
ಮಡಿಕೇರಿ ಜೂ.26 NEWS DESK : ಕೊಡಗು ಜಿಲ್ಲೆಯಲ್ಲಿ ಇನ್ನೂ ಎರಡು ತಿಂಗಳ ಕಾಲ ಹೆಚ್ಚಿನ ಮಳೆಯಾಗುವುದರಿಂದ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುನ್ನೆಚ್ಚರ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಅಪಾರ ನಷ್ಟ ಸಂಭವಿಸಿದೆ. ಜಿಲ್ಲೆಯ ಮಳೆಹಾನಿ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಸಚಿವರು ಅಧಿಕಾರಿಗಳೊಂದಿಗೆ ಸಮಾಲೋಚಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಈ ಬಾರಿ ಮೇ ಅಂತ್ಯದಲ್ಲಿಯೇ ಮುಂಗಾರು ಆರಂಭವಾಗಿದ್ದು, ಹೆಚ್ಚಿನ ಮಳೆಯಿಂದ ಜಿಲ್ಲೆಯಲ್ಲಿ ಮನೆ, ಸೇತುವೆ, ರಸ್ತೆ ಸೇರಿದಂತೆ ಹಲವು ರೀತಿಯ ಪ್ರಾಕೃತಿಕ ವಿಕೋಪ ಸಂಭವಿಸಿದೆ. ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಜಿಲ್ಲಾಧಿಕಾರಿ ಅವರ ಪಿಡಿ ಖಾತೆಯಲ್ಲಿ ಹೆಚ್ಚಿನ ಹಣವಿದ್ದು, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಜಿಲ್ಲಾಡಳಿತ ಗಮನಹರಿಸಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಮೇ ಅಂತ್ಯದಿಂದ ಸುರಿದ ಧಾರಾಕಾರ ಮಳೆಗೆ ರಸ್ತೆ, ಸೇತುವೆ, ಮನೆಗಳ ಹಾನಿಯಾಗಿದೆ. ಸೇತುವೆ ನಿರ್ಮಾಣಕ್ಕೆ ಅಗತ್ಯ ಕ್ರಮವಹಿಸಲಾಗುವುದು. ಮನೆ ಹಾನಿ ಸಂಬಂಧ ಪರಿಹಾರ ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು. ಮಳೆ ನಿಂತ ನಂತರ ಶಾಶ್ವತ ಕಾಮಗಾರಿ ಕೈಗೊಳ್ಳಲಾಗುವುದು ಎಂದರು. ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಉಂಟಾದ ಹಾನಿ ಬಗ್ಗೆ ಶಾಸಕರ ಜೊತೆ ಚರ್ಚಿಸಿ ಮುಖ್ಯಮಂತ್ರಿ ಅವರಿಗೆ ವರದಿ ನೀಡಲಾಗುವುದು. ಮಳೆಹಾನಿಗೆ ಹೆಚ್ಚಿನ ಹಣ ಬಿಡುಗಡೆಗೆ ಮುಖ್ಯಮಂತ್ರಿ ಅವರನ್ನು ಕೋರಲಾಗುವುದು ಎಂದು ಸಚಿವರು ಹೇಳಿದರು. ಸರ್ಕಾರದ ಬಳಿ ಹಣವಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ರೀತಿಯ ಅಡಚಣೆ ಇಲ್ಲ. ಸರ್ಕಾರ 8 ಸಾವಿರ ಕೋಟಿ ರೂ. ವನ್ನು ಅಭಿವೃದ್ಧಿ ಕೆಲಸಕ್ಕಾಗಿ ಬಿಡುಗಡೆ ಮಾಡಿದೆ. ಹಾಗೆಯೇ ಕೊಡಗು ಜಿಲ್ಲೆಗೂ ಸಹ 100 ಕೋಟಿ ರೂ. ಬಿಡುಗಡೆ ಮಾಡಿದೆ. ಗ್ಯಾರಂಟಿ ಯೋಜನೆ ಜೊತೆಗೆ ಅಭಿವೃದ್ಧಿ ಕಾರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಸಚಿವರು ವಿವರಿಸಿದರು. ಕುಶಾಲನಗರದಲ್ಲಿ ನೂತನವಾಗಿ ನಿರ್ಮಿಸಿ ಇತ್ತೀಚೆಗೆ ಉದ್ಘಾಟನೆಯಾದ ಪುರಸಭೆ ಕಟ್ಟಡವನ್ನು ವೀಕ್ಷಿಸಿ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಸಾರ್ವಜನಿಕರಿಗೆ ಅನುಕೂಲವಾಗುವಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮಾದರಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿದರು. ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಮಾತನಾಡಿ ಮೇ ಮತ್ತು ಜೂನ್ ತಿಂಗಳಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ಉಂಟಾದ ಹಾನಿ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಲಾಗಿದೆ ಎಂದರು. ಸರ್ಕಾರಿ ಕಚೇರಿಗಳಲ್ಲಿ ಮರಣ ಪ್ರಮಾಣ ಪತ್ರ ನೀಡಲು ಒಂದು ತಿಂಗಳಿಗೂ ಹೆಚ್ಚು ಕಾಲ ತೆಗೆದುಕೊಳ್ಳುವುದು ಸರಿಯಲ್ಲ. ಇಂದಿನ ಸಾಮಾಜಿಕ ಜಾಲತಾಣದ ಯುಗದಲ್ಲಿ ಸಾರ್ವಜನಿಕರಿಗೆ ಸ್ಪಂದಿಸುವುದು ಅತೀ ಮುಖ್ಯವಾಗಿದೆ ಎಂದು ಅಧಿಕಾರಿಗಳಿಗೆ ತಿಳಿಸಿದರು. ಸಚಿವರು, ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಕುಶಾಲನಗರದ ಸೇತುವೆಗೆ ತೆರಳಿ ಕಾವೇರಿ ನೀರಿನ ಹರಿವು ಪ್ರಮಾಣ ವೀಕ್ಷಿಸಿದರು. ಬಳಿಕ ಕುಶಾಲನಗರದ ಚಂದ್ರಶೇಖರ ಅವರ ಮನೆಹಾನಿ ಪರಿಶೀಲಿಸಿದರು. ಕಾವೇರಿ ನದಿ ನೀರು ಹರಿಯುವ ಕಣಿವೆ ಬಳಿಯ ತೂಗು ಸೇತುವೆ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದರು. ನಂತರ ರಂಗಸಮುದ್ರದ ಬಳಿ ಹಾನಿಗೀಡಾಗಿರುವ ಸೇತುವೆ ಪರಿಶೀಲಿಸಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ವಿ.ಪಿ.ಶಶಿಧರ್, ಕುಶಾಲನಗರ ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಇತರರು ಇದ್ದರು.










