
ಮಡಿಕೇರಿ ಫೆ.11 NEWS DESK : ಡಾ.ಬಿ.ಆರ್.ಅಂಬೇಡ್ಕರ್ ಭವನ ಉಳಿಸಿ ಹೋರಾಟ ಸಮಿತಿಯ ನೇತೃತ್ವದಲ್ಲಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಎದುರು ಸೋಮವಾರ ನಡೆದ ಧರಣಿಯ ಸಂದರ್ಭ ಅಳವಡಿಸಲಾಗಿದ್ದ ಬ್ಯಾನರ್ ಗಳಿಗೆ ರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿ ನಾಶ ಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋರಾಟ ಸಮಿತಿಯ ಪ್ರಮುಖರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬ್ಯಾನರ್ ಗಳಿಗೆ ಬೆಂಕಿ ಹಚ್ಚಿರುವ ಕುರಿತು ಮಂಗಳವಾರ ಬೆಳಿಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಹೋರಾಟ ಸಮಿತಿಯ ಅಧ್ಯಕ್ಷ ಹೆಚ್.ಎಲ್.ದಿವಾಕರ್, ಪ್ರಮುಖರಾದ ಮೋಹನ್ ಮೌರ್ಯ, ಹೆಚ್.ಸಿ.ಸತೀಶ್, ಎ.ಪಿ.ದೀಪಕ್, ಕುಮಾರ್ ಮತ್ತಿತರರು ಪ್ರಕರಣವನ್ನು ತೀವ್ರವಾಗಿ ಖಂಡಿಸಿದರು. ಬೆಂಕಿ ಹಚ್ಚಿದ ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕೆಲ ಕಾಲ ಪ್ರತಿಭಟನೆ ನಡೆಸಿದರು.
::: ತಕ್ಷಣ ಬಂಧಿಸಿ ::: ಅಧ್ಯಕ್ಷ ಹೆಚ್.ಎಲ್.ದಿವಾಕರ್ ಮಾತನಾಡಿ, ಅಂಬೇಡ್ಕರ್ ಭವನ ಕೆಲವೇ ಕೆಲವು ಮಂದಿಯ ಹಿಡಿತದಲ್ಲಿದೆ. ಇದನ್ನು ಕರ್ನಾಟಕ ದಲಿತ ಸಂಷರ್ಷ ಸಮಿತಿಯ ಮಡಿಕೇರಿ ಶಾಖೆಗೆ ನೀಡಬೇಕೆನ್ನುವ ಬೇಡಿಕೆಯೊಂದಿಗೆ ಹೋರಾಟಕ್ಕಿಳಿದಿದ್ದೇವೆ. ಇದನ್ನು ಸಹಿಸದವರು ನನ್ನ ವಿರುದ್ಧ ವೈಯಕ್ತಿಕ ಆರೋಪಗಳನ್ನು ಮಾಡುತ್ತಿದ್ದಾರೆ. ಹೋರಾಟಕ್ಕೆ ಬಳಸಿದ ಬ್ಯಾನರ್ಗೆ ಬೆಂಕಿ ಹಚ್ಚಿದ್ದಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ದೂರು ನೀಡಲಾಗುತ್ತದೆ. ದುಷ್ಕೃತ್ಯವೆಸಗಿದವರನ್ನು ಇಪ್ಪತ್ತನಾಲ್ಕು ಗಂಟೆಗಳ ಒಳಗಾಗಿ ಬಂಧಿಸಲು ಪೊಲೀಸರು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.
::: ವಾಗ್ವಾದ ::: ಹೋರಾಟ ಸಮಿತಿಯ ಪ್ರಮುಖ ಹಾಗೂ ನಗರಸಭಾ ಸದಸ್ಯ ಹೆಚ್.ಸಿ.ಸತೀಶ್ ಬ್ಯಾನರ್ ಗೆ ಬೆಂಕಿ ಹಚ್ಚಿ ನಾಶಪಡಿಸಿರುವುದಕ್ಕೆ ಪೊಲೀಸರ ನಿರ್ಲಕ್ಷ್ಯವೇ ಕಾರಣವೆಂದು ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಸ್ಥಳದಲ್ಲಿದ್ದ ನಗರ ಠಾಣಾ ಪೊಲೀಸ್ ವೃತ್ತ ನಿರೀಕ್ಷಕ ಪಿ.ಕೆ.ರಾಜು ಅವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದಾಗ ಪರಸ್ಪರ ಮಾತಿನ ಚಕಮಕಿ ನಡೆಯಿತು.
::: ಕಾನೂನು ಕ್ರಮ ::: ದಲಿತ ಸಮುದಾಯದ ಅನುಕೂಲಕ್ಕಾಗಿ ಡಾ.ಅಂಬೇಡ್ಕರ್ ಭವನವನ್ನು ಅತ್ಯಂತ ಪರಿಶ್ರಮದಿಂದ ನಿರ್ಮಿಸಿದ್ದೇವೆ. ಆದರೆ ಇದೀಗ ನನ್ನ ವರ್ಚಸ್ಸು ಕುಂದಿಸಲು ನಿರಾಧಾರವಾದ ಆರೋಪ ಹೊರಿಸಲಾಗುತ್ತಿದ್ದು, ಅಂತಹವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುವುದಾಗಿ ಡಾ.ಅಂಬೇಡ್ಕರ್ ಭವನ ನಿರ್ಮಾಣ ಸಮಿತಿ ಅಧ್ಯಕ್ಷ ಹೆಚ್.ಎಂ.ನಂದ ಕುಮಾರ್ ತಿಳಿಸಿದರು. ಭವನದ ಗೇಟ್ಗೆ ಬ್ಯಾನರ್ ಅಳವಡಿಸಲು ಅನುಮತಿ ನೀಡಿದವರು ಯಾರೆಂದು ಪ್ರಶ್ನಿಸಿದ ನಂದ ಕುಮಾರ್, ಬ್ಯಾನರ್ಗೆ ಬೆಂಕಿ ಹಚ್ಚಿದವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ನಮ್ಮ ಅಭ್ಯಂತರವಿಲ್ಲವೆಂದು ಸ್ಪಷ್ಟಪಡಿಸಿದರು. ಅಶೋಕಪುರದ ಜನರ ಸಹಕಾರ, ಶಾಸಕರು, ಸರಕಾರದ ನೆರವು ಮತ್ತು ನಮ್ಮ ಪರಿಶ್ರಮದಿಂದ ಡಾ.ಅಂಬೇಡ್ಕರ್ ಭವನ ನಿರ್ಮಿಸಲಾಗಿದೆ. ಭವನವನ್ನು ವಶಕ್ಕೆ ಕೇಳುತ್ತಿರುವವರ ಶ್ರಮ ಸ್ವಲ್ಪವೂ ಇಲ್ಲವೆಂದ ಅವರು, ನನ್ನ ವಿರುದ್ಧ ಆರೋಪ ಮಾಡುತ್ತಿರುವವರು ದುರುಪಯೋಗ ಪಡಿಸಿರುವುದನ್ನು ಸಾಬೀತು ಪಡಿಸಲಿ ಎಂದು ಸವಾಲೆಸೆದರು.









