
ಮಡಿಕೇರಿ ಮೇ 22 NEWS DESK : ಕಾಡಾನೆಗಳಿಗೆ ಪುನರ್ವಸತಿ ಕಲ್ಪಿಸಿದಲ್ಲಿ ಮುಂದಿನ 2 ವರ್ಷಗಳಲ್ಲಿ ಕಾಡಾನೆ ಉಪಟಳ ನಿಯಂತ್ರಣಕ್ಕೆ ಬರಲಿದೆ ಎಂದು ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಸಂಕೇತ್ ಪೂವಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಘೋಷಿಸಿದಂತೆ ಭದ್ರಾ ಸಾಫ್ಟ್ ಏರಿಯಾ ಲಿಸ್ಟ್ ನಲ್ಲಿ ಕಾಡಾನೆಗಳಿಗೆ ಪುನರ್ವಸತಿ ಕಲ್ಪಿಸಲು 2ರಿಂದ 3 ವರ್ಷಗಳು ಬೇಕಾಗಬಹುದು ಎಂದರು. ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ದೇವರಪುರದಲ್ಲಿ ವ್ಯಕ್ತಿಯೊಬ್ಬರನ್ನು ಕಾಡಾನೆ ಬಲಿ ಪಡೆದ ದುರ್ಘಟನೆಯನ್ನು ಶಾಸಕ ಎ.ಎಸ್.ಪೊನ್ನಣ್ಣ ಅವರು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾರೆ. ಕಾಡಾನೆ ಸೆರೆಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ ಎಂದು ತಿಳಿಸಿದರು. ರಾಜ್ಯದ ಏಳೆಂಟು ಜಿಲ್ಲೆಗಳಲ್ಲಿ ಮಾನವ ವನ್ಯಜೀವಿ ಸಂಘರ್ಷವಿದೆ. ಕಾಡಾನೆ ಹಾವಳಿಯಿಂದಾಗಿ ರಾಜ್ಯದಲ್ಲೇ ಅತೀ ಹೆಚ್ಚು ಜೀವಹಾನಿ ಕೊಡಗು ಜಿಲ್ಲೆಯಲ್ಲಿ ಆಗುತ್ತಿದೆ. ಕಾಡಿನಲ್ಲಿರುವ ಆನೆಗಳಿಗಿಂತಲೂ ಹೆಚ್ಚಾಗಿ ತೋಟಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳಿಂದ ಸಮಸ್ಯೆಯಾಗುತ್ತಿದೆ. ಸಮಸ್ಯೆ ಪರಿಹಾರಕ್ಕೆ ಎಲ್ಲಾ ಪಕ್ಷಗಳು, ಸಂಘ ಸಂಸ್ಥೆಗಳ ಸಹಕಾರ ಅಗತ್ಯವೆಂದರು. ಗಣತಿ ಪ್ರಕಾರ ನಾಗರಹೊಳೆಯಲ್ಲಿ 2 ಸಾವಿರ ಕಾಡಾನೆಗಳಿದ್ದು, 563 ಹುಲಿಗಳು ಇವೆ. ಜನವಸತಿ ಪ್ರದೇಶದಲ್ಲಿರುವ ಎರಡು ಹುಲಿಗಳನ್ನು ಸೆರೆ ಹಿಡಿಯಲು ಸಂಬಂಧಿಸಿದ ಇಲಾಖೆಯಿಂದ ಅನುಮತಿ ದೊರೆತ್ತಿದೆ. ಆದರೆ ಅರಣ್ಯ ಇಲಾಖೆ ಕಾರ್ಯಗತ ಮಾಡುತ್ತಿಲ್ಲವೆಂದು ಸಂಕೇತ್ ಪೂವಯ್ಯ ಅಸಮಾಧಾನ ವ್ಯಕ್ತಪಡಿಸಿದರು. ಅರಣ್ಯ ಇಲಾಖಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.









