
ಮಡಿಕೇರಿ ಮೇ 31 NEWS DESK : ಪೌರಸೇವಾ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸಂಘ ಕರೆ ನೀಡಿರುವ ಅನಿರ್ಧಿಷ್ಟಾವಧಿ ಮುಷ್ಕರವನ್ನು ಬೆಂಬಲಿಸಿ ಮಡಿಕೇರಿಯಲ್ಲಿಯೂ ಪೌರಸೇವಾ ನೌಕರರು ಮುಷ್ಕರ ಆರಂಭಿಸಿದ್ದಾರೆ. ನಗರಸಭೆಯ ಎದುರು ಧರಣಿ ನಡೆಸುತ್ತಿರುವ ಪೌರಸೇವಾ ನೌಕರರು ಸರ್ಕಾರ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು. ಬೇಡಿಕೆಗಳ ಕುರಿತು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಕೆ.ಸತ್ಯನಾರಾಯಣ, ಕಳೆದ ಅನೇಕ ವರ್ಷಗಳ ಬೇಡಿಕೆಗಳನ್ನು ಸರ್ಕಾರ ಇಲ್ಲಿಯವರೆಗೆ ಈಡೇರಿಸಿಲ್ಲ. ಹಲವು ಬಾರಿ ಮನವಿಗಳನ್ನು ಸಲ್ಲಿಸಿದರೂ ಯಾವುದೇ ಸ್ಪಂದನೆ ದೊರೆತ್ತಿಲ್ಲೆಂದು ಆರೋಪಿಸಿದರು.
ಬೆಳಗಾವಿ ಜಿಲ್ಲೆಯ ರಾಯಭಾಗ ಪಟ್ಟಣದಲ್ಲಿ ನಡೆದ ಸಂಘದ ರಾಜ್ಯ ಪರಿಷತ್ ಸಭೆಯಲ್ಲಿ ಪೌರಸೇವಾ ನೌಕರರ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗಿದೆ. ಅಲ್ಲದೆ ಮುಷ್ಕರ ನಡೆಸುವ ಕುರಿತು ಮುನ್ಸೂಚನೆ ನೀಡಲಾಗಿದೆ. ಆದರೆ ಆಡಳಿತ ನಡೆಸುತ್ತಿರುವವರು ಸಂಘದ ಸದಾಧಿಕಾರಿಗಳ ಸಭೆ ಕರೆಯದೆ, ಬೇಡಿಕೆಗಳನ್ನು ಈಡೇರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ. ಆದ್ದರಿಂದ ಜೂ.5ರ ವರೆಗೆ ರಾಜ್ಯವ್ಯಾಪಿ ಸ್ವಚ್ಛತಾ ಕಾರ್ಯವನ್ನು ಸ್ಥಗಿತಗೊಳಿಸಿ ಮುಷ್ಕರ ಪ್ರಾರಂಭಿಸಲಾಗಿದೆ ಎಂದರು. ಕೊಡಗು ಜಿಲ್ಲೆಯಲ್ಲಿ ಸುಮಾರು 300 ಪೌರಸೇವಾ ನೌಕರರಿದ್ದು, ಹಗಲು, ರಾತ್ರಿ ಜನಪರವಾಗಿ ಕೆಲಸ ಮಾಡುತ್ತಿದ್ದಾರೆ. ಸ್ವಚ್ಛತೆ ಕಾಪಾಡುವುದಲ್ಲದೆ, ಕುಡಿಯುವ ನೀರು ಸರಬರಾಜು ಮಾಡುತ್ತಿದ್ದಾರೆ. ಸಾಂಕ್ರಾಮಿಕ ರೋಗಗಳು ಹರಡದಂತೆ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದಾರೆ. ಆದರೆ ಕಳೆದ ಅನೇಕ ವರ್ಷಗಳಿಂದ ಹಲವು ಸೇವಾ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಪೌರಸೇವಾ ನೌಕರರ ಸಮಸ್ಯೆಗೆ ಸರ್ಕಾರ ಸ್ಪಂದಿಸದೇ ಇರುವುದು ಖಂಡನೀಯ ಎಂದು ಬೇಸರ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರಿ ನೌಕರರಿಗೆ ನೀಡುವ ಪ್ರತಿಯೊಂದು ಸವಲತ್ತುಗಳನ್ನು ಪೌರಸೇವಾ ನೌಕರರಿಗೆ ಪ್ರತ್ಯೇಕ ಆದೇಶವಿಲ್ಲದೆ ವಿಸ್ತರಿಸಬೇಕು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ದಿನಗೂಲಿ, ಕ್ಷೇಮಾಭಿವೃದ್ಧಿ ಅಧಿನಿಯಮದಡಿ ಕಾರ್ಯನಿರ್ವಹಿಸುತ್ತಿರುವ ನೌಕರರನ್ನು ಖಾಯಂಗೊಳಿಸಬೇಕು, ನಗರಸಭೆಗಳಲ್ಲಿ ಶೇ.100 ರಷ್ಟು ಪೌರಕಾರ್ಮಿಕರನ್ನು ವಿಶೇಷ ನೇಮಕಾತಿ ಮಾಡಬೇಕು. 2022ನೇ ಸಾಲಿನ ವಿಶೇಷ ನೇಮಕಾತಿಯಡಿ ಆಯ್ಕೆಯಾದ ಪೌರಕಾರ್ಮಿಕರು, ಲೋಡರ್ಗಳಿಗೆ ಎಸ್.ಎಫ್.ಸಿ ವೇತನ ನಿಧಿಯಿಂದ ವೇತನ ಪಾವತಿಸಬೇಕು, ನೀರು ಸರಬರಾಜು ನೌಕರರನ್ನು ವಿಶೇಷ ನೇಮಕಾತಿಯಡಿ ಪರಿಗಣಿಸಬೇಕು, ಪೌರಸೇವಾ ನೌಕರರಿಗೆ ನಗದು ರಹಿತ ಚಿಕಿತ್ಸಾ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಸತ್ಯನಾರಾಯಣ ಒತ್ತಾಯಿಸಿದರು. ಸಾರ್ವಜನಿಕರ ಹಿತದೃಷ್ಟಿಯಿಂದ ನೀರು ಸರಬರಾಜು ನೌಕರರನ್ನು ಹೊರತುಪಡಿಸಿ ಉಳಿದ ಎಲ್ಲಾ ಪೌರ ಕಾರ್ಮಿಕರು ಹಾಗೂ ಕಚೇರಿಯ ಡಾಟ ಎಂಟ್ರಿ ಸಿಬ್ಬಂದಿಗಳು, ಲೋಡರ್ಗಳು ಸೇರಿದಂತೆ ಇತರ ನೌಕರರು ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ. ಸರ್ಕಾರ ಪೌರಸೇವಾ ನೌಕರರ ಬೇಡಿಕೆಗೆ ಸ್ಪಂದಿಸದೇ ಇದ್ದಲ್ಲಿ ನೀರು ಸರಬರಾಜನ್ನು ಸ್ಥಗಿತಗೊಳಿಸಿ, ಅನಿರ್ಧಿಷ್ಟಾವಧಿ ಮುಷ್ಕರ ಮುಂದುವರೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಜಿಲ್ಲಾ ಕಾರ್ಯದರ್ಶಿ ಎ.ಎಸ್.ನಾಗೇಶ್, ನಿರ್ದೇಶಕ ಎಂ.ಎ.ಅಬ್ದುಲ್ ಅಝೀಜ್, ಸಂಘಟನಾ ಕಾರ್ಯದರ್ಶಿ ಪಿ.ಬಿ.ಮೋಹನ್, ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಈರಪ್ಪ ಶೆಟ್ಟಿ ಹಾಗೂ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಬಿ.ಎಂ.ಅಶೋಕ್ ಆಳ್ವ ಉಪಸ್ಥಿತರಿದ್ದರು.










