
ಮಡಿಕೇರಿ ಜೂ.22 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೆ ಬಿಜೆಪಿ ಮಂದಿ ಅತ್ಯಂತ ಕೀಳುಮಟ್ಟದ ರಾಜಕೀಯ ಪ್ರದರ್ಶಿಸಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ಟಿ.ಈ.ಸುರೇಶ್ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 25 ವರ್ಷಗಳಲ್ಲಿ ಬಿಜೆಪಿ ಶಾಸಕರುಗಳಿಂದ ಆಗದ ಅಭಿವೃದ್ಧಿ ಕಾರ್ಯಗಳನ್ನು ಈಗಿನ ಕಾಂಗ್ರೆಸ್ ಶಾಸಕರು ಮಾಡುತ್ತಿದ್ದಾರೆ. ಅಲ್ಲದೆ ಶಾಸಕರ ಜನಪ್ರಿಯತೆ ಹೆಚ್ಚುತ್ತಿದೆ. ಇದನ್ನು ಸಹಿಸಲಾಗದೆ ವಿನಾಕಾರಣ ಪ್ರತಿಕೃತಿ ದಹಿಸಿ ವಿಕೃತಿ ಮೆರೆದಿದ್ದಾರೆ ಎಂದು ಆರೋಪಿಸಿದರು. ಸಂವಿಧಾನದತ್ತವಾಗಿ ಎಲ್ಲರಿಗೂ ಪ್ರತಿಭಟಿಸುವ ಹಕ್ಕಿದೆ. ಆದರೆ ಬೆಲೆ ಏರಿಕೆ ವಿರುದ್ಧ ರಾಜ್ಯ ಸರ್ಕಾರವನ್ನು ಗುರಿಯಾಗಿಸಿ ಬಿಜೆಪಿಗರು ನಡೆಸಿದ ಪ್ರತಿಭಟನೆಯಲ್ಲಿ ರಾಜ್ಯದ ಬೇರೆ ಜಿಲ್ಲೆಗೆ ಹೊಲಿಸಿದರೆ ವಿರಾಜಪೇಟೆಯಲ್ಲಿ ಅತ್ಯಂತ ಕೀಳು ಮಟ್ಟದ ಪ್ರತಿಭಟನೆ ನಡೆಸಲಾಗಿದೆ. ಕಾಂಗ್ರೆಸ್ ಇಂತಹ ಕೀಳು ಮಟ್ಟದ ಪ್ರತಿಭಟನೆಯನ್ನು ಎಂದೂ ಮಾಡಿಲ್ಲ ಎಂದರು. ಬೆಲೆ ಏರಿಕೆ ಕುರಿತು ಕಾಂಗ್ರೆಸ್ ಪಕ್ಷದ ವಿರುದ್ಧ ಮಾತನಾಡುವ ನೈತಿಕತೆಯನ್ನು ಬಿಜೆಪಿ ಕಳೆದುಕೊಂಡಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಆಡಳಿತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 100ರ ಗಡಿ ದಾಟಿದೆ, ಅಡುಗೆ ಅನಿಲ, ರಸಗೊಬ್ಬರ, ಕ್ರಿಮಿನಾಶಕ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ದುಬಾರಿಯಾಗಿದೆ. ಇದು ಬೆಲೆ ಏರಿಕೆಯಲ್ಲವೇ, ಬಿಜೆಪಿಯವರಿಗೆ ಇದು ಕಾಣುತ್ತಿಲ್ಲವೇ ಎಂದು ಪ್ರಶ್ನಿಸಿದರು.
ಪ್ರತಿಭಟನೆ ನಡೆಸುವಾಗ ಅರ್ಥಪೂರ್ಣವಾಗಿರಬೇಕು ಮತ್ತು ಜನರ ಭಾವನೆಗೆ ಪೂರಕವಾಗಿರಬೇಕೇ ಹೊರತು ಮತ್ತೊಬ್ಬರಿಗೆ ಅಗೌರವ ತೋರುವಂತಿರಬಾರದು. ಈಗಾಗಲೇ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಕೆಲವರ ಮೇಲೆ ಪ್ರಕರಣ ದಾಖಲಾಗಿದ್ದು, ತಕ್ಷಣವೇ ತಪ್ಪಿತಸ್ಥರನ್ನು ಬಂಧಿಸುವಂತೆ ಒತ್ತಾಯಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಕೆ.ಸತೀಶ್ ಕುಮಾರ್ ಮಾತನಾಡಿ, ಶಾಸಕ ಎ.ಎಸ್.ಪೊನ್ನಣ್ಣ ಅವರು ಜಾತಿ, ಮತ, ಭೇದವಿಲ್ಲದೆ ಪಕ್ಷಾತೀತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಪ್ರತಿಕೃತಿ ದಹಿಸಿ ವಿಕೃತಿ ಮೆರೆದಿರುವುದು ಸರಿಯಲ್ಲ, ಇದು ಕೊಡಗಿನ ಸಂಸ್ಕೃತಿಯಲ್ಲ ಇದು ಎಂದರು.
ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಜೆ.ಎಲ್.ಜನಾರ್ಧನ್ ಮಾತನಾಡಿ, ಜಿಲ್ಲೆಯಲ್ಲಿ ಬಿಜೆಪಿಗರು ತಮ್ಮ ಅಸ್ತಿತ್ವವನ್ನು ಕಳೆದುಕೊಂಡಿದ್ದಾರೆ. ಆದ್ದರಿಂದ ಪೊನ್ನಣ್ಣ ಅವರ ಜನಪ್ರಿಯತೆ, ಅಭಿವೃದ್ಧಿ ಕಾರ್ಯವನ್ನು ಸಹಿಸದೆ ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಉಪಾಧ್ಯಕ್ಷ ವಿ.ಸಂದೀಪ್ ಹಾಗೂ ವಿರಾಜಪೇಟೆ ಬ್ಲಾಕ್ ಎಸ್.ಸಿ ಘಟಕದ ಅಧ್ಯಕ್ಷ ಹೆಚ್.ಎಂ.ಮಹದೇವ ಉಪಸ್ಥಿತರಿದ್ದರು.








