


ಮಡಿಕೇರಿ ಆ.25 NEWS DESK : ಭಾಗಮಂಡಲ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದ ರೂಢಿ ಸಂಪ್ರದಾಯದಂತೆ ಪ್ರತೀ ವರ್ಷ ಗಣೇಶ ಚತುರ್ಥಿ ಪೂಜಾ ಕಾರ್ಯಕ್ರಮವನ್ನು ಅತ್ಯಂತ ಶ್ರದ್ಧಾಭಕ್ತಿಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಅದರಂತೆ ಈ ವರ್ಷವೂ ಆ.27 ರಂದು ಗಣೇಶ ಚತುರ್ಥಿ ಪೂಜಾ ಕಾರ್ಯಕ್ರಮ ನಡೆಯಲಿದೆ. ಭಕ್ತಾಧಿಗಳು ಈ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ದೇವಾಲಯದ ಆಡಳಿತಾಧಿಕಾರಿಗಳ ಪರವಾಗಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ಅವರು ಕೋರಿದ್ದಾರೆ. ಭಾಗಮಂಡಲ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಆಗಸ್ಟ್, 27 ರಂದು ಬೆಳಗ್ಗೆ 9.30 ಗಂಟೆಗೆ ಗಣಪತಿ ಹೋಮ, ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ, ಮಹಾಮಂಗಳಾರತಿ, ಪ್ರಸಾದ ವಿತರಣೆ ಮತ್ತು ಅನ್ನ ಸಂತರ್ಪಣೆ ನಡೆಯಲಿದೆ. ಶ್ರೀ ತಲಕಾವೇರಿ ದೇವಾಲಯದಲ್ಲಿ ಆಗಸ್ಟ್, 27 ರಂದು ಬೆಳಗ್ಗೆ 9.30 ಗಂಟೆಗೆ ಗಣಪತಿ ಹೋಮ, ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ, ಮಹಾಮಂಗಳಾರತಿ ಮತ್ತು ಪ್ರಸಾದ ವಿತರಣೆ ನಡೆಯಲಿದೆ ಎಂದು ಶ್ರೀಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಹಣಾಧಿಕಾರಿ ತಿಳಿಸಿದ್ದಾರೆ.








