
ಮಡಿಕೇರಿ ಜೂ.11 NEWS DESK : ವೀರಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ ಸ್ಮಾರಕ ಭವನದ ಪೂರ್ವ ಭಾಗದ ತಡೆಗೋಡೆ ಎತ್ತರಿಸುವುದು ಹಾಗೂ ಸ್ಮಾರಕ ಭವನದ ಉತ್ತರ ಭಾಗದಲ್ಲಿ ತಡೆಗೋಡೆ ಮುಂದುವರಿದ ಕಾಮಗಾರಿ ಕೈಗೊಳ್ಳುವ ಸಂಬಂಧ ಅಂದಾಜು ಪಟ್ಟಿ ಸಲ್ಲಿಸುವಂತೆ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜನರಲ್ ಕೆ.ಎಸ್. ತಿಮ್ಮಯ್ಯ ಸ್ಮಾರಕ ಭವನದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಪಶ್ಚಿಮ ಭಾಗದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆ ಕಟ್ಟಡ ಕಾಮಗಾರಿಯಿಂದ ತಡೆಗೋಡೆಯ ಎತ್ತರ ಕಡಿಮೆಯಾಗಿದ್ದು, ಈ ಸಂಬಂಧ ಅಂದಾಜು ಪಟ್ಟಿ ಸಲ್ಲಿಸುವಂತೆ ಸೂಚಿಸಿದರು.
ಹಾಗೆಯೇ ಸ್ಮಾರಕ ಭವನದ ಉತ್ತರ ಭಾಗದಲ್ಲಿ ತಡೆಗೋಡೆ ನಿರ್ಮಾಣವಾಗಿದ್ದು, ಉಳಿದ ಕಾಮಗಾರಿ ಕೈಗೊಳ್ಳಲು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರಕ್ಕೆ ಪತ್ರ ಬರೆಯುವ ಸಂಬಂಧ ಅಂದಾಜು ಪಟ್ಟಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಸ್ಮಾರಕ ಭವನದ ಹಿಂಭಾಗದಲ್ಲಿನ ತಡೆಗೋಡೆ ನಿರ್ಮಾಣಕ್ಕೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ 25 ಲಕ್ಷ ರೂ. ಬಿಡುಗಡೆಯಾಗಿ ಕಾಮಗಾರಿ ಕೈಗೊಳ್ಳಲಾಗಿದ್ದು, ಮುಂದುವರಿದ ಕಾಮಗಾರಿ ಕೈಗೊಳ್ಳಬೇಕಿದೆ. ಜೊತೆಗೆ ಹಿಂಭಾಗದಲ್ಲಿ ಗೇಟ್ ಅಳವಡಿಸಬೇಕಿದೆ ಎಂದು ಸಭೆಯ ಗಮನಕ್ಕೆ ತಂದರು.
ಜನರಲ್ ಕೆ.ಎಸ್.ತಿಮ್ಮಯ್ಯ ಸ್ಮಾರಕ ಭವನದ ಮುಂಭಾಗದಲ್ಲಿ ಸ್ಮಾರಕ ಭವನದ ವೀಕ್ಷಕರ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಟೆಂಡರ್ ಆಹ್ವಾನಿಸಲು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.
ಮ್ಯೂಸಿಯಂ ಒಳಭಾಗದಲ್ಲಿ ಕೆಲವು ಕಡೆ ಗಾಜಿನ ಫಲಕ ಅಳವಡಿಸುವುದು, ಸ್ಮಾರಕ ಭವನದ ಕಾರಂಜಿ ದುರಸ್ತಿಯಾಗಿದ್ದು, ಸರಿಪಡಿಸುವುದು ಮತ್ತಿತರಕ್ಕೆ ಜಿಲ್ಲಾಧಿಕಾರಿ ಅವರು ಅನುಮೋದನೆ ನೀಡಿದರು.
ಜನರಲ್ ತಿಮ್ಮಯ್ಯ ಸ್ಮಾರಕ ಭವನ ಸಂಬಂಧ ಜಿಲ್ಲಾಡಳಿತದ ವೆಬ್ಸೈಟ್ನಲ್ಲಿ ಮಾಹಿತಿ ಪ್ರಕಟಿಸುವುದು ಸೇರಿದಂತೆ ಹಲವು ವಿಚಾರಗಳು ಚರ್ಚಿಸಲಾಯಿತು.
ಜನರಲ್ ಕೆ.ಎಸ್.ತಿಮ್ಮಯ್ಯ ಸ್ಮಾರಕ ಭವನಕ್ಕೆ ನಲ್ಲಿ ನೀರು ಸಂಪರ್ಕ ಕಲ್ಪಿಸಲು ಈಗಾಗಲೇ ನಗರಸಭೆಗೆ 16 ಸಾವಿರ ರೂ. ಹಣ ಪಾವತಿಸಲಾಗಿದ್ದು, ಕೂಡಲೇ ನಲ್ಲಿ ಸಂಪರ್ಕ ಕಲ್ಪಿಸುವಂತೆ ನಗರಸಭೆ ಪೌರಾಯುಕ್ತರಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಜನರಲ್ ಕೆ.ಎಸ್.ತಿಮ್ಮಯ್ಯ ಸ್ಮಾರಕ ಭವನ ಸಮಿತಿಯ ವಿಶೇಷ ಆಹ್ವಾನಿತರಾದ ಅನಿಲ್ ಎಚ್.ಟಿ ಅವರು ಮಾತನಾಡಿ ಜನರಲ್ ಕೆ.ಎಸ್.ತಿಮ್ಮಯ್ಯ ಸ್ಮಾರಕ ಭವನಕ್ಕೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ನಿಟ್ಟಿನಲ್ಲಿ ನಗರದ ಓಂಕಾರೇಶ್ವರ ದೇವಾಲಯ ಮತ್ತು ಅಬ್ಬಿಪಾಲ್ಸ್ ಬಳಿ ಫಲಕ ಅಳವಡಿಸುವುದು ಅತ್ಯಗತ್ಯವಾಗಿದೆ ಎಂದು ಹೇಳಿದರು.
