
ಮಡಿಕೇರಿ ಜೂ.17 NEWS DESK : ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ರಾಜ್ಯದ ಖಾಸಗಿ ಕೃಷಿ ವಿಜ್ಞಾನಗಳ ಕಾಲೇಜುಗಳಿಗೆ ಅಫಿಲಿಯೇಶನ್ ನೀಡಲು ನಿರ್ದರಿಸಿ, ರಾಜ್ಯದಲ್ಲಿ ಕಳೆದ ಸಾಲಿನಿಂದ ಕೃಷಿ ವಿಜ್ಞಾನಗಳ ಖಾಸಗಿ ಕಾಲೇಜುಗಳಿಗೆ ಅಫಿಲಿಯೇಶನ್ ಕೃಷಿ ಮತ್ತು ಕೃಷಿ ಸಂಬಂಧಿತ ಪದವಿ ಓದಲು ಬಯಸುವ ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಲಭ್ಯ ಸೀಟುಗಳು ಕಡಿಮೆ ಇವೆ. ರಾಜ್ಯದಲ್ಲಿ ಪ್ರತಿ ವರ್ಷ ಸುಮಾರು 1 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಕೃಷಿ ವಿಶ್ವವಿದ್ಯಾಲಯಗಳಲ್ಲಿ ಪದವಿ ಕಾರ್ಯಕ್ರಮಕ್ಕೆ ದಾಖಲಾಗಲು ಅರ್ಜಿ ಸಲ್ಲಿಸಿರುತ್ತಾರೆ. ಅದರಲ್ಲಿ ಕೇವಲ 3 ಸಾವಿರ ವಿದ್ಯಾರ್ಥಿಗಳಿಗೆ ಕೃಷಿ ಹಾಗೂ ಕೃಷಿ ಸಂಬಂಧಿತ ಪದವಿ ಸೀಟುಗಳು ಹಂಚಿಕೆಯಾಗುತ್ತಿದೆ. ಉಳಿದ ವಿದ್ಯಾರ್ಥಿಗಳಿಗೆ ಈ ಪದವಿಗಳಿಗೆ ಪ್ರವೇಶ ಪಡೆಯಲು ಅವಕಾಶವಿಲ್ಲದಂತಾಗಿದೆ. ಈ ಹಿನ್ನಲೆಯಲ್ಲಿ ಕೃಷಿ ವಿಜ್ಞಾನ ವಿಶ್ವವಿದ್ಯಾಲಯಗಳ ಕಾಯ್ದೆ 2009 ರಲ್ಲಿ (ವಿಭಾಗ 44 ರಿಂದ 51) ವಿವರಿಸಿರುವಂತೆ ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ಖಾಸಗಿ ಕಾಲೇಜುಗಳಿಗೆ ಅಫಿಲಿಯೇಶನ್ ನೀಡಲು ಅವಕಾಶ ಇರುವುದನ್ನು ಬಳಸಿಕೊಂಡು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಈ ಸಾಲಿನಲ್ಲಿ ಅಫಿಲಿಯೇಟೆಡ್ ಖಾಸಗಿ ಕೃಷಿ ವಿಜ್ಞಾನಗಳ ಕಾಲೇಜುಗಳನ್ನು ಪ್ರಾರಂಭಿಸಲು ಪ್ರಕಟಣೆ ನೀಡಿರುತ್ತದೆ. ಆಸಕ್ತಿ ಹೊಂದಿರುವ ಹಾಗೂ ಕರ್ನಾಟಕದ ಸೊಸೈಟಿ ನೋಂದಣಿ ಕಾಯ್ದೆಯಡಿಯಲ್ಲಿ ನೋಂದಾಯಿಸಲಾದ ಮಂಡಳಿಗಳು/ ಸೂಸೈಟಿಗಳು/ ಟ್ರಸ್ಟ್ಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಸಂಸ್ಥೆಗಳು ಬಿ.ಎಸ್ಸಿ(ಹಾನರ್ಸ್) ಕೃಷಿ ಬಿ.ಟೆ.ಕ್ ಕೃಷಿ ಎಂಜಿನಿಯರಿಂಗ್, ಬಿ.ಟೆಕ್. ಕೃಷಿ ಬಯೋಟೆಕ್ನಾಲಜಿ, ಬಿ.ಟೆಕ್.ಫುಡ್ ಟೆಕ್ನಾಲಜಿ, ಬಿ.ಎಸ್ಸಿ (ಹಾನರ್ಸ್)ಅರಣ್ಯ, ಬಿ.ಎಸ್.(ಹಾನರ್ಸ್), ಕಮ್ಯೂನಿಟಿ ವಿಜ್ಞಾನ, ಬಿ.ಎಸ್ಸಿ(ಹಾನರ್ಸ್), ಫುಡ್ ನ್ಯೂಟ್ರೀಶನ್ ಮತ್ತು ಡೈಯಟಿಕ್ಸ್, ಬಿ.ಎಸ್ಸಿ (ಹಾನರ್ಸ್) ತೋಟಗಾರಿಕೆ ಮತ್ತು ಬಿಎಸ್ಸಿ(ಹಾನರ್ಸ್) ರೇಷ್ಮೆ ಕೃಷಿ ಪದವಿ ಪ್ರಾರಂಭಿಸಲು ಅರ್ಜಿ ಸಲ್ಲಿಸಬಹುದು. ಈ ಸಂಬಂಧ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಅಫಿಲಿಯೇಶನ್ಗಾಗಿ ಕನಿಷ್ಠ ಮಾನದಂಡಗಳನ್ನು (ಕೆಎಸ್ಎನ್ಯುಎಎಚ್ಎಸ್-ಎಂಎಸ್ಎಸಿಆರ್ 2025) www.uahs.edu.in ಜಾಲತಾಣದಲ್ಲಿ ಪ್ರಕಟಿಸಿದೆ. ಅಧಿಸೂಚಿಸಿದ ಮಾನದಂಡಗಳಂತೆ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯವು 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿರುವ (ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಉಡುಪಿ ಮತ್ತು ದಕ್ಷಿಣ ಕನ್ನಡ) ಜಿಲ್ಲೆಗಳಲ್ಲಿ ಕಾಲೇಜು ಅಫಿಲಿಯೇಶನ್ ಬಯಸುವ ಹಾಗೂ ಕಾನೂನು ಬದ್ದ ಶೈಕ್ಷಣಿಕ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ನಂತರ (ಕೆಎಸ್ಎನ್ಯುಎಎಚ್ಎಸ್-ಎಂಎಸ್ಎಸಿಆರ್ 2025) ರ ಪ್ರಕಾರ ಅವುಗಳನ್ನು ಪರಿಶೀಲಿಸಿ ನಿಯಮದಂತೆ ಪ್ರಕ್ರಿಯೆ ನಡೆಸಲಾಗುವುದು.
