್ತುವರಿ ಮಾಡಿಕೊಂಡಿರುವ ಜಾಗವನ್ನು ಬಿಡಿಸಿ ನಿವೇಶನ ರಹಿತ ಬಡವರಿಗೆ ಹಾಗೂ ಆದಿವಾಸಿ ಕುಟುಂಬಗಳಿಗೆ ನೀಡಬೇಕು ಮತ್ತು ಮನೆ ನಿರ್ಮಿಸಿಕೊಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪಕ್ಷದ ಜಿಲ್ಲಾ ಕಾರ್ಯದರ್ಶಿ ಹೆಚ್.ಬಿ.ರಮೇಶ್, ಸದಸ್ಯರಾದ ಎ.ಕೆ.ಚಂದ್ರನ್, ಕೆ.ಶಿವರಾಮನ್, ವೈ.ರವಿ, ಬೋಜಿ, ಡಿ.ಟಿ.ಉದಯನ್, ಲಲಿತಮ್ಮ, ಯೂಸೂಫ್, ಅಬಿಬ್, ಕಾವೇರಿ, ಸೌಕತ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಬೇಡಿಕೆಯ ಮನವಿ ಪತ್ರವನ್ನು ತಹಶೀಲ್ದಾರ್ ಕಿರಣ್ ಗೌರಯ್ಯ ಅವರ ಮೂಲಕ ಸರಕಾರಕ್ಕೆ ಸಲ್ಲಿಸಲಾಯಿತು.
ನಂತರ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ನಿವೇಶನದ ಬೇಡಿಕೆ, ವಿವಿಧ ಸಮಸ್ಯೆಗಳು ಮತ್ತು ಮೂಲಭೂತ ಸೌಲಭ್ಯಗಳ ಕೊರತೆಯ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಕುಶಾಲನಗರ ತಹಶೀಲ್ದಾರ್ ಕಿರಣ್ ಗೌರಯ್ಯ, ಕಂದಾಯ ಪರಿವೀಕ್ಷಕ ಸಂತೋಷ್, ಅರಣ್ಯ ವಲಯಾಧಿಕಾರಿ ರತನ್, ಅರಣ್ಯಾಧಿಕಾರಿ ಸುಬ್ಬರಾಯ, ಪಿಡಿಓ ನಂಜುಂಡ ಸ್ವಾಮಿ, ಗ್ರಾ.ಪಂ ಅಧ್ಯಕ್ಷೆ ಧನಲಕ್ಷ್ಮಿ, ಉಪಾಧ್ಯಕ್ಷೆ ಪ್ರಮೀಳಾ ಮತ್ತಿತರರು ಉಪಸ್ಥಿತರಿದ್ದರು.









