
ಮಡಿಕೇರಿ ಜು.1 NEWS DESK : ಮನೆ ಹಾಗೂ ಕಟ್ಟಡ ನಿರ್ಮಾಣ ಮಾಡಬೇಕಾದರೆ ಪ್ರಾರಂಭಿಕ ಪ್ರಮಾಣಪತ್ರ (ಸಿಸಿ) ಮತ್ತು ಸ್ವಾಧಿನಾನುಭವ ಅಥವಾ ವಾಸ ಯೋಗ್ಯ ಪ್ರಮಾಣ ಪತ್ರ (ಒಸಿ) ಪಡೆದುಕೊಳ್ಳುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ. ಈ ನಿಯಮ ಗ್ರಾ.ಪಂ ವ್ಯಾಪ್ತಿಗೂ ಅನ್ವಯಿಸಲಿದೆ ಎಂದು ಸರ್ಕಾರ ಹೇಳಿದ್ದು, ಇದನ್ನು ತೀವ್ರವಾಗಿ ವಿರೋಧಿಸುವುದಾಗಿ ನಂಜರಾಯಪಟ್ಟಣ ಗ್ರಾ.ಪಂ ಅಧ್ಯಕ್ಷ ಸಿ.ಎಲ್.ವಿಶ್ವ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸರ್ಕಾರದ ಹೊಸ ನಿಯಮದಿಂದ ಗ್ರಾಮೀಣ ಭಾಗದ ಕಡು ಬಡವರು, ಬಡವರು, ಕೂಲಿ ಕಾರ್ಮಿಕರು, ದುರ್ಬಲರು ಹಾಗೂ ವಸತಿ ರಹಿತ ಜನಸಾಮಾನ್ಯರು ಮನೆ ನಿರ್ಮಿಸಿಕೊಳ್ಳುವ ಸಂದರ್ಭ ಹಲವು ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ಸ್ವಂತ ಸೂರು ಹೊಂದಬೇಕೆನ್ನುವ ಬಡವರ ಕನಸು ಕನಸಾಗಿಯೇ ಉಳಿಯಲಿದೆ. ಆದ್ದರಿಂದ ಸರ್ಕಾರ ಗ್ರಾಮೀಣ ಜನರ ಹಿತದೃಷ್ಟಿಯಿಂದ ನಿಯಮಕ್ಕೆ ತಿದ್ದುಪಡಿ ತಂದು ಗ್ರಾ.ಪಂ ವ್ಯಾಪ್ತಿಗೆ ಸರಳ ನಿಯಮಗಳನ್ನು ರೂಪಿಸಬೇಕೆಂದು ಒತ್ತಾಯಿಸಿದ್ದಾರೆ. ಒಂದು ವೇಳೆ ಸರ್ಕಾರ ನಿಯಮಗಳನ್ನು ಸಡಿಲಿಸದಿದ್ದರೆ ಗ್ರಾ.ಪಂ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಹೋರಾಟವನ್ನು ರೂಪಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ವಸತಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದಂತೆ ನೂತನ ನಿಯಮವನ್ನು ಜಾರಿಗೆ ತರಲಾಗಿದೆ ಎಂದು ಸರ್ಕಾರ ಹೇಳಿಕೊಳ್ಳುತ್ತಿದೆ. ಆದರೆ ಜನರ ಹಿತದೃಷ್ಟಿಯಿಂದ ನಿಯಮಗಳಿಗೆ ತಿದ್ದುಪಡಿ ತರುವ ಎಲ್ಲಾ ಅಧಿಕಾರ ಸರ್ಕಾರಕ್ಕಿದೆ. ನಿರ್ಲಕ್ಷ್ಯ ವಹಿಸಿದರೆ ಮನೆ ನಿರ್ಮಿಸಿಕೊಳ್ಳುತ್ತಿರುವ ಸಾವಿರಾರು ಮಂದಿ ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಸಿ.ಎಲ್.ವಿಶ್ವ ತಿಳಿಸಿದ್ದಾರೆ. ಕೊಡಗು ಜಿಲ್ಲೆಯ ಅನೇಕ ಭಾಗಗಳಲ್ಲಿ ಊರುಡುವೆ ಅರಣ್ಯ ಪೈಸಾರಿಯಲ್ಲಿ ಬಡವರು ಸಾಲ ಮಾಡಿ ಮನೆ ನಿರ್ಮಿಸಿಕೊಂಡಿದ್ದಾರೆ. ಎಲ್ಲರಂತೆ ಇವರಿಗೂ ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಮೂಲಭೂತ ಸೌಲಭ್ಯ ಪಡೆದುಕೊಳ್ಳುವ ಹಕ್ಕಿದೆ. ಇಲ್ಲಿನ ನಿವಾಸಿಗಳಿಗೆ ಈಗಾಗಲೇ ಸ್ವಾಧಿನಾನುಭವ ಅಥವಾ ವಾಸ ಯೋಗ್ಯ ಪ್ರಮಾಣ ಪತ್ರ (ಒಸಿ)ವನ್ನು ನೀಡಲಾಗಿದೆ. ಆದರೆ ಕೆಲವು ದಾಖಲೆಗಳ ಕೊರತೆಯಿಂದ ಸರ್ಕಾರದ ಹೊಸ ನಿಯಮದನ್ವಯ ಇವರ ಅರ್ಜಿಗಳನ್ನು ಪಂಚತಂತ್ರದಲ್ಲಿ ಅಳವಡಿಸಲು ಸಾಧ್ಯವಿಲ್ಲ. ಇದನ್ನೇ ನೆಪಮಾಡಿಕೊಂಡು ಇವರನ್ನು ಮೂಲಭೂತ ಸೌಲಭ್ಯಗಳಿಂದ ವಂಚಿತರನ್ನಾಗಿ ಮಾಡಬಾರದು. ಕನಿಷ್ಠ ಕುಡಿಯುವ ನೀರು ಮತ್ತು ವಿದ್ಯುತ್ ಸೌಲಭ್ಯವನ್ನು ನೀಡಲು ಅನುಕೂಲವಾಗುವಂತೆ ಸರ್ಕಾರ ಸರಳ ನಿಯಮವನ್ನು ರೂಪಿಸಬೇಕು ಎಂದು ಒತ್ತಾಯಿಸಿದ್ದಾರೆ. ಹೊಸ ನಿಯಮದ ಪ್ರಕಾರ ಗ್ರಾಮ ಪಂಚಾಯಿತಿಯಿಂದ ಪರವಾನಗಿ ಪಡೆದು ಕಟ್ಟಡ ಯೋಜನೆ ಮತ್ತು ಅನುಮೋದಿತ ನಕ್ಷೆಯಂತೆ ಕಟ್ಟಡ ನಿರ್ಮಾಣ ಆಗುತ್ತಿದೆಯೇ ಎಂದು ಗ್ರಾಮ ಪಂಚಾಯಿತಿ ಅಧಿಕಾರಿ ಹಾಗೂ ಸ್ಥಳೀಯ ಯೋಜನಾ ಪ್ರಾಧಿಕಾರದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಬೇಕು. ನಂತರ ಸ್ವಾಧೀನಾನುಭವ ಅಥವಾ ವಾಸ ಯೋಗ್ಯ ಪ್ರಮಾಣಪತ್ರ (ಒಸಿ) ವಿತರಿಸಬೇಕು. ವಿನ್ಯಾಸ ಉಲ್ಲಂಘಿಸಿದ್ದರೇ ವಸತಿ, ವಾಣಿಜ್ಯ ಮತ್ತು ಇತರೆ ಕಟ್ಟಡಗಳ ಕಾಮಗಾರಿ ತಡೆದು ಸರಿಪಡಿಸಿಕೊಳ್ಳುವಂತೆ ನೋಟಿಸ್ ಜಾರಿಗೊಳಿಸಬೇಕು. ಕಟ್ಟಡ ನಿರ್ಮಾಣದ ಸ್ಥಳದಲ್ಲಿ ಅನುಮೋದಿತ ನಕ್ಷೆ ಅಂತಿಮ ಹಂತದವರೆಗೂ ಪ್ರದರ್ಶಿಸಬೇಕು. ಕಟ್ಟಡ ನಿರ್ಮಾಣ ಪೂರ್ಣಗೊಂಡ ಮೇಲೆ ಮಾಲೀಕರು ಗ್ರಾಮ ಪಂಚಾಯಿತಿಗೆ ಮನವಿ ಪತ್ರ ಸಲ್ಲಿಸಿದ ನಂತರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಸ್ಥಳೀಯ ಯೋಜನಾ ಪ್ರಾಧಿಕಾರದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಬೇಕು. ನಿಯಮ ಪಾಲನೆ ಮಾಡಿದ್ದರೇ ಮಾಲೀಕ ಅಥವಾ ವಾರಸುದಾರರಿಂದ ಲಿಖಿತ ಮುಚ್ಚಳಿಕೆ ಪಡೆದು ಸಿಸಿ, ಒಸಿ ನೀಡಬೇಕು. ತಪ್ಪಿದರೇ ಕಟ್ಟಡ ಮಾಲೀಕ, ವಾಸ್ತುಶಿಲ್ಪಿ, ಇಂಜಿನಿಯರ್, ಮೇಲ್ವಿಚಾರಕರ ವಿರುದ್ಧ ಗ್ರಾಮ ಪಂಚಾಯಿತಿ ಅಧಿಕಾರಿಗಳು ಕಾನೂನು ಕ್ರಮ ಕೈಗೊಳ್ಳಬಹುದೆಂದು ಸೂಚಿಸಿದೆ. ಸಿಸಿ ಹಾಗೂ ಒಸಿ ಪ್ರಮಾಣ ಪತ್ರ ಇಲ್ಲದಿದ್ದರೆ ನೀರು, ವಿದ್ಯುತ್, ಒಳಚರಂಡಿ ಸಂಪರ್ಕ ಸೇರಿದಂತೆ ಅಗತ್ಯ ಮೂಲಸೌಕರ್ಯ ಸಿಗುವುದಿಲ್ಲ. ಕಳೆದ ಡಿಸೆಂಬರ್ ನಲ್ಲಿ ಸುಪ್ರೀಂಕೋರ್ಟ್ ಈ ಕುರಿತು ಆದೇಶ ನೀಡಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸುಪ್ರೀಂ ಕೋರ್ಟ್ ಆದೇಶದಂತೆ ಮಾರ್ಗಸೂಚಿ ಹೊರಡಿಸಿದೆ. ಆದರೆ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಸರ್ಕಾರ ಗ್ರಾಮೀಣ ಜನರ ಪರವಾಗಿ ನಿಲ್ಲಬೇಕಾಗಿದೆ. ಕಾನೂನು ತಜ್ಞರ ಸಲಹೆ ಪಡೆದು ನಿಯಮಗಳನ್ನು ಸಡಿಲಗೊಳಿಸಬೇಕು ಎಂದು ಸಿ.ಎಲ್.ವಿಶ್ವ ಒತ್ತಾಯಿಸಿದ್ದಾರೆ.










