
ಮಡಿಕೇರಿ ಮೇ 7 NEWS DESK : ಮುಂಬರುವ ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯ ಸಂದರ್ಭ ಆದಿಮಸಂಜಾತ ಬುಡಕಟ್ಟು ಜನಾಂಗ ಕೊಡವರಿಗಾಗಿ ಪ್ರತ್ಯೇಕ “ಕಾಲಮ್ ಮತ್ತು ಕೋಡ್” ಸೇರಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಮೇ 9 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಸತ್ಯಾಗ್ರಹ ನಡೆಸಲಾಗುವುದೆಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶುಕ್ರವಾರ ಬೆಳಿಗ್ಗೆ 10.30 ರಿಂದ 11.30 ಗಂಟೆಯವರೆಗೆ ಸತ್ಯಾಗ್ರಹ ನಡೆಯಲಿದ್ದು, ಜಿಲ್ಲಾಡಳಿತದ ಮೂಲಕ ಕೇಂದ್ರ ಗೃಹ ಮಂತ್ರಿಗಳು ಹಾಗೂ ಅದರ ಅಧೀನದಲ್ಲಿ ಬರುವ ಭಾರತದ ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರಿಗೆ (ಆರ್ಜಿಸಿಸಿಐ) ವಿವರವಾದ ಮನವಿ ಪತ್ರವನ್ನು ಸಲ್ಲಿಸಲಾಗುವುದು ಎಂದರು. ಜನಗಣತಿಯಲ್ಲಿ ಕೊಡವ ಸಮುದಾಯದ ವಿಶಿಷ್ಟ ಸಾಂಸ್ಕೃತಿಕ ಗುರುತನ್ನು ನಿಖರವಾಗಿ ಪ್ರತಿನಿಧಿಸಲು ಮತ್ತು ಕೊಡವ ಜನಸಂಖ್ಯಾ ಪ್ರಾತಿನಿಧ್ಯವನ್ನು ಖಚಿತಪಡಿಸಿಕೊಳ್ಳಲು ಪ್ರತ್ಯೇಕ ಕಾಲಮ್ ಮತ್ತು ಕೋಡ್ ನ್ನು ಸೇರಿಸಬೇಕು. ಸಿಕ್ಕಿಂನ ಬೌದ್ಧ ಸನ್ಯಾಸಿ ಸಮುದಾಯಕ್ಕೆ ನೀಡಿದ “ಸಂಘ” ಕ್ಷೇತ್ರದಂತೆ, ಸೂಕ್ಷ್ಮ ಜನಾಂಗ ಕೊಡವರಿಗೆ ಸಂಸತ್ ಮತ್ತು ವಿಧಾನಸಭೆಯಲ್ಲಿ ವಿಶೇಷ ರಾಜಕೀಯ ಸ್ಥಾನಮಾನ ನೀಡಬೇಕು.
ಜನಗಣತಿಯಲ್ಲಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ಕೊಡವ ಸಮುದಾಯದ ನಿಖರವಾದ ಪ್ರಾತಿನಿಧ್ಯವನ್ನು ಖಚಿತಪಡಿಸುತ್ತದೆ. ಸೋಶಿಯಲ್ ಎಂಜಿನಿಯರಿಂಗ್ ಸರ್ಕಾರವು ಸಮುದಾಯದ ನಿರ್ದಿಷ್ಟ ಅಗತ್ಯಗಳನ್ನು ಅರ್ಥಮಾಡಿಕೊಳ್ಳಲು ಹಾಗೂ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗಾಗಿ ಉದ್ದೇಶಿತ ನೀತಿಗಳನ್ನು ಅಭಿವೃದ್ಧಿಪಡಿಸಲು ಅನುವು ಮಾಡಿಕೊಡುತ್ತದೆ. ಪ್ರತ್ಯೇಕ ಕೋಡ್ ಮತ್ತು ಕಾಲಮ್ ಕೊಡವ ಸಮುದಾಯದ ವಿಶಿಷ್ಟ ಗುರುತು ಹಾಗೂ ಅಸ್ತಿತ್ವವನ್ನು ರಕ್ಷಿಸಲು ಸಹಾಯ ಮಾಡುತ್ತದೆ. ಏಕ-ಜನಾಂಗೀಯ ಸಮುದಾಯವಾಗಿ ಕೊಡವರು ವಿಶಿಷ್ಟ ಸಾಂಸ್ಕೃತಿಕ ಮತ್ತು ಐತಿಹಾಸಿಕ ಕುರುಹುವನ್ನು ಹೊಂದಿದ್ದು ಅದರ ಗುರುತಿಸುವಿಕೆ ಮತ್ತು ರಕ್ಷಣೆಗೆ ಅರ್ಹವಾಗಿದೆ. ಕೊಡವರ ಯೋಧ ಪರಂಪರೆಯು ಅವರ ಗುರುತಿನ ಅವಿಭಾಜ್ಯ ಅಂಗವಾಗಿದೆ ಮತ್ತು ಜನಗಣತಿಯಲ್ಲಿ ನಿಖರವಾದ ಪ್ರಾತಿನಿಧ್ಯವು ಅವರ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಲು ಸಹಾಯ ಮಾಡುತ್ತದೆ.
1871-72 ರಿಂದ 1931 ರವರೆಗಿನ ಜನಗಣತಿ ನಿಖರ ಮತ್ತು ವೈಜ್ಞಾನಿಕವಾಗಿದ್ದು, ಕೊಡವ ಕುಲವನ್ನು ಕೊಡವ ಲ್ಯಾಂಡ್ ನ ಏಕ-ಜನಾಂಗೀಯ, ಸ್ವತಂತ್ರ, ಆದಿಮಸಂಜಾತ ಯೋಧ ಕುಲವೆಂದು ದಾಖಲಿಸಲಾಗಿದೆ. ಇದರಿಂದಾಗಿ ಕೊಡವ ಜನಾಂಗೀಯ ಪೂರ್ವಾರ್ಜಿತತೆಯನ್ನು ಗುರುತಿಸಲಾಗಿದೆ. ಅದಾಗ್ಯೂ, 1941 ರಿಂದ 2011 ರವರೆಗೆ ಕೊಡವರನ್ನು ಆಡಳಿತಾತ್ಮಕ ಉದ್ದೇಶಗಳಿಗಾಗಿ ಸರ್ಕಾರ ಉದ್ದೇಶಪೂರ್ವಕವಾಗಿ ಇತರ ಸಮುದಾಯಗಳೊಂದಿಗೆ ವಿಲೀನಗೊಳಿಸಿತು. ಇದು ಕೊಡವ ಸಮುದಾಯದ ಗುರುತು ಮತ್ತು ಅಸ್ತಿತ್ವಕ್ಕೆ ದಕ್ಕೆಯನ್ನುಂಟುಮಾಡಿತು ಎಂದು ನಾಚಪ್ಪ ತಿಳಿಸಿದ್ದಾರೆ.
ಜಾತಿ ಗಣತಿ ಮತ್ತು ಜನಗಣತಿ ಸಂದರ್ಭ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ಸೇರಿಸಬೇಕು, ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ ನೀಡಬೇಕು, ಕೊಡವರಿಗೆ ಎಸ್ಟಿ ಟ್ಯಾಗ್ ಘೋಷಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸತ್ಯಾಗ್ರಹದ ಸಂದರ್ಭ ಸರ್ಕಾರದ ಮುಂದಿಡುವುದಾಗಿ ಎನ್.ಯು.ನಾಚಪ್ಪ ತಿಳಿಸಿದ್ದಾರೆ.









