
ಕುಶಾಲನಗರ ಆ.25 NEWS DESK : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆ ಹಾಗೂ ಕುಶಾಲನಗರ ಸ್ಥಳೀಯ ಸಂಸ್ಥೆಯ ವತಿಯಿಂದ ಕುಶಾಲನಗರ ತಾಲ್ಲೂಕಿನ ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಆವರಣದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಹಾಗೂ ಕಬ್, ಬುಲ್ ಬುಲ್ ಮಕ್ಕಳಿಗೆ ದೇಶಭಕ್ತಿ ಗೀತೆಗಳ ತಾಲ್ಲೂಕು ಮಟ್ಟದ ಗೀತ ಗಾಯನ ಸ್ಪರ್ಧೆ ನಡೆಯಿತು. ಗೀತಗಾಯನ ಸ್ಪರ್ಧೆಗೆ ಚಾಲನೆ ನೀಡಿ ಶುಭ ಹಾರೈಸಿದ ನಂತರ ವಿಜೇತ ಮಕ್ಕಳಿಗೆ ಪ್ರಶಸ್ತಿ ಪತ್ರ ವಿತರಿಸಿ ಮಾತನಾಡಿದ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ ಹಾಗೂ ಉತ್ತಮ ನಾಯಕತ್ವ ಗುಣಗಳನ್ನು ಬೆಳೆಸಲು ಉತ್ತಮ ವೇದಿಕೆ ಒದಗಿಸುತ್ತದೆ. ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಮಕ್ಕಳ ಚಟುವಟಿಕೆಗಳಿಗೆ ಶಿಕ್ಷಣ ಇಲಾಖೆಯ ವತಿಯಿಂದ ಸದಾ ಸಹಕಾರ, ಪ್ರೋತ್ಸಾಹ ನೀಡಲಾಗುವುದು ಎಂದರು. ಗೀತ ಗಾಯನದಂತಹ ಇಂತಹ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ಸೌಹಾರ್ದತೆ ಹಾಗೂ ರಾಷ್ಟ್ರೀಯ ಭಾವೈಕ್ಯತೆ ಬೆಳೆಸಲು ಸಹಕಾರಿಯಾಗಿವೆ ಎಂದು ಬಿಇಓ ಕೃಷ್ಣಪ್ಪ ಹೇಳಿದರು. ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಮಾತನಾಡಿ, ದೇಶದ ಹಿರಿಮೆ ಸಾರುವ ದೇಶಭಕ್ತಿ ಗೀತೆಗಳಿಂದ ವಿದ್ಯಾರ್ಥಿಗಳಲ್ಲಿ ಅಗಾಧ ದೇಶಪ್ರೇಮ ಮಾಡುವುದರೊಂದಿಗೆ ನಾಡು- ನುಡಿ, ಸಂಸ್ಕೃತಿಯ ಬಗ್ಗೆ ಅಭಿಮಾನ ಬೆಳೆಸಲು ಸಹಕಾರಿಯಾಗಿದೆ ಎಂದರು. ಕುಶಾಲನಗರ ಸ್ಥಳೀಯ ಸಂಸ್ಥೆಯ ವತಿಯಿಂದ ನಡೆಸುತ್ತಿರುವ ವೈವಿಧ್ಯಮಯ ಕಾರ್ಯ ಚಟುವಟಿಕೆಗಳು ಮಾದರಿಯಾಗಿವೆ ಎಂದು ಬೇಬಿಮ್ಯಾಥ್ಯೂ ಶ್ಲಾಘಿಸಿದರು. ಜಿಲ್ಲಾ ಸ್ಕೌಟ್ಸ್ ವಿಭಾಗದ ಆಯುಕ್ತ ಜಿಮ್ಮಿ ಸಿಕ್ವೇರಾ ಮಾತನಾಡಿ, ವಿದ್ಯಾರ್ಥಿಗಳು ಸ್ಕೌಟ್ಸ್, ಗೈಡ್ಸ್ ಮುಖಾಂತರ ಶಿಸ್ತಿನ ಮಹತ್ವವನ್ನು ತಿಳಿಯುತ್ತಾರೆ ಎಂದರು. ಅಧ್ಯಕ್ಷತೆ ವಹಿಸಿದ್ದ ಸ್ಕೌಟ್, ಗೈಡ್ ನ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ ಪ್ರವೀಣ್ ದೇವರಗುಂಡ ಸೋಮಪ್ಪ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಬೌದ್ಧಿಕ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸಲು ಇಂತಹ ಸ್ಪರ್ಧೆಗಳು ಸಹಕಾರಿಯಾಗಿವೆ ಎಂದರು. ಜಿಲ್ಲಾ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಟಿ.ಜಿ.ಪ್ರೇಮಕುಮಾರ್, ಜಿಲ್ಲಾ ಸಹಾಯಕ ಗೈಡ್ಸ್ ಆಯುಕ್ತೆ ಸಿ.ಎಂ.ಸುಲೋಚನ, ಸ್ಥಳೀಯ ಸಂಸ್ಥೆಯ ಕಾರ್ಯಾಧ್ಯಕ್ಷ ಎ.ಎಸ್.ತಮ್ಮಯ್ಯ, ಉಪಾಧ್ಯಕ್ಷರಾದ ರಾಜೇಗೌಡ, ಕೆ.ಪಿ. ರಾಜು, ಕಾರ್ಯದರ್ಶಿ ಎಂ.ಎಸ್.ಗಣೇಶ್, ಸಹ ಕಾರ್ಯದರ್ಶಿ ಇಂದಿರಾ ಮುತ್ತಣ್ಣ, ಕೋಶಾಧಿಕಾರಿ ಎನ್.ಎಸ್.ನರೇಶ್, ಸಂಸ್ಥೆಯ ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ, ಶಾಲಾ ಮುಖ್ಯ ಶಿಕ್ಷಕಿ ಭಾಗ್ಯ, ಸ್ಕೌಟ್ಸ್ ಕಮೀಷನರ್ ತರಬೇತುದಾರ ಬಿ.ಕೆ.ಗಣೇಶ್, ಸ್ಕೌಟ್ಸ್ ಮಾಸ್ಟರ್ ಡಿ.ವಿ.ಗಣೇಶ್, ಕೊಡಗು ವಿ.ವಿ.ಯ ಪ್ರೊ.ಮಂಜುಳ, ಸ್ಕೌಟ್ಸ್, ಗೈಡ್ಸ್ ನ ಶಿಕ್ಷಕರು, ಶಿಕ್ಷಕಿಯರು, ವಿದ್ಯಾರ್ಥಿಗಳು ಇದ್ದರು. ನಿವೃತ್ತ ಮುಖ್ಯ ಶಿಕ್ಷಕ ಎಸ್.ಎಸ್.ಗೋಪಾಲ್, ನಿವೃತ್ತ ಚಿತ್ರಕಲಾ ಶಿಕ್ಷಕ ಉ.ರಾ.ನಾಗೇಶ್, ಕಲಾವಿದ ಭರಮಣ್ಣ ಟಿ.ಬೆಟಗೇರಿ ತೀರ್ಪುಗಾರರಾಗಿ ಭಾಗವಹಿಸಿದ್ದರು. ಇದೇ ವೇಳೆ ನೂತನ ಬಿಇಓ ಎಂ.ಕೃಷ್ಣಪ್ಪ ಅವರನ್ನು ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಿ ಅಭಿನಂದಿಸಲಾಯಿತು. :: ಗೀತ ಗಾಯನ ಸ್ಪರ್ಧಾ ವಿಜೇತರು :: ಗೀತ ಗಾಯನ ಸ್ಪರ್ಧೆಯಲ್ಲಿ ಈ ಕೆಳಕಂಡ ವಿಭಾಗಗಳಲ್ಲಿ ಈ ಕೆಳಕಂಡ ಶಾಲಾ ತಂಡಗಳು ವಿಜೇತಗೊಂಡು ಬಹುಮಾನ ಪಡೆದರು. ಸ್ಕೌಟ್ಸ್ ವಿಭಾಗ :: ಸುಂಟಿಕೊಪ್ಪ ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆ, ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ ತಂಡಗಳು ಕ್ರಮವಾಗಿ ಮೊದಲ ಎರಡು ಸ್ಥಾನ ಪಡೆದವು. ಗೈಡ್ಸ್ ವಿಭಾಗ :: ಕುಶಾಲನಗರ ಫಾತಿಮ ಪ್ರೌಢಶಾಲೆ, ಸುಂಟಿಕೊಪ್ಪ ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ ತಂಡಗಳು ಕ್ರಮವಾಗಿ ಮೊದಲ ಮೂರು ಸ್ಥಾನ ಪಡೆದವು. ಬುಲ್ಸ್, ಕಬ್ಸ್ ವಿಭಾಗ:*ಬುಲ್ಸ್, ಕಬ್ಸ್ ವಿಭಾಗದ ಸ್ಪರ್ಧೆಯಲ್ಲಿ ಸುಂಟಿಕೊಪ್ಪ ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳು ಉತ್ತಮವಾಗಿ ಗೀತ ಗಾಯನ ಹಾಡುವ ಮೂಲಕ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು. ವಿವಿಧ ಶಾಲೆಗಳಿಂದ ಆಗಮಿಸಿದ ಸ್ಕೌಟ್ಸ್ ಮತ್ತು ಗೈಡ್ಸ್ ಶಿಕ್ಷಕರು, ಶಿಕ್ಷಕಿಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.








