
ಮಡಿಕೇರಿ ಆ.7 NEWS DESK : ವಿಶ್ವ ರಾಷ್ಟ್ರ ಸಂಸ್ಥೆಯ ಜಾಗತಿಕ ಆದಿಮ ಸಂಜಾತ ಜನಾಂಗಗಳ ಹಕ್ಕುಗಳ ದಿನಾಚರಣೆಯ ಅಂಗವಾಗಿ ಆ.9 ರಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೆಳಿಗ್ಗೆ 10.30 ಗೆ ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸಿ ಕೊಡವರ ಪರವಾದ ವಿವಿಧ ಹಕ್ಕುಗಳನ್ನು ಮಂಡಿಸಲಾಗುವುದು ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಸಾಂವಿಧಾನಿಕ ಹಕ್ಕುಗಳಿಂದ ವಂಚಿತವಾಗಿರುವ ಆದಿಮಸಂಜಾತ ಕೊಡವ ಬುಡಕಟ್ಟು ಜನರ ಬೇಡಿಕೆಗಳ ಬಗ್ಗೆ ದೇಶದ ಆಡಳಿತ ವ್ಯವಸ್ಥೆ ಮತ್ತು ವಿಶ್ವದ ಗಮನ ಸೆಳೆಯವ ಸಲುವಾಗಿ ಧರಣಿ ನಡೆಸಲಾಗುತ್ತಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಕೊಡವರು ಈ ಪವಿತ್ರ ಕೊಡವ ನೆಲದ ಮೂಲನಿವಾಸಿ ಆದಿಮಸಂಜಾತ ಬುಡಕಟ್ಟು ಸಮುದಾಯದವರಾಗಿದ್ದಾರೆ. ಕೊಡವರಿಗಿರುವ ಏಕೈಕ ನೆಲೆ ಕೊಡವ ಲ್ಯಾಂಡ್ ಕೊಡವರ ಸಾಂಪ್ರದಾಯಿಕ ಹಾಗೂ ಅವಿಭಾಜ್ಯ ಮಾತೃಭೂಮಿಯಾಗಿದೆ. ಕೊಡವರ ಜನ್ಮಭೂಮಿ ಈ ಭೂಮಂಡಲದಷ್ಟೇ ಪ್ರಾಚೀನವಾಗಿದೆ. ಕೊಡವ ಬುಡಕಟ್ಟು ಜನಾಂಗವು ಮಾನವ ಜನಾಂಗದಷ್ಟೇ ಹಳೆಯದಾಗಿದೆ. ಈ ಕೊಡವ ಮಣ್ಣಿನಲ್ಲಿ ನಮ್ಮ ಐತಿಹಾಸಿಕ ನಿರಂತರತೆಯನ್ನು ಶಾಸನಬದ್ಧವಾಗಿ ಅನುಮೋದಿಸಬೇಕು. ಕೊಡವರ ಆವಾಸಸ್ಥಾನ, ಕೊಡವಲ್ಯಾಂಡ್, ಪಾರಂಪರಿಕ ಪ್ರಾಚೀನ ಭೂಮಿಗಳು, ರಾಜಕೀಯ-ಸಾಂಸ್ಕೃತಿಕ ಹಕ್ಕುಗಳು, ಜಾನಪದ ಗುರುತು, ದೈವಿಕ ವನಗಳು (ದೇವಕಾಡ್), ಮಂದ್ ಗಳಂತಹ ಗರ್ಭಗುಡಿಗಳು, ವನದೇವಿ, ಸಸ್ಯ ಮತ್ತು ಪ್ರಾಣಿಗಳು, ನೈಸರ್ಗಿಕ ನೀರು, ದೀರ್ಘಕಾಲಿಕ ನದಿಗಳು, ದೇವಟ್ ಪರಂಬು ಕೊಡವ ನರಮೇಧದ ಸ್ಮಾರಕ ಸ್ಥಳ ಮತ್ತು ಕೊಡವರ ಪವಿತ್ರ ತೀರ್ಥಕ್ಷೇತ್ರ ತಲಕಾವೇರಿಯನ್ನು ಅಂತರರಾಷ್ಟ್ರೀಯ ಕಾನೂನಿನ ಪ್ರಕಾರ ವಿಶ್ವ ರಾಷ್ಟ್ರ ಸಂಸ್ಥೆ ಆದಿಮಸಂಜಾತರ ಹಕ್ಕುಗಳಡಿಯಲ್ಲಿ ಸಾಂವಿಧಾನಿಕವಾಗಿ ರಕ್ಷಿಸಬೇಕು, ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳನ್ನು ಒಳಗೊಂಡಂತೆ ಕೊಡವಲ್ಯಾಂಡ್ನ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಮತ್ತು ಸ್ವ-ಆಡಳಿತವನ್ನು ನೀಡಬೇಕೆಂದು ಧರಣಿ ಸಂದರ್ಭ ಒತ್ತಾಯಿಸುವುದಾಗಿ ತಿಳಿಸಿದ್ದಾರೆ. ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಕಳೆದ 35 ವರ್ಷಗಳಿಂದ ಶಾಂತಿಯುತವಾಗಿ ಆದಿಮಸಂಜಾತ ಆನಿಮಿಸ್ಟಿಕ್ ಏಕ-ಜನಾಂಗೀಯ ಸಮುದಾಯವಾಗಿ ಕೊಡವ ಜನರ ಹಕ್ಕುಗಳು ಮತ್ತು ರಕ್ಷಣೆಗಾಗಿ ಪ್ರತಿಪಾದಿಸುತ್ತಿದೆ. ಕೊಡವಲ್ಯಾಂಡ್ನಲ್ಲಿ ಕೊಡವರ ಸಾಂಪ್ರದಾಯಿಕ ಆವಾಸ್ಥಾನದ ಐತಿಹಾಸಿಕ ನಿರಂತರತೆ, ಕೊಡವರ ಆನುವಂಶಿಕ ಭೂಮಿಗಳು ಮತ್ತು ರಾಜಕೀಯ-ಸಾಂಸ್ಕೃತಿಕ ಹಕ್ಕುಗಳು, ಕೊಡವರ ಜಾನಪದ ಗುರುತು ಮತ್ತು ಪವಿತ್ರ ತಾಣಗಳು (ದೇವಕಾಡ್, ದೈವಿಕ ಮಂದ್ಗಳು, ದೇವಟ್ ಪರಂಬ್, ಕೊಡವ ನರಮೇಧ ತಾಣ, ಪವಿತ್ರ ತೀರ್ಥ ಕ್ಷೇತ್ರ ತಲಕಾವೇರಿ), ನೈಸರ್ಗಿಕ ಸಂಪನ್ಮೂಲಗಳು (ಸಸ್ಯವರ್ಗ, ಪ್ರಾಣಿಸಂಕುಲ, ಜಲಮೂಲಗಳು) ಸೇರಿದಂತೆ ಆದಿಮಸಂಜಾತ ಕೊಡವರ ವಿವಿಧ ಹಕ್ಕುಗಳನ್ನು ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ರಕ್ಷಿಸಬೇಕೆಂದು ಒತ್ತಾಯಿಸಲಾಗುವುದು ಎಂದಿದ್ದಾರೆ. ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ವಿಶ್ವ ರಾಷ್ಟ್ರ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ, ಯುನೆಸ್ಕೋ ಮಹಾನಿರ್ದೇಶಕರು, ಯುಎನ್ಎಚ್ಆರ್ಸಿಯ ಹೈಕಮಿಷನರ್, ಅಂತರರಾಷ್ಟ್ರೀಯ ನ್ಯಾಯಾಲಯದ ಅಧ್ಯಕ್ಷರು, ಭಾರತದ ರಾಷ್ಟ್ರಪತಿ, ಪ್ರಧಾನಮಂತ್ರಿ, ಗೃಹ ಸಚಿವರು, ಕರ್ನಾಟಕದ ಮುಖ್ಯಮಂತ್ರಿಗಳು ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ, ಹಾರ್ವರ್ಡ್ ವಿದ್ವಾಂಸ ಡಾ.ಸುಬ್ರಮಣಿಯನ್ ಸ್ವಾಮಿ ಅವರುಗಳಿಗೆ ನೀಡಲಾಗುವುದು ಎಂದು ಎನ್.ಯು.ನಾಚಪ್ಪ ಮಾಹಿತಿ ನೀಡಿದ್ದಾರೆ.








