ವಾರಪೇಟೆ NEWS DESK ಜು.30 : ಸೋಮವಾರಪೇಟೆ ತಾಲೂಕಿನ ಕುಂದಳ್ಳಿ, ಕುಮಾರಳ್ಳಿ ಗ್ರಾಮಕ್ಕೆ ವಿದ್ಯುತ್ ಒದಗಿಸಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಇಲ್ಲಿನ ಸೆಸ್ಕ್ ಕಾರ್ಯಪಾಲಕ ಅಭಿಯಂತರರ ಕಚೇರಿಗೆ ಮುತ್ತಿಗೆ ಹಾಕಿ ಸೋಮವಾರ ಪ್ರತಿಭಟಿಸಿದರು. ಕಳೆದ 20 ದಿನಗಳಿಂದ ಗ್ರಾಮಗಳಿಗೆ ವಿದ್ಯುತ್ ಸ್ಥಗಿತಗೊಂಡಿದೆ. ಸೆಸ್ಕ್ ಇಂಜಿನಿಯರ್ಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಗ್ರಾಮಗಳು ಕತ್ತಲೆಯಲ್ಲಿ ಮುಳುಗಿವೆ. ಮುರಿದು ಬಿದ್ದಿರುವ ಕಂಬಗಳನ್ನು ಬದಲಾಯಿಸುವಲ್ಲಿ ಸೆಸ್ಕ್ ಇಂಜಿನಿಯರ್ ವಿಫಲರಾಗಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಯಡೂರು, ಕಂಬಳ್ಳಿ, ಮಾರ್ಗವು ಅರಣ್ಯ ಪ್ರದೇಶದೊಳಗೆ ಹಾದು ಹೋಗಿರುವುದರಿಂದ ಆಗಾಗ್ಗೆ ಮರಗಳು ಬಿದ್ದು, ಮಳೆಗಾಲದಲ್ಲಿ ತಿಂಗಳುಗಟ್ಟಲೆ ವಿದ್ಯುತ್ ಸ್ಥಗಿತವಾಗುತ್ತಿದೆ. ಈ ಹಿನ್ನೆಲೆ ಮಾರ್ಗವನ್ನು ಬದಲಿಸಬೇಕೆಂದು ಒತ್ತಾಯಿಸಿದರು. ಶಾಂತಳ್ಳಿಯಿಂದ ಬೆಟ್ಟದಳ್ಳಿ, ಬೇಕನಳ್ಳಿ, ಕುಂದಳ್ಳಿ ಮುಖ್ಯರಸ್ತೆಯ ಬದಿಯಲ್ಲಿ ಕಂಬಗಳನ್ನು ಅಳವಡಿಸಿ ಹೊಸ ಮಾರ್ಗ ರಚಿಸಬೇಕು. ಅಥವಾ ಬಸವನಕಟ್ಟೆ, ನಗರಳ್ಳಿಯಿಂದ ರಸ್ತೆ ಬದಿಯಲ್ಲಿ ಕಂಬಗಳನ್ನು ಅಳವಡಿಸಿ ಕುಂದಳ್ಳಿ, ಕುಮಾರಳ್ಳಿಗೆ ವಿದ್ಯುತ್ ಒದಗಿಸಬೇಕು. ಆಗಸ್ಟ್ ಅಂತ್ಯದೊಳಗೆ ಈ ಕೆಲಸ ಆರಂಭವಾಗದಿದ್ದರೆ ಸೆಸ್ಕ್ ಕಚೇರಿ ಎದುರು ಗ್ರಾಮಸ್ಥರು ಆಹೋರಾತ್ರಿ ಧರಣಿ ನಡೆಸುತ್ತೇವೆ ಎಂದು ಎಚ್ಚರಿಸಿದರು. ಗ್ರಾಮಸ್ಥರ ಮನವಿ ಅಲಿಸಿದ ಅಭಿಯಂತರರು, ಮುಂದಿನ ಎರಡು ದಿನದೊಳಗೆ ವಿದ್ಯುತ್ ಮಾರ್ಗಗಳನ್ನು ಸರಿಪಡಿಸಿ ಗ್ರಾಮಗಳಿಗೆ ವಿದ್ಯುತ್ ಒದಗಿಸಲಾಗುವುದು. ನೂತನ ಮಾರ್ಗ ಅಳವಡಿಕೆ ಸಂಬಂಧ ಸ್ಥಳ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭ ಕುಮಾರಳ್ಳಿ ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಯು.ಕೆ. ದೇಶ್ರಾಜ್, ಕುಂದಳ್ಳಿ ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ದಿನೇಶ್ ಕುಂದಳ್ಳಿ, ಬೆಟ್ಟದಳ್ಳಿ ಗ್ರಾ.ಪಂ. ಅಧ್ಯಕ್ಷ ಕೆ.ಜೆ. ತಮ್ಮಯ್ಯ, ಕುಮಾರಳ್ಳಿ ಗ್ರಾಮ ಸಮಿತಿ ಕಾರ್ಯದರ್ಶಿ ಕೆ.ಡಿ. ಕಿರಣ್, ಪ್ರಮುಖರಾದ ಯು.ಬಿ. ಗಿರೀಶ್, ಕೆ.ಈ. ಪ್ರದೀಪ್ ಸೇರಿದಂತೆ ಇತರರು ಭಾಗವಹಿಸಿದ್ದರು.








