
ಮಡಿಕೇರಿ ಡಿ.3 NEWSDESK : ಅತಿ ಕಡಿಮೆ ಗೌರವಧನ ಪಡೆದು ಹೆಚ್ಚಿನ ಕಾರ್ಯನಿರ್ವಹಿಸುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಸರಕಾರಿ ನೌಕರರೆಂದೇ ಪರಿಗಣಿಸಲು ಮತ್ತು ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲು ಸರಕಾರದೊಂದಿಗೆ ಸಮಾಲೋಚನೆ ನಡೆಸುವುದಾಗಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ರಾಜ್ಯಾಧ್ಯಕ್ಷ ಜಿ.ಆರ್.ಶಿವಶಂಕರ್ ಭರವಸೆ ನೀಡಿದ್ದಾರೆ. ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ನಡೆದ ಮಡಿಕೇರಿ ತಾಲ್ಲೂಕು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕಡಿಮೆ ಗೌರವಧನ ಪಡೆದು ಹೆಚ್ಚು ಕೆಲಸ ಮಾಡುತ್ತಿದ್ದಾರೆ. ಸರಕಾರ ಇವರನ್ನು ಕೂಡ ಸರಕಾರಿ ಉದ್ಯೋಗಿಗಳೆಂದು ಪರಿಗಣಿಸುವ ಅಗತ್ಯವಿದೆ. ನಿವೃತ್ತಿ ವೇತನ ಮತ್ತು ಆರೋಗ್ಯ ವಿಮೆ ಯೋಜನೆಯ ಸೌಲಭ್ಯಗಳನ್ನು ಕಲ್ಪಿಸಲು ಸರಕಾರದ ಗಮನ ಸೆಳೆಯಲಾಗಿದೆ. ಸರಕಾರಿ ನೌಕರರನ್ನಾಗಿ ನೇಮಕ ಮಾಡಿಕೊಳ್ಳುವ ಬೇಡಿಕೆ ಕುರಿತು ರಾಜ್ಯಮಟ್ಟದಲ್ಲಿ ಚರ್ಚಿಸಲಾಗುವುದು ಎಂದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಮೂಡ ಮಾಜಿ ಅಧ್ಯಕ್ಷರಾದ ಸುರಯ್ಯ ಅಬ್ರಾರ್, ಮಹಿಳೆಯರ ಒಗ್ಗಟ್ಟಿನಲ್ಲಿ ಬಲವಿದೆ, ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಸಂಘಟಿತರಾಗಬೇಕು ಎಂದು ಕರೆ ನೀಡಿದರು.
ಉತ್ತಮ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಗುರುತಿಸಿ ಸನ್ಮಾನಿಸಿರುವುದು ಶ್ಲಾಘನೀಯ. ಹೀಗೆ ಮಾಡುವುದರಿಂದ ಮತ್ತಷ್ಟು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಲು ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಮತ್ತೊಬ್ಬ ಅತಿಥಿ ಸಮಾಜ ಸೇವಕ ರವೂಫ್ ಎಂ.ಎನ್ ಅವರು ಮಾತನಾಡಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಕೊಡಗು ಜಿಲ್ಲೆಯ ಇಬ್ಬರು ಶಾಸಕರುಗಳ ಗಮನಕ್ಕೆ ತಂದು ಪರಿಹಾರಕ್ಕೆ ಯತ್ನಿಸಲಾಗುವುದು ಎಂದು ಭರವಸೆ ನೀಡಿದರು. ಮಡಿಕೇರಿ ತಾಲ್ಲೂಕು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷರಾದ ಸಿ.ಯು.ಪವಿತ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಮತ್ತು ನಿವೃತ್ತರನ್ನು ಸನ್ಮಾನಿಸಿ ಗೌರವಿಸಲಾಯಿತು. ಸೋಮವಾರಪೇಟೆ ತಾಲ್ಲೂಕು ಸಂಘದ ಅಧ್ಯಕ್ಷೆ ಧನಲಕ್ಷ್ಮಿ, ಕಾರ್ಯದರ್ಶಿ ತಾರಾ, ಮಾಜಿ ಜಿಲ್ಲಾಧ್ಯಕ್ಷೆ ತಾರಾಮಣಿ, ತಾಲ್ಲೂಕು ಮಾಜಿ ಅಧ್ಯಕ್ಷೆ ಅಕ್ಕಮ್ಮ, ಸಂಘಟನೆಯ ಪದಾಧಿಕಾರಿಗಳು, ಮಡಿಕೇರಿ ತಾಲ್ಲೂಕು 5 ವರ್ತುಲದ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಉಪಸ್ಥಿತರಿದ್ದರು. ಕ್ಷೇಮನಿಧಿ ವರದಿಯನ್ನು ಕ್ಷೇಮನಿಧಿ ಕಾರ್ಯದರ್ಶಿ ಮೇನಕೆ ಮಂಡಿಸಿದರು. ಉಷಾ ಪ್ರಾರ್ಥಿಸಿ, ಕಾರ್ಯದರ್ಶಿ ಆಶಾಲತಾ ಸ್ವಾಗತಿಸಿ, ಸುಮತಿ ವಂದಿಸಿದರು.










