
ಮಡಿಕೇರಿ ಆ.22 NEWS DESK : ಶ್ರೀ ಧರ್ಮಸ್ಥಳ ಕ್ಷೇತ್ರದ ಮೇಲೆ ನಿರಂತರವಾಗಿ ನಡೆಸುತ್ತಿರುವ ಅಪಪ್ರಚಾರದ ಹಿಂದಿನ ಷಡ್ಯಂತ್ರದ ಕುರಿತು ರಾಜ್ಯ ಸರಕಾರ ತನಿಖೆ ನಡೆಸಬೇಕು ಮತ್ತು ತಪ್ಪಿತಸ್ಥgನ್ನು ಶಿಕ್ಷೆಗೆ ಗುರಿ ಪಡಿಸಬೇಕೆಂದು ಆಗ್ರಹಿಸಿ ಕೊಡಗು ಜಿಲ್ಲಾ ಬಿಜೆಪಿ ನಗರದಲ್ಲಿ ಇಂದು ಪ್ರತಿಭಟನೆ ನಡೆಸಿತು. ಜಿಲ್ಲಾಡಳಿತ ಭವನದ ಎದುರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಶ್ರೀ ಧರ್ಮಸ್ಥಳ ಕ್ಷೇತ್ರದ ವಿರುದ್ಧ ನಡೆಯುತ್ತಿರುವ ಅಪಪ್ರಚಾರಕ್ಕೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಮಾತನಾಡಿ ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಕೆಲವು ಧರ್ಮದ್ರೋಹಿಗಳು ಹಾಗೂ ಎಡ ಪಂಥೀಯರು ಅಪಪ್ರಚಾರ ಮಾಡುವ ಮೂಲಕ ಅಪಚಾರವೆಸಗುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಧರ್ಮಸ್ಥಳದಲ್ಲಿ ಶವಗಳನ್ನು ಹೂಳಲಾಗಿದೆ ಎನ್ನುವ ಅನಾಮಿಕ ವ್ಯಕ್ತಿಯ ದೂರನ್ನು ಆಧರಿಸಿ ಗುಂಡಿಗಳನ್ನು ತೋಡಿದರು ಸೂಕ್ತವಾದ ಯಾವುದೇ ಸಾಕ್ಷ್ಯಾಧಾರಗಳು ದೊರಕಿಲ್ಲ. ದೂರು ನೀಡುವ ಹಂತದಲ್ಲೆ ಅನಾಮಿಕ ವ್ಯಕ್ತಿ ನೀಡಿರುವ ದೂರಿನಲ್ಲಿ ಹುರುಳಿದೆಯೇ ಎನ್ನುವುದನ್ನು ಪರಿಶೀಲಿಸದೆ ಪ್ರಕರಣವನ್ನು ಸರ್ಕಾರ ಎಸ್ಐಟಿ ತನಿಖೆಗೆ ಒಪ್ಪಿಸಿತು. ಇದೀಗ ಪ್ರಕರಣದ ಹಿಂದೆ ಷಡ್ಯಂತ್ರ ನಡೆದಿದೆ ಎನ್ನುವ ಸರ್ಕಾರ ಮೊದಲಾಗಿ ಸಮಗ್ರ ತನಿಖೆ ನಡೆಸಲಿ ಎಂದರು. ಹಿಂದೂ ಧಾರ್ಮಿಕ ಕೇಂದ್ರಕ್ಕೆ ಧಕ್ಕೆಯನ್ನುಂಟುಮಾಡುವ ಈ ಪ್ರಕರಣಕ್ಕೆ ಸರ್ಕಾರ ಅಂತ್ಯವನ್ನು ಹಾಡಬೇಕು ಮತ್ತು ಅಪಪ್ರಚಾರ ಮಾಡುವವರನ್ನು ತಕ್ಷಣ ಬಂಧಿಸಬೇಕು. ತಪ್ಪಿದಲ್ಲಿ ಬಿಜೆಪಿ ದೊಡ್ಡ ಮಟ್ಟದ ಹೋರಾಟವನ್ನು ರೂಪಿಸಲಿದೆ ಎಂದರು. ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಅವರು ಮಾತನಾಡಿ, ಶ್ರೀ ಧರ್ಮಸ್ಥಳ ಕ್ಷೇತ್ರ ಮಾತ್ರವಲ್ಲ ಹಿಂದೂಗಳ ವಿವಿಧ ಧಾರ್ಮಿಕ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ಅಪಪ್ರಚಾರ ನಡೆಸುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡಿ ಹಿಂದೂಗಳನ್ನು ಒಡೆಯುವ ಪ್ರಯತ್ನ ನಡೆಯುತ್ತಿದೆ. ಪ್ರಸ್ತುತ ಕಾಂಗ್ರೆಸ್ ಸರ್ಕಾರ ಹಿಂದೂಗಳನ್ನು ದ್ವಿತೀಯ ದರ್ಜೆಯ ಪ್ರಜೆಗಳನ್ನಾಗಿ ನಡೆಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು. ಮಾಜಿ ಎಂಎಲ್ಸಿ ಸುನಿಲ್ ಸುಬ್ರಮಣಿ ಮಾತನಾಡಿ, ಶ್ರೀ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಕೆಲವರು ಮನಸ್ಸಿಗೆ ಬಂದಂತೆ ಆರೋಪಗಳನ್ನು ಮಾಡುತ್ತಿದ್ದಾರೆ. ಅನಾಮಿಕ ವ್ಯಕ್ತಿ ಆರೋಪಗಳನ್ನು ಮಾಡುವ ಹಂತದಲ್ಲೆ ಆತನನ್ನು ಮೊದಲು ಬಂಧಿಸಿ ತನಿಖೆ ನಡೆಸಬೇಕಿತ್ತು. ಇದಕ್ಕೆ ಬದಲಾಗಿ ತನಿಖೆಯನ್ನು ಎಸ್ಐಟಿಗೆ ವಹಿಸಲಾಯಿತು, ಸರಕಾರ ಪೊಲೀಸರಿಗೆ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಬಿಡುತ್ತಿಲ್ಲವೆಂದು ಟೀಕಿಸಿದರು. ಪ್ರತಿಭಟನೆಯ ನಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಪಕ್ಷದ ಪ್ರಮುಖರೊಂದಿಗೆ ಎಡಿಸಿ ಐಶ್ವರ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷರುಗಳಾದ ರಾಬಿನ್ ದೇವಯ್ಯ, ಬಿ.ಬಿ.ಭಾರತೀಶ್, ನಗರ ಬಿಜೆಪಿ ಅಧ್ಯಕ್ಷ ಉಮೇಶ್ ಸುಬ್ರಮಣಿ, ಪ್ರಧಾನ ಕಾರ್ಯದರ್ಶಿ ಬಿ.ಕೆ.ಜಗದೀಶ್, ನಗರಸಭಾ ಅಧ್ಯಕ್ಷೆ ಪಿ.ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ಪ್ರಮುಖರಾದ ಸಜಿಲ್ ಕೃಷ್ಣನ್, ನಾಗೇಶ್ ಕುಂದಲ್ಪಾಡಿ, ಕನ್ನಂಡ ಸಂಪತ್, ಪಿ.ಎಂ.ರವಿ, ಎಸ್.ಸಿ.ಸತೀಶ್, ಅರುಣ್ ಶೆಟ್ಟಿ, ಸವಿತಾ ರಾಕೇಶ್, ಕನ್ನಿಕೆ, ಉಮಾ ಪ್ರಭು, ಬೊಳ್ಳಜಿರ ಅಯ್ಯಪ್ಪ, ಅಪ್ಪಣ್ಣ, ಮನು ಮಂಜುನಾಥ್, ನೆಲ್ಲೀರ ಚಲನ್, ಡೀನ್ ಬೋಪಣ್ಣ, ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ಕಾಂಗೀರ ಸತೀಶ್ ಮೊದಲಾದವರು ಪಾಲ್ಗೊಂಡಿದ್ದರು.









