
ಮಡಿಕೇರಿ ಮಾ.1 NEWS DESK : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನ ವಿರೋಧಿ ನೀತಿಗಳನ್ನು ಖಂಡಿಸಿ, ಕಾರ್ಮಿಕ ವರ್ಗದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾ.3 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯಲಿರುವ ಅಹೋರಾತ್ರಿ ಅನಿರ್ಧಿಷ್ಟಾವಧಿ ಧರಣಿ “ವಿಧಾನಸೌಧ ಚಲೋ” ಅಂಗವಾಗಿ ಮಡಿಕೇರಿಯಲ್ಲಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ವತಿಯಿಂದ ಪ್ರಚಾರ ಆಂದೋಲನ ನಡೆಯಿತು.
ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಸಮಾವೇಶಗೊಂಡ ಸಿಐಟಿಯು ಸಂಘಟನೆಯ ಪ್ರಮುಖರು ಹಾಗೂ ಪದಾಧಿಕಾರಿಗಳು ಪ್ರಚಾರ ಆಂದೋಲನಕ್ಕೆ ಚಾಲನೆ ನೀಡಿ, ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿದರು. ಈ ಸಂದರ್ಭ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಕೇಂದ್ರ ಸರ್ಕಾರ ರೂಪಿಸಿರುವ ಕಾರ್ಮಿಕ ವಿರೋಧಿ 4 ಸಂಹಿತೆಗಳನ್ನು ರಾಜ್ಯ ಸರ್ಕಾರ ಜಾರಿ ಮಾಡಬಾರದು, ಕಾರ್ಮಿಕರ ಪರವಾದ ಕಾನೂನುಗಳನ್ನು ಜಾರಿ ಮಾಡಬೇಕು, ಬೆಲೆ ಏರಿಕೆಯ ಸೂಚ್ಯಾಂಕದಲ್ಲಿ ಹೆಚ್ಚಳವಾಗುವ ಪ್ರತಿ ಅಂಶಕ್ಕೂ ಪ್ರತಿದಿನಕ್ಕೆ 6 ಪೈಸೆ ತುಟ್ಟಿಭತ್ಯೆ (ಗಿಆಂ) ಯೊಂದಿಗೆ ಸಮಾನ ಕನಿಷ್ಟ ವೇತನ ಪರಿಷ್ಕರಿಸಿ ಜಾರಿ ಮಾಡಬೇಕು, ಪ್ರತಿ ಕುಶಲತೆಗೆ ಶೇ.15 ರಷ್ಟು ಹೆಚ್ಚಳ ನೀಡಬೇಕು. ಕೇಂದ್ರದ ಶಾಸನಗಳ ನಿಯಮಾವಳಿಗಳನ್ನು ರಾಜ್ಯ ಸರ್ಕಾರ ಜಾರಿ ಮಾಡಬಾರದು, ವಿದ್ಯುಚ್ಛಕ್ತಿ ಖಾಸಗೀಕರಣ ಕೈಬಿಡಬೇಕು. ವಿದ್ಯುತ್ ತಿದ್ದುಪಡಿ ಮಸೂದೆ 2020ನ್ನು ತಿರಸ್ಕರಿಸಬೇಕು, ಬೆಲೆ ಏರಿಕೆ ಆಧಾರದಲ್ಲಿನ ತುಟ್ಟಿಭತ್ಯೆಯೊಂದಿಗೆ ಎಲ್ಲಾ ವಿಭಾಗಗಳಲ್ಲಿನ ಅಕುಶಲ ಕಾರ್ಮಿಕರಿಗೆ ಸಮಾನ ಕಮಿಷ್ಠ ವೇತನ ರೂ.31,566 ಜಾರಿ ಮಾಡಬೇಕೆಂದು ಒತ್ತಾಯಿಸಿದರು. ಹಮಾಲಿ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು, ಟೈಲರ್ಗಳು, ಮೆಕ್ಯಾನಿಕ್ಕಳು ಮನೆಗೆಲಸ ಮಹಿಳೆಯರು ಸೇರಿದಂತೆ ಕಾರ್ಮಿಕ ಇಲಾಖೆ ರೂಪಿಸಿರುವ ಅಸಂಘಟಿತ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಮತ್ತು ಭವಿಷ್ಯ ನಿಧಿ ಯೋಜನೆ ಜಾರಿಗಾಗಿ ಕನಿಷ್ಟ 500 ಕೋಟಿ ಹಣವನ್ನು ಬಜೆಟ್ನಲ್ಲಿ ನೀಡಬೇಕು, ಸಾರ್ವಜನಿಕ ಉದ್ದಿಮೆಗಳ ಹಾಗೂ ಸೇವೆಗಳ ಖಾಸಗೀಕರಣದ ನೀತಿಗಳನ್ನು ಕೈಬಿಡಬೇಕು, ಕಾರ್ಮಿಕ ಸಂಘದ ಮಾನ್ಯತೆಗೆ, ಗುತ್ತಿಗೆ ಮುಂತಾದ ಖಾಯಮೇತರ ಕಾರ್ಮಿಕರ ಕೆಲಸದ ಖಾಯಂಮಾತಿಗೆ ಶಾಸನ ರೂಪಿಸಿ ಜಾರಿಗೊಳಿಸಬೇಕೆಂದು ಆಗ್ರಹಿಸಿದರು. ಸರ್ಕಾರ ಸಾರ್ವಜನಿಕ ಉಧ್ಯಮಗಳು, ನಿಗಮ ಮಂಡಳಿಗಳಲ್ಲಿ ಮತ್ತು ಇಲಾಖೆಗಳಲ್ಲಿ ದುಡಿಯುವ ಗುತ್ತಿಗೆ ನೌಕರರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಿ ಖಾಯಂ ಮಾಡಬೇಕು, ಗುತ್ತಿಗೆ ಕಾರ್ಮಿಕರ ನಿಯಂತ್ರಣಕ್ಕೆ ಅಗತ್ಯ ಕ್ರಮ ವಹಿಸಬೇಕು, ಎಲ್ಲಾ ಜಿಲ್ಲೆಗಳಲ್ಲೂ ಕಾರ್ಮಿಕ ನ್ಯಾಯಾಲಯಗಳನ್ನು ಸ್ಥಾಪಿಸಬೇಕು, ನ್ಯಾಯಾಧೀಶರ ನೇಮಕಮಾಡಬೇಕು, ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್ಕೆಜಿ-ಯುಕೆಜಿ ಪ್ರಾರಂಭಿಸಬೇಕು ಹಾಗೂ ಕಾರ್ಮಿಕರಿಗೆ ವೇತನ ಪರಿಷ್ಕರಣೆಯಾಗಬೇಕು, ಗ್ರಾಚ್ಯುಟಿ ಪಾವತಿಗೆ ಕ್ರಮವಹಿಸಬೇಕೆಂದು ಒತ್ತಾಯಿಸಿದರು. ಬಿಸಿಯೂಟ ನೌಕರರಿಗೆ ವೇತನ ಹೆಚ್ಚಳ ಮಾಡಬೇಕು, ನಿವೃತ್ತಿ ವೇತನ ಸೌಲಭ್ಯವಿಲ್ಲದೆ ಯಾರನ್ನೂ ಕೆಲಸದಿಂದ ಬಿಡುಗಡೆ ಮಾಡಬಾರದು, ಕಟ್ಟಡ ಕಾರ್ಮಿಕರಿಗೆ ಘೋಷಿಸಿರುವ ಎಲ್ಲ ಸೌಲಭ್ಯಗಳನ್ನು ಜಾರಿಗೊಳಿಸಬೇಕು. ಕಲ್ಯಾಣ ಮಂಡಳಿ ನಿಧಿ ದುರುಪಯೋಗ ನಿಲ್ಲಬೇಕು, ವಿವಿಧ ಕಿಟ್ ಖರೀದಿಗಳಲ್ಲಿ ನಡೆದಿರುವ ಭ್ರಷ್ಟಚಾರ ತನಿಖೆಯಾಗಬೇಕು ಮತ್ತು ಬಾಕಿ ಶೈಕ್ಷಕಣಿಕ, ಮದುವೆ, ಪಿಂಚಣಿ, ಆರೋಗ್ಯ ಅರ್ಜಿಗಳಿಗೆ ಕೂಡಲೇ ಧನ ಸಹಾಯ ಪಾವತಿಯಾಗಬೇಕು, ಕಟ್ಟಡ ಸಾಮಾಗ್ರಿಗಳ ಮೇಲಿನ ಜಿ.ಎಸ್.ಟಿ ಕಡಿತ ಮಾಡಬೇಕು, ಹೈಕೋರ್ಟ್ ತೀರ್ಪಿನಂತೆ ಶೈಕ್ಷಣಿಕ ಧನ ಸಹಾಯ ಪಾವತಿಸಬೇಕೆಂದು ಆಗ್ರಹಿಸಿದರು. ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ನೀಡುವುದರಲ್ಲಿ ಕೊರತೆಯಾಗಿರುವ ರೂ.380 ಕೋಟಿ ಹಣವನ್ನು ಬಿಡುಗಡೆ ಮಾಡಲು ಬಜೆಟ್ ನಲ್ಲಿ ಅವಕಾಶ ಕಲ್ಪಿಸಬೇಕು. ಇ.ಎಫ್.ಎಂ.ಎಸ್ ಗೆ ಸೇರ್ಪಡೆಯಾಗದೆ ಉಳಿದಿರುವ ನೌಕರರನ್ನು ಸೇರಿಸಬೇಕು, ಕಸಗುಡಿಸುವವರಿಗೆ ಅನುಮೋದನೆ ನೀಡಬೇಕು ಮತ್ತು ಕನಿಷ್ಠ ವೇತನ ಪರಿಷ್ಕರಣೆ ಆಗಬೇಕು, ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ಎಲ್ಲಾ ಮುನಿಸಿಪಲ್ ಕಾರ್ಮಿಕರ ಸೇವೆಗಳನ್ನು ಖಾಯಂಗೊಳಿಸಬೇಕು, ಉಳಿದವರಿಗೆಲ್ಲ ಗುತ್ತಿಗೆ ರದ್ದು ಮಾಡಿ ನೇರ ಪಾವತಿ ಅಡಿಯಲ್ಲಿ ಸಂಬಳ ಪಾವತಿ ಮಾಡಬೇಕು, ತೋಟ ಕಾರ್ಮಿಕರ ಕಾಯ್ದೆಯನ್ನು ಉಳಿಸಿ ಪ್ಲಾಂಟೇಶನ್ ಕಾರ್ಮಿಕರಿಗೆ ಪ್ರತ್ಯೇಕ ಕಲ್ಯಾಣ ಮಂಡಳಿ ಸ್ಥಾಪಿಸಿ ಮನೆ, ಶಿಕ್ಷಣ, ಆರೋಗ್ಯ, ಸವಲತ್ತುಗಳನ್ನು ಜಾರಿ ಮಾಡಬೇಕು, ರಾಷ್ಟ್ರೀಯ ಕಾರ್ಮಿಕ ಸಮ್ಮೇಳನದ ಮಾದರಿಯಲ್ಲಿ ರಾಜ್ಯ ಕಾರ್ಮಿಕ ಸಮ್ಮೇಳನ ನಡೆಸಬೇಕು, ಗಿಗ್ ಆರ್ಥಿಕತೆಯ ಕಾರ್ಮಿಕರ ಸೇವಾ ಶರತ್ತುಗಳ ಶಾಸನ ರೂಪಿಸಿ ಜಾರಿಗೊಳಿಸಬೇಕು, ಸೇಲ್ಸ್ ಪ್ರಮೋಷನ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳ ಕುರಿತು ಕಾನೂನುಗಳನ್ನು ಜಾರಿಗೊಳಿಸಬೇಕು, ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ವಾರ್ಷಿಕ 200 ದಿನಗಳ ಕೆಲಸ ಹಾಗೂ ದಿನಕ್ಕೆ ರೂ.700 ವೇತನದೊಂದಿಗೆ ನೀಡಬೇಕು, ನಗರ ಪ್ರದೇಶಗಳಿಗೂ ಈ ಯೋಜನೆಯನ್ನು ವಿಸ್ತರಿಸಿ ಜಾರಿ ಮಾಡಬೇಕು, ಕೇಂದ್ರ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ ಬರಬೇಕಾದ ಜಿಎಸ್ಟಿ ಪಾಲನ್ನು ಪಡೆಯಲು ಕೂಡಲೇ ಕ್ರಮವಹಿಸಬೇಕು, ಎಲ್ಲಾ ಖಾಸಗಿ ನೌಕರರಿಗೂ ನಿವೃತ್ತಿ ವಯಸ್ಸು 60 ವರ್ಷ ಆಗಬೇಕೆಂಬ ತೀರ್ಮಾನ ಸಮರ್ಪಕವಾಗಿ ಜಾರಿಯಾಬೇಕು, ಕೊಡಗಿಗೆ ರೈಲು ತರುವ ಪ್ರಯತ್ನ ಆಗಬೇಕು, ಕಾಡು ಪ್ರಾಣಿಗಳ ಉಪಟಳದಿಂದ ಮನುಷ್ಯರ ಹತ್ಯೆಯನ್ನು ತಡೆಗಟ್ಟಲು ಸರ್ಕಾರ ಶಾಶ್ವತ ಯೋಜನೆ ರೂಪಿಸಬೇಕು, ಭೂಗುತ್ತಿಗೆ ಕಾಯ್ದೆಯನ್ನು ಸರ್ಕಾರ ತಕ್ಷಣ ಹಿಂಪಡೆಯಬೇಕು, ಜಿಲ್ಲೆಯ ನಿವೇಶನ ರಹಿತರಿಗೆ ನಿವೇಶನ, ಭೂರಹಿತರಿಗೆ ಭೂಮಿಯನ್ನು ಹಂಚಬೇಕೆಂದು ಆಗ್ರಹಿಸಿದರು. ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎ.ಸಿ.ಸಾಬು, ಖಜಾಂಚಿ ಎನ್.ಡಿ.ಕುಟ್ಟಪ್ಪನ್, ಸದಸ್ಯ ಸಾಜಿ ರಮೇಶ್, ಬಿಸಿಯೂಟ ನೌಕರರ ಸಂಘದ ಸರಳಿ, ರಾಧ, ರೈತ ಸಂಘದ ನಾಯಕ ಟಿ.ಟಿ.ಉದಯ್ ಕುಮಾರ್, ಅಂಗನವಾಡಿ ನೌಕರರ ಸಂಘದ ಸರೋಜ, ಆಸ್ಪತ್ರೆ ನೌಕರರ ಸಂಘದ ಜಾನಕಿ, ಬೇಬಿ ಸೇರಿದಂತೆ ವಿವಿಧ ಸಂಘಟನೆಯ ಪ್ರಮುಖರು ಆಂದೋಲನದಲ್ಲಿ ಪಾಲ್ಗೊಂಡಿದ್ದರು.