ಅತ್ಯುತ್ತಮ ಶೈಕ್ಷಣಿಕ ಪರಿಸರ ಹಾಗೂ ರಾಷ್ಟ್ರಮಟ್ಟದಲ್ಲಿ ಉತ್ತಮ ಸಾಧನೆ ಮಾಡಿರುವ ಶಿವಮೊಗ್ಗದ ಈ ವಿಶ್ವವಿದ್ಯಾಲಯವು 2012ರ ಸೆಪ್ಟೆಂಬರ್, 21 ರಂದು ಕರ್ನಾಟಕ ಸರ್ಕಾರದ ವಿಶೇಷ ಶಾಸನದ ಮೂಲಕ ಅಂಗೀಕರಿಸಿ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದೆ ಹಾಗೂ ಕರ್ನಾಟಕ ಸರ್ಕಾರವು 2021ರ ಜುಲೈ, 26 ರಲ್ಲಿ ಈ ವಿಶ್ವವಿದ್ಯಾಲಯದ ಹೆಸರನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ (ಕೆಶಿನಾಕೃತೋ.ವಿ.ವಿ) ಎಂದು ಮರುನಾಮಕರಣ ಮಾಡಿ ಆದೇಶ ಹೊರಡಿಸಿರುತ್ತದೆ. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ರಾಜ್ಯದ ಪ್ರತಿಷ್ಠಿತ ಸಮಗ್ರ ಕೃಷಿ ವಿಶ್ವವಿದ್ಯಾಲಯವಾಗಿದ್ದು ಇದರ ಅಡಿಯಲ್ಲಿ ಪ್ರಸ್ತುತ 5 ಮಹಾವಿದ್ಯಾಲಯಗಳು ಕಾರ್ಯನಿರ್ವಹಿಸುತ್ತಿವೆ. ಈ ವಿಶ್ವವಿದ್ಯಾಲಯದಿಂದ ಕಳೆದ ಒಂದು ದಶಕದಲ್ಲಿ ಕೃಷಿ, ತೋಟಗಾರಿಕೆ ಮತ್ತು ಅರಣ್ಯ ವಿಷಯಗಳಲ್ಲಿ ಒಟ್ಟು 4,366 ವಿದ್ಯಾರ್ಥಿಗಳು ಪದವಿ ಪಡೆದಿದ್ದಾರೆ. ಇವರಲ್ಲಿ 3,316 ಸ್ನಾತಕ, 935 ಸ್ನಾತಕೋತ್ತರ ಮತ್ತು 115 ಪಿಎಚ್ಡಿ ವಿದ್ಯಾರ್ಥಿಗಳಾಗಿರುತ್ತಾರೆ. ಜೊತೆಗೆ ಅಸಾಧಾರಣ ಪ್ರತಿಭೆಯಿಂದ ಗುರುತಿಸಿಕೊಂಡು, ಅತ್ಯುತ್ತಮವಾದ ಸಾಧನೆಗೈದ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಒಟ್ಟು 329 ಚಿನ್ನದ ಪದಕಗಳನ್ನು ವಿಶ್ವವಿದ್ಯಾಲಯವು ನೀಡಿರುತ್ತದೆ. ಈ ವಿಶ್ವವಿದ್ಯಾಲಯದಡಿಯಲ್ಲಿ ಅಫಿಲಿಯೇಶನ್ಗಾಗಿ ಜುಲೈ, 07 ರೊಳಗೆ ಅರ್ಜಿ ಸಲ್ಲಿಸಬಹುದು. ಸಲ್ಲಿಸಿದ ಅರ್ಜಿಯನ್ನು ಆಗಾಗ್ಗೆ ಪರಿಶೀಲಿಸಲಾಗುವುದು. ಅರ್ಜಿ ಸಲ್ಲಿಸುವ ಮುನ್ನೆ ನಿಬಂಧನೆಗಳನ್ನು ಸಂಪೂರ್ಣ ಪರಾಮರ್ಶಿಸಿ ಅದರಂತೆ ಅರ್ಜಿ ಸಲ್ಲಿಸುವುದು. ಅಪೂರ್ಣ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ವಿವರ ಹಾಗೂ ನಿಬಂಧನೆಗಳು ಮತ್ತು ಅರ್ಜಿಗಾಗಿ ಜಾಲತಾಣಕ್ಕೆ ಭೇಟಿ ನೀಡಬಹುದು ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಸಚಿವರು ತಿಳಿಸಿದ್ದಾರೆ.









