
ಮಡಿಕೇರಿ ಫೆ.15 NEWS DESK : ಕೊಡಗು ಜಿಲ್ಲೆಯಲ್ಲಿ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ನಿಗದಿಪಡಿಸಲಾಗಿದ್ದ ಗುರಿಗಿಂತ ಅರ್ಜಿಗಳು ಸಲ್ಲಿಕೆಯಾಗಿರುವುದು ಕಡಿಮೆಯಾಗಿದೆ. ಈ ಸಂಬಂಧ ತಳಮಟ್ಟದಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ರಾಜ್ಯಾಧ್ಯಕ್ಷರಾದ ಜಿ.ಪಲ್ಲವಿ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಅಲೆಮಾರಿ ಅಭಿವೃದ್ಧಿ ನಿಗಮದಿಂದ ನೀಡಲಾಗುವ ಸ್ವಯಂ ಉದ್ಯೋಗ, ಉದ್ಯಮಶೀಲತಾ, ಸ್ವಾವಲಂಬಿ ಸಾರಥಿ ಹಾಗೂ ಮೈಕ್ರೋ ಕ್ರೆಡಿಟ್ ಯೋಜನೆಗಳಡಿ ನಿಗದಿತ ಗುರಿಗಿಂತ ಅರ್ಜಿಗಳ ಸಲ್ಲಿಕೆ ಕಡಿಮೆಯಾಗಿದೆ. ಆದ್ದರಿಂದ ಈ ಬಗ್ಗೆ ಹೆಚ್ಚಿನ ಕಾಳಜಿವಹಿಸಿ ಪ್ರಗತಿ ಸಾಧಿಸುವಂತೆ ಸೂಚಿಸಿದರು. 2023-24 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ಯೋಜನೆಯಡಿ ನಿಗದಿಪಡಿಸಿದ 24 ರ ಭೌತಿಕ ಗುರಿಯಲ್ಲಿ 19 ಅರ್ಜಿಗಳು ಮಾತ್ರ ಸಲ್ಲಿಕೆಯಾಗಿದೆ. ಉದ್ಯಮಶೀಲತಾ ಯೋಜನೆಯಡಿ 11 ರ ಗುರಿಯಲ್ಲಿ 6 ಅರ್ಜಿಗಳು ಮಾತ್ರ ಸಲ್ಲಿಕೆಯಾಗಿದೆ. ಸ್ವಾವಲಂಭಿ ಸಾರಥಿ ಯೋಜನೆಯಡಿ 9 ರ ಗುರಿಯಲ್ಲಿ 7 ಅರ್ಜಿಗಳು ಸಲ್ಲಿಕೆಯಾಗಿದೆ. ಹಾಗೆಯೇ ಮೈಕ್ರೋ ಕ್ರೆಡಿಟ್ ಯೋಜನೆಯಡಿ 35 ಗುರಿಯಲ್ಲಿ ಒಂದೂ ಅರ್ಜಿಗಳು ಸಹ ಸಲ್ಲಿಕೆಯಾಗಿಲ್ಲ. ಇದರಿಂದ ಯಾರೂ ಸಹ ಸಾಲ ಹಾಗೂ ಸಹಾಯಧನ ಪಡೆಯಲು ಮುಂದೆ ಬರುತ್ತಿಲ್ಲವೇ ಎಂದು ಪಲ್ಲವಿ ಅವರು ಪ್ರಶ್ನಿಸಿದರು. 2024-25 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ಯೋಜನೆಯಡಿ ನಿಗದಿಪಡಿಸಿದ 111 ಗುರಿಯಲ್ಲಿ 51 ಅರ್ಜಿಗಳು ಸಲ್ಲಿಕೆಯಾಗಿದೆ. ಉದ್ಯಮಶೀಲತಾ ಯೋಜನೆಯಡಿ 14 ರ ಗುರಿಯಲ್ಲಿ 12 ಅರ್ಜಿಗಳು ಸಲ್ಲಿಕೆಯಾಗಿದೆ. ಸ್ವಾವಲಂಬಿ ಸಾರಥಿ ಯೋಜನೆಯಡಿ 19 ಅರ್ಜಿಗಳು ಸಲ್ಲಿಕೆಯಾಗಿದೆ. ಮೈಕ್ರೋ ಕ್ರೆಡಿಟ್ ಯೋಜನೆಯಡಿ 34 ರ ಗುರಿಯಲ್ಲಿ ಒಂದು ಅರ್ಜಿಯೂ ಸಹ ಸಲ್ಲಿಕೆಯಾಗಿಲ್ಲ ಎಂದು ತೀವ್ರ ಅತೃಪ್ತಿ ವ್ಯಕ್ತಪಡಿಸಿದರು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಯಾಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿಯೇ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಜಿ.