
ಸೋಮವಾರಪೇಟೆ ಜೂ.17 NEWS DESK : ತಾಲ್ಲೂಕು ಒಕ್ಕಲಿಗರ ಸಂಘದ ವತಿಯಿಂದ ನಡೆಯುತ್ತಿರುವ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಬಿಟಿಸಿಜಿ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಪ್ರಸಕ್ತ ವರ್ಷದಿಂದ ಪಿಸಿಎಂಸಿ ವಿಭಾಗಕ್ಕೆ ಸರ್ಕಾರ ಅನುಮತಿ ನೀಡಿದ್ದು, ವಿದ್ಯಾರ್ಥಿಗಳು ಪ್ರವೇಶಾತಿ ಪಡೆಯಬಹುದು ಎಂದು ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ ಹೇಳಿದರು. ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಡಾ.ಮಂತರ್ಗೌಡ ಅವರ ಸಹಕಾರದಿಂದ ಅನುಮತಿ ಸಿಕ್ಕಿದೆ. ಸ್ಥಳೀಯ ವಿದ್ಯಾರ್ಥಿಗಳು ಕಂಪ್ಯೂಟರ್ ಸೈನ್ಸ್ ಕಲಿಕೆಗೆ ಉಪಯೋಗವಾಗಲಿದೆ ಎಂದು ಹೇಳಿದರು. ಈಗಾಗಲೇ ವಿಜ್ಞಾನ ವಿಭಾಗದಲ್ಲಿ ಪಿಸಿಎಂಬಿ, ವಾಣಿಜ್ಯ ವಿಭಾಗದಲ್ಲಿ ಇಬಿಎಸಿ, ಎಚ್ಇಬಿಎ ತರಗತಿಗಳು ನಡೆಯುತ್ತಿವೆ. ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ.100ರಷ್ಟು ಫಲಿತಾಂಶ ದೊರೆತ್ತಿದೆ ಎಂದು ಹೇಳಿದರು. ಗ್ರಾಮೀಣ ವಿದ್ಯಾರ್ಥಿಗಳಿಗೆ ಆಂಗ್ಲ ಮಾಧ್ಯಮದಲ್ಲಿ ಗುಣಮಟ್ಟದ ಶಿಕ್ಷಣ ನೀಡಲೇಬೇಕೆಂಬ ಉದ್ದೇಶದಿಂದ 2002ರಲ್ಲಿ ಪೂರ್ವ ಪ್ರಾಥಮಿಕ ತರಗತಿಯಲ್ಲಿ 40 ಮಕ್ಕಳಿಂದ ಪ್ರಾರಂಭವಾದ ವಿದ್ಯಾಸಂಸ್ಥೆ, ಪ್ರಸಕ್ತ ಎಲ್ಕೆಜಿಯಿಂದ ದ್ವಿತೀಯ ಪಿಯುಸಿ ತನಕ 800 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಶೇ.99ರಷ್ಟು ಮಕ್ಕಳು ಗ್ರಾಮೀಣ ಭಾಗದಿಂದ ಬರುತ್ತಾರೆ. ಶಾಲಾ ವ್ಯಾಪ್ತಿಯ ಬಹುತೇಕ ಗ್ರಾಮಗಳಿಗೂ ಶಾಲಾ ಬಸ್ಗಳ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಹೇಳಿದರು. ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕುವೆಂಪು ಶಾಲೆಯ ಮೂರು ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಪ್ರಥಮ, ದ್ವಿತೀಯ, ತೃತೀಯ ಟಾಪರ್ಗಳಾಗಿ ಹೊರಹೊಮ್ಮಿದ್ದಾರೆ. ಸಿ.ಎಸ್.ಆದ್ವಿ 625ಕ್ಕೆ 623 ಅಂಕಗಳು, ಪಂಚಮಿ 621, ತೇಜಸ್ವಿನಿ 619 ಅಂಕಗಳನ್ನು ಗಳಿಸಿ ಸೋಮವಾರಪೇಟೆ ತಾಲ್ಲೂಕಿಗೆ ಕೀರ್ತಿ ತಂದಿದ್ದಾರೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಎಸ್.ಬಿ.ಭರತ್ ಕುಮಾರ್, ಕಾರ್ಯದರ್ಶಿ ಎನ್.ಬಿ.ಗಣಪತಿ, ನಿರ್ದೇಶಕರುಗಳಾದ ಎಂ.ಎಸ್. ನಂದಕುಮಾರ್, ಕೆ.ಟಿ.ಪರಮೇಶ್ ಇದ್ದರು.