ಜನರಲ್ ಕೆ.ಎಸ್.ತಿಮ್ಮಯ್ಯ ಸ್ಮಾರಕ ಭವನ ಅಭಿವೃದ್ಧಿ ಸಂಬಂಧಿಸಿದಂತೆ ‘ಮಾಹಿತಿ ಪುಸ್ತಕ’ ಹೊರತರುವುದು ಅಗತ್ಯವಾಗಿದೆ ಎಂದು ಅವರು ಸಲಹೆ ನೀಡಿದರು.
ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ಹೊರಗುತ್ತಿಗೆಯಡಿ 7 ಮಂದಿ ಕರ್ತವ್ಯ ನಿರ್ವಹಿಸುತ್ತಿದ್ದು, ಹೊಸದಾಗಿ ಟೆಂಡರ್ ಆಹ್ವಾನಿಸಲು ಜಿಲ್ಲಾಧಿಕಾರಿ ಅವರು ಅನುಮತಿ ನೀಡಿದರು.
ಜನರಲ್ ತಿಮ್ಮಯ್ಯ ಸ್ಮಾರಕ ಭವನವನ್ನು ಮತ್ತಷ್ಟು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಗೆ ಭವನವನ್ನು ಹಸ್ತಾಂತರಿಸುವ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಗಳು ಮತ್ತು ನಿರ್ದೇಶಕರಿಗೆ ಪತ್ರ ಬರೆಯಲು ಸಭೆಯಲ್ಲಿ ನಿರ್ಧರಿಸಲಾಯಿತು.
ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಪ್ರವೇಶ ಶುಲ್ಕ ಸಂಬಂಧ ಮಾಜಿ ಸೈನಿಕರಿಗೆ ರಿಯಾಯಿತಿ ನೀಡಬೇಕು ಎಂದು ಸೈನಿಕ ಕಲ್ಯಾಣ ಇಲಾಖೆಯ ಅಧಿಕಾರಿಯೊಬ್ಬರು ಸಭೆಯ ಗಮನಕ್ಕೆ ತಂದರು.
ಸಿಬ್ಬಂದಿಗಳ ವೇತನಕ್ಕಾಗಿಯೇ ಪ್ರವೇಶ ಶುಲ್ಕ ಬಳಕೆಯಾಗುತ್ತಿದೆ. ಆದ್ದರಿಂದ ರಿಯಾಯಿತಿ ನೀಡುವುದು ಕಷ್ಟಸಾಧ್ಯ ಎಂದು ಜಿಲ್ಲಾಧಿಕಾರಿ ಅವರು ಪ್ರತಿಕ್ರಿಯಿಸಿದರು.
ನಗರದಲ್ಲಿ ನಿರ್ಮಾಣವಾಗುತ್ತಿರುವ ಸುವರ್ಣ ಸಾಂಸ್ಕೃತಿಕ ಸಮುಚ್ಚಯ ಭವನವನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ಗೆ ಜಿಲ್ಲಾಧಿಕಾರಿ ಸೂಚಿಸಿದರು.
ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಸಿದ್ದೇಗೌಡ ಎರಡು ಮೂರು ತಿಂಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
ಹಾಗೆಯೇ ಕುಶಾಲನಗರ ಕಲಾಭವನಕ್ಕೆ 1 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಮಾಹಿತಿ ನೀಡಿದರು.
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಭಾಗಮಂಡಲ ಮತ್ತು ಪೊನ್ನಂಪೇಟೆಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ತಲಾ 5 ಲಕ್ಷ ರೂ. ಬಿಡುಗಡೆಯಾಗಿದ್ದು, ಜಾಗ ಒದಗಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅವರ ಗಮನಕ್ಕೆ ತಂದರು.
ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಸುಬೇದಾರ್ ಮೇಜರ್(ನಿವೃತ್ತ) ಗೌಡಂಡ ತಿಮ್ಮಯ್ಯ ಹಾಗೂ ರಮ್ಯಾ ಅವರು ಸ್ಮಾರಕ ಭವನ ನಿರ್ವಹಣೆ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.
ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವೆಂಕಟೇಶ್ ನಾಯಕ್, ಸಹಾಯಕ ಎಂಜಿನಿಯರ್ ಸತೀಶ್, ತಹಶೀಲ್ದಾರರಾದ ರಮೇಶ್ ಬಾಬು, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಮುತ್ತಪ್ಪ, ಪೌರಾಯುಕ್ತರಾದ ವಿಜಯ್, ನಿರ್ಮಿತಿ ಕೇಂದ್ರದ ಎಂಜಿನಿಯರ್ ರಾಘವೇಂದ್ರ, ಮಣಜೂರು ಮಂಜುನಾಥ್ ಇತರರು ಇದ್ದರು.








