
ಸೋಮವಾರಪೇಟೆ NEWS DESK ಮೇ.31 : ಪೌರ ಸೇವಾ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿ ಪೌರ ಸೇವಾನೌಕರರು ಕರ್ತವ್ಯ ನಿರ್ವಹಿಸದೆ ಪಟ್ಟಣ ಪಂಚಾಯಿತಿ ಎದುರು ಶನಿವಾರದಿಂದ ಮುಷ್ಕರ ಪ್ರಾರಂಭಿಸಿದ್ದಾರೆ. ಪೌರಕಾರ್ಮಿಕರ ಬೇಡಿಕೆಯನ್ನು ಈಡೇರಿಸುವ ವರಗೆ ಪಟ್ಟಣದಲ್ಲಿ ಸ್ವಚ್ಚತಾ ಕಾರ್ಯವನ್ನು ನಿರ್ವಹಿಸುವುದಿಲ್ಲ. ಅಲ್ಲದೆ ಜೂ. 2ರಿಂದ ನೀರು ಸರಬರಾಜು ಕೆಲಸವನ್ನು ಮಾಡುವುದಿಲ್ಲ ಎಂದು ಪೌರಕಾರ್ಮಿಕರು ಸ್ಪಷ್ಟಪಡಿಸಿದ್ದಾರೆ. ಪೌರಕಾರ್ಮಿಕರ ಹಲವು ಬೇಡಿಕೆಗಳು ಅನೇಕ ವರ್ಷಗಳಿಂದ ಈಡೇರಿಲ್ಲ. ಸಂಘದ ತೀರ್ಮಾದಂತೆ ಬೇಡಿಕೆಗಳನ್ನು ಈಡೇರಿಸಲು ಸರ್ಕಾರಕ್ಕೆ ಒಂದು ತಿಂಗಳ ಗಡುವು ನೀಡಲಾಗಿತ್ತು. ಗಡುವು ಮುಗಿದಿರುವ ಹಿನ್ನೆಲೆಯಲ್ಲಿ ಮುಷ್ಕರ ಪ್ರಾರಂಭಿಸಿದ್ದೇವೆ ಎಂದು ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸಂಘದ ಸೋಮವಾರಪೇಟೆ ಶಾಖೆ ಅಧ್ಯಕ್ಷ ಬಿ.ಜೆ.ಮಂಜುನಾಥ ಹೇಳಿದರು.
ರಾಜ್ಯ ಸರ್ಕಾರಿ ನೌಕರರಿಗೆ ನೀಡುವ ಸವಲತ್ತುಗಳನ್ನು ಯಾವುದೇ ಷರತ್ತುಗಳಿಲ್ಲದೆ ನೀಡಬೇಕು. ಪಟ್ಟಣ ಪಂಚಾಯಿತಿ ಹಾಗು ನಗರಸಭೆಯಲ್ಲಿ ಕೆಲಸ ಮಾಡುವ ಎಲ್ಲಾ ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕು. 2022ನೇ ಸಾಲಿನ ವಿಶೇಷ ನೇಮಕಾತಿ ಅಡಿ ಆಯ್ಕೆಯಾದ ಪೌರಸೇವಾ ನೌಕರರು ಮತ್ತು ಲೋರ್ಸ್ ಗಳಿಗೆ ಎಸ್.ಎಫ್.ಸಿ ವೇತನ ನಿಧಿಯಿಂದ ವೇತನ ಪಾವತಿಸಬೇಕು. ನಗರ, ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೀರು ಸರಬರಾಜು ನೌಕರರುಗಳನ್ನು ವಿಶೇಷ ನೇಮಕಾತಿ ಅಡಿ ಪರಿಗಣೀಸಬೇಕು. ಪೌರಸೇವಾ ನೌಕರರಿಗೆ ಜ್ಯೋತಿ ಸಂಜೀವಿನಿ, ನಗದು ರಹಿತ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಬೇಕು. ಐ.ಟಿ.ಸಿಬ್ಬಂದಿ, ಅಕೌಂಟ್ ಕನ್ಸಲ್ಟೆಂಟ್, ಕಂಪ್ಯೂಟರ್ ಆಪರೇಟರ್, ವಾಹನ ಚಾಲಕ, ಸ್ಯಾನಿಟರಿ ಸೂಪರ್ವೈಸರ್, ಹಾಗು ಇತರೆ ವೃಂದದ ನೌಕರರನ್ನು ಪೌರಸೇವಾ ನೌಕರರೆಂದು ಪರಿಗಣಿಸಬೇಕು ಎಂಬ ಬೇಡಿಕೆಗಳನಿಟ್ಟು ಅನಿರ್ಧಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಮಂಜುನಾಥ್ ಹೇಳಿದರು. ಮುಷ್ಕರ ನಿರತರೊಂದಿಗೆ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್ ಚರ್ಚಿಸಿ, ಮನವಿ ಪತ್ರ ಸ್ವೀಕರಿಸಿದರು. ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಆರ್.ಮಹೇಶ್, ಮುಖ್ಯಾಧಿಕಾರಿ ಸತೀಶ್, ಅರೋಗ್ಯ ನಿರೀಕ್ಷ ಕ ಜಾಸಿಂ ಖಾನ್ ಇದ್ದರು.