ಪಲ್ಲವಿ ಅವರು ಸಲಹೆ ಮಾಡಿದರು. ಈಗಾಗಲೇ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಕೊಡಗು ಜಿಲ್ಲೆಗೆ 2.60 ಕೋಟಿ ರೂ. ಬಿಡುಗಡೆಯಾಗಿದೆ. ಪ್ರಗತಿ ಸಾಧಿಸಲು ತೊಡಕುಗಳಿದ್ದಲ್ಲಿ ಅನುದಾನವನ್ನು ವಾಪಸ್ಸು ನೀಡಿದಲ್ಲಿ ಬೇರೊಂದು ಜಿಲ್ಲೆಗೆ ಬಳಕೆ ಮಾಡಬಹುದು. ಆ ನಿಟ್ಟಿನಲ್ಲಿ ವರದಿ ನೀಡುವಂತೆ ಅಲೆಮಾರಿ ಅಭಿವೃದ್ಧಿ ನಿಗಮದ ರಾಜ್ಯಾಧ್ಯಕ್ಷರು ನಿರ್ದೇಶನ ನೀಡಿದರು. ಬೇರೆ ಜಿಲ್ಲೆಗಳಲ್ಲಿ ಸಾಲ ಸೌಲಭ್ಯ ಹಾಗೂ ಸಹಾಯಧನ ಪಡೆಯಲು ಮುಂದೆ ಬರುತ್ತಾರೆ. ಆದರೆ ಕೊಟ್ಟ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ. ಈ ರೀತಿಯಾದರೆ ಸೂಕ್ಷ್ಮ ಅಲೆಮಾರಿ ಜನಾಂಗದವರ ಬದುಕು ಸುಧಾರಣೆ ಹೇಗೆ ಎಂದು ಅವಲೋಕನ ಮಾಡಬೇಕಿದೆ ಎಂದು ಅಧ್ಯಕ್ಷರು ನುಡಿದರು. ಸಣ್ಣ ಸಣ್ಣ ಹಾಗೂ ಸೂಕ್ಷ್ಮ ಸಮಾಜಗಳನ್ನು ಅಲೆಮಾರಿ ಜನಾಂಗವೆಂದು ಗುರುತಿಸಲಾಗಿದ್ದು, ಇವರಿಗೆ ಸರ್ಕಾರದ ಸೌಲಭ್ಯಗಳನ್ನು ಮತ್ತಷ್ಟು ಆದ್ಯತೆ ಮೇಲೆ ಕಲ್ಪಿಸಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸ್ವಾವಲಂಬಿ ಉದ್ಯೋಗ ಕೈಗೊಳ್ಳುವಲ್ಲಿ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಆದಷ್ಟು ಸೌಲಭ್ಯಗಳನ್ನು ಕಲ್ಪಿಸುತ್ತಿದ್ದು, ಅದನ್ನು ಬಳಸಿಕೊಳ್ಳುವಂತಾಗಬೇಕು ಎಂದು ಹೇಳಿದರು. ಜಿಲ್ಲೆಯಲ್ಲಿ ಅಲೆಮಾರಿ ಸಮುದಾಯದ ನಿವೇಶನ ರಹಿತರಿಗೆ ನಿವೇಶನ ಒದಗಿಸಬೇಕು. ನಿವೇಶನ ಇದ್ದವರಿಗೆ ಮನೆ ನಿರ್ಮಿಸಿಕೊಡಲು ಮುಂದಾಗಬೇಕು ಎಂದು ಜಿ.ಪಲ್ಲವಿ ಅವರು ಸೂಚಿಸಿದರು. ಸರ್ಕಾರ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗೆ ವಸತಿ ಶಾಲೆ ಪ್ರವೇಶಕ್ಕೆ ಶೇ.10ರಷ್ಟು ಮೀಸಲಾತಿ ಕಲ್ಪಿಸುತ್ತಿದೆ. ಅದನ್ನು ಅಲೆಮಾರಿ ಜನಾಂಗದವರಿಗೆ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅವಕಾಶ ಮಾಡಬೇಕು. ಅಲೆಮಾರಿ ಸಮುದಾಯದವರ ಮೇಲೆ ನಡೆಯುವ ದೌರ್ಜನ್ಯ ತಡೆಯಬೇಕು. ಈ ಬಗ್ಗೆ ಅರಿವು ಮೂಡಿಸಬೇಕು ಎಂದರು. ಅಲೆಮಾರಿ ಅಭಿವೃದ್ಧಿ ನಿಗಮ ಕಾರ್ಯಕ್ರಮಗಳ ಸಂಬಂಧಿಸಿದಂತೆ ಮೂರು ತಿಂಗಳಿಗೊಮ್ಮೆ ಪ್ರಗತಿ ಪರಿಶೀಲನೆ ನಡೆಸಬೇಕು. ಆದಿವಾಸಿಗಳು ಇನ್ನೂ ಸಹ ಅರಣ್ಯ ಪ್ರದೇಶದಲ್ಲಿ ವಾಸ ಮಾಡುತ್ತಿದ್ದು, ಅವರ ಮಕ್ಕಳಿಗೆ ಶಿಕ್ಷಣ ನೀಡಿದ್ದಲ್ಲಿ ಬದಲಾವಣೆ ಸಾಧ್ಯ. ಒಂದು ಜನರೇಷನ್ ಶಿಕ್ಷಣ ಪಡೆದಲ್ಲಿ ಅರಣ್ಯದಿಂದ ಹೊರಬರಲು ಇಷ್ಟ ಪಡುತ್ತಾರೆ. ಆದ್ದರಿಂದ ಜಾಗೃತಿ ಕಾರ್ಯಕ್ರಮಗಳು ಹೆಚ್ಚಾಗಬೇಕು. ಬಾಲ್ಯವಿವಾಹ ತಡೆಯಬೇಕು ಎಂದರು. ಬಸವನಹಳ್ಳಿಯ ಮೇದಾರ ಕಾಲೋನಿ, ದಿಡ್ಡಳ್ಳಿಯ ಪುನರ್ ವಸತಿ ಕೇಂದ್ರ, ಹಾಗೆಯೇ ದೊಡ್ಡಬೆಟ್ಟಗೇರಿಯ ಸೋಲಿಗ ಕಾಲೋನಿ, ತಿತಿಮತಿ ವ್ಯಾಪ್ತಿಯ ಬೊಂಬುಕಾಡು, ಮಾಲ್ದಾರೆ ವ್ಯಾಪ್ತಿಯ ಆಸ್ತನಹಾಡಿ, ಮದೆನಾಡು ಗ್ರಾ.ಪಂ.ವ್ಯಾಪ್ತಿಯ ಜೋಡುಪಾಲ ಹೀಗೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ನಿವೇಶನ, ಮನೆ ಹಾಗೂ ಮೂಲ ಸೌಲಭ್ಯಕ್ಕೆ ಹೆಚ್ಚಿನ ಜನರು ಮನವಿ ಮಾಡಿದ್ದಾರೆ ಎಂದು ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ವಿವರಿಸಿದರು. ನಿವೇಶನ ಹಾಗೂ ವಸತಿ ಸೇರಿದಂತೆ ಅಗತ್ಯ ಮೂಲಸೌಲಭ್ಯ ಕಲ್ಪಿಸಬೇಕು. ಜೊತೆಗೆ ಸರ್ಕಾರದ ಸೌಲಭ್ಯಗಳಾದ ಸ್ವಯಂ ಉದ್ಯೋಗ, ಉದ್ಯಮಶೀಲತೆ, ಸ್ವಾವಲಂಬಿ ಸಾರಥಿ, ಮೈಕ್ರೋ ಕ್ರೆಡಿಟ್ ಮತ್ತಿತರ ಯೋಜನೆಗಳನ್ನು ತಲುಪಿಸಿದಲ್ಲಿ ಆರ್ಥಿಕವಾಗಿ ಸದೃಢರಾಗಲು ಸಾಧ್ಯವಾಗಲಿದೆ. ಆದ್ದರಿಂದ ತಳಮಟ್ಟದ ಅಧಿಕಾರಿಗಳು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು. ಅಲೆಮಾರಿ ನಿಗಮ ಜಾಗೃತಿ ಸಮಿತಿ ಸದಸ್ಯರು ಸಹ ಈ ನಿಟ್ಟಿನಲ್ಲಿ ಹೆಚ್ಚಿನ ಕಾಳಜಿವಹಿಸಬೇಕು ಎಂದು ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹೇಳಿದರು. ಜಿಲ್ಲೆಯಲ್ಲಿ ಸೂಕ್ಷ್ಮ, ಸಣ್ಣ ಹಾಗೂ ಅತಿ ಸಣ್ಣ ಸಮುದಾಯ ಮತ್ತು ಕುಟುಂಬಗಳು ಇದ್ದು, ಶಿಕ್ಷಣ ಇಲ್ಲದಿರುವುದು ಕಂಡು ಬರುತ್ತದೆ. ಆದ್ದರಿಂದ ಸರ್ಕಾರದ ಸೌಲಭ್ಯಗಳನ್ನು ಒದಗಿಸಲು ಹೆಚ್ಚಿನ ಜಾಗೃತಿ ಮೂಡಿಸಬೇಕು. ಅಧಿಕಾರಿಗಳು ಹಾಡಿಗಳಿಗೆ ಭೇಟಿ ನೀಡಬೇಕು ಎಂದರು. ಆದಿವಾಸಿಗಳಿಗೆ ಸಂವಿಧಾನ ಬದ್ಧ ಹಕ್ಕುಗಳು ದೊರೆಯಬೇಕು. ಹಾಗಾದಾಗ ಮಾತ್ರ ಸೌಲಭ್ಯಗಳು ದೊರೆಯಲು ಸಾಧ್ಯ. ಆದಿವಾಸಿಗಳಿಗೆ ಶಿಕ್ಷಣ, ಆರೋಗ್ಯ, ಸ್ವಯಂ ಉದ್ಯೋಗ ಕೈಗೊಳ್ಳುವ ಬಗ್ಗೆಯೂ ಜಾಗೃತಿ ಮೂಡಿಸಬೇಕು ಎಂದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ ಅಲೆಮಾರಿ ಜನಾಂಗದವರಿಗೆ ನೀಡಲಾಗುವ ಸೌಲಭ್ಯಗಳನ್ನು ಫೆಬ್ರವರಿ ಅಂತ್ಯದೊಳಗೆ ಪ್ರಗತಿ ಸಾಧಿಸಲಾಗುವುದು ಎಂದು ಹೇಳಿದರು. ಅಲೆಮಾರಿ ಸಮುದಾಯಗಳಿಗೆ ಇರುವ ಸೌಲಭ್ಯ ಕಲ್ಪಿಸಲಾಗುವುದು. ನಿವೇಶನ ರಹಿತರಿಗೆ ನಿವೇಶನ, ವಸತಿ ರಹಿತರಿಗೆ ವಸತಿ ಕಲ್ಪಿಸಲು ಆದ್ಯತೆ ಮೇಲೆ ಕ್ರಮಕೈಗೊಳ್ಳಲಾಗುವುದು ಎಂದು ವಿವರಿಸಿದರು. ಕರ್ನಾಟಕ ಅಲೆಮಾರಿ ಅಭಿವೃದ್ಧಿ ನಿಗಮದ ವಿಶೇಷ ಕರ್ತವ್ಯಾಧಿಕಾರಿ ಆನಂದ್ ಕುಮಾರ್ ಅವರು ವಿವಿಧ ಜಿಲ್ಲೆಗಳಲ್ಲಿ ಅನುದಾನಕ್ಕೆ ಬೇಡಿಕೆ ಇದ್ದು, ಆ ನಿಟ್ಟಿನಲ್ಲಿ ಅನುದಾನ ಸಂಬಂಧ ಅಗತ್ಯ ಮಾಹಿತಿ ಒದಗಿಸುವಂತೆ ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಅವರು ಮಾಹಿತಿ ನೀಡಿ ಕೊಡಗು ಜಿಲ್ಲೆಯಲ್ಲಿ ಅಲೆಮಾರಿ ಸಮುದಾಯದ ನಿವೇಶನ ರಹಿತ 5916 ಕುಟುಂಬಗಳಿದ್ದು, ಮಡಿಕೇರಿ ತಾಲ್ಲೂಕಿನಲ್ಲಿ 279, ಕುಶಾಲನಗರ 508, ಸೋಮವಾರಪೇಟೆ 147, ವಿರಾಜಪೇಟೆ 1261 ಮತ್ತು ಪೊನ್ನಂಪೇಟೆ ತಾಲ್ಲೂಕಿನಲ್ಲಿ 3721 ಕುಟುಂಬಗಳಿಗೆ ನಿವೇಶನ ಒದಗಿಸಬೇಕಿದೆ ಎಂದು ಮಾಹಿತಿ ನೀಡಿದರು. ಈ ಕುರಿತು ಮಾತನಾಡಿದ ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ ಅವರು ಸೋಮವಾರಪೇಟೆ ತಾಲ್ಲೂಕಿನ ಹೆಬ್ಬಾಲೆ ಬಳಿಯ ರಾಂಪುರ ಬಳಿ 10 ಎಕರೆ, ವಿರಾಜಪೇಟೆ ತಾಲ್ಲೂಕಿನ ಬಿರುನಾಣಿ ಬಳಿ 19 ಎಕರೆ ಹಾಗೂ ತೆರಾಳು ಬಳಿ 20 ಎಕರೆ ಜಾಗ ಗುರುತಿಸಲಾಗಿದೆ. ಒಟ್ಟು 280 ಎಕರೆ ಭೂಮಿ ಬೇಕಿದ್ದು, ಇದರಲ್ಲಿ 80 ಎಕರೆ ಜಾಗ ಗುರುತಿಸಲಾಗಿದೆ. ಇನ್ನೂ 200 ಎಕರೆ ಭೂಮಿ ಬೇಕಿದೆ ಎಂದು ಮಾಹಿತಿ ನೀಡಿದರು. ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಗಂಗಾಧರ ನಾಯಕ್ ಅವರು ಸಾಲ ಸೌಲಭ್ಯ ಕಲ್ಪಿಸುವ ಸಂಬಂಧ ಬ್ಯಾಂಕ್ಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜ ಅವರು ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಏಪ್ರಿಲ್ನಿಂದ ಇದುವರೆಗೆ 5 ಬಾಲ್ಯವಿವಾಹ ಪ್ರಕರಣಗಳು ಕಂಡುಬಂದಿದ್ದು, ಪೊಲೀಸ್ ಇಲಾಖೆಯಲ್ಲಿ ಪ್ರಕರಣ ದಾಖಲಾಗಿವೆ ಎಂದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ತಹಶೀಲ್ದಾರರು, ವಿವಿಧ ಇಲಾಖಾ ಅಧಿಕಾರಿಗಳು ಇದ್ದರು. ಸಾರ್ವಜನಿಕರ ಅಹವಾಲು ಆಲಿಸಿದ ಅಧ್ಯಕ್ಷರು: ನಗರದ ಸುದರ್ಶನ ಅತಿಥಿ ಗೃಹದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯಗಳ ಅಹವಾಲು ಆಲಿಸಿ, ಮನವಿ ಪತ್ರ ಸ್ವೀಕರಿಸಿದರು. ಅಹವಾಲು ಆಲಿಸಿ ಮಾತನಾಡಿದ ಜಿ.ಪಲ್ಲವಿ ಅವರು ಕೊಡಗು ಜಿಲ್ಲೆಗೆ ಮತ್ತೆ ಭೇಟಿ ನೀಡಲಾಗುವುದು. ಭೂ ಪ್ರದೇಶ ವಿಶಾಲವಾಗಿದ್ದು, ಇನ್ನೂ ಹೆಚ್ಚಿನ ಹಾಡಿಗಳಿಗೆ ಭೇಟಿ ನೀಡಿ ಶಿಕ್ಷಣ, ಆರೋಗ್ಯಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆಯಲಾಗುವುದು ಎಂದರು. ಈಗಾಗಲೇ ರಾಜ್ಯದ 17 ಜಿಲ್ಲೆಗಳಿಗೆ ಭೇಟಿ ನೀಡಲಾಗಿದೆ. ಅಲೆಮಾರಿ ಸಮಾಜಗಳಿಗೆ ಆದಷ್ಟು ಸರ್ಕಾರದ ಸೌಲಭ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ. ಸೂಕ್ಷ್ಮ, ಸಣ್ಣ ಸಣ್ಣ ಸಮಾಜಗಳನ್ನು ಗುರುತಿಸಿ ಅವರ ಕುಂದುಕೊರತೆಗಳನ್ನು ಆಲಿಸಲು ಖುದ್ದು ಭೇಟಿ ನೀಡಲಾಗುತ್ತದೆ ಎಂದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ತಾಲ್ಲೂಕು ಸಮಾಜ ಕಲ್ಯಾಣ ಅಧಿಕಾರಿ ಬಾಲಕೃಷ್ಣ ರೈ, ಸಿದ್ದೇಗೌಡ, ಪ್ರೀತಿ ಚಿಕ್ಕಮಾದಯ್ಯ, ತೇಜಕುಮಾರ, ಇತರರು ಇದ್ದರು.









