
ಮಡಿಕೇರಿ ಆ.29 NEWS DESK : ಮಡಿಕೇರಿ ದಸರಾ ಜನೋತ್ಸವವನ್ನು ಸಂಭ್ರಮ, ಸುರಕ್ಷತೆ ಮತ್ತು ಸ್ವಚ್ಛತೆಯಿಂದ ಆಚರಿಸಲು ಎಲ್ಲರೂ ಕೈಜೋಡಿಸಬೇಕು. ದಸರಾ ಆಚರಣೆಗೆ ಅಗತ್ಯವಿರುವ ಅನುದಾನವನ್ನು ಕೋರಲು ಸೆಪ್ಟಂಬರ್ ತಿಂಗಳಿನಲ್ಲಿ ಮುಖ್ಯಮಂತ್ರಿಗಳ ಬಳಿಗೆ ನಿಯೋಗ ತೆರಳಲಾಗುವುದು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಡಿಕೇರಿ ದಸರಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರು ಹಣ ಬಿಡುಗಡೆ ಸಂಬAಧ ಮುಖ್ಯಮಂತ್ರಿಯವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ನಿಯೋಗದ ಮೂಲಕ ಭೇಟಿ ಮಾಡಲಾಗುವುದು ಎಂದರು. ಸಂಪ್ರದಾಯದಂತೆ ನಡೆದುಕೊಂಡು ಬಂದಿರುವ ಮಡಿಕೇರಿ ದಸರಾವನ್ನು ವ್ಯವಸ್ಥಿತವಾಗಿ ಆಚರಿಸುವಂತಾಗಬೇಕು. ಸುರಕ್ಷತೆಗೆ ಒತ್ತು ನೀಡಬೇಕು. ಪ್ರತೀ ಮಂಟಪದಲ್ಲಿ ಪೊಲೀಸರನ್ನು ನಿಯೋಜಿಸಬೇಕು. ಕರಗ ಹಾಗೂ ದಶಮಂಟಪಗಳು ಸಾಗುವ ಮಾರ್ಗದ ಗುಂಡಿ ಮುಚ್ಚುವ ಕಾರ್ಯವಾಗಬೇಕು. ವಿದ್ಯುತ್ ಮಾರ್ಗ ಸರಿಪಡಿಸುವುದು ಹಾಗೂ ಬೀಳುವ ಮರಗಳಿದ್ದಲ್ಲಿ ತೆರವುಗೊಳಿಸುವ ಕಾರ್ಯ ಕೈಗೊಳ್ಳಬೇಕು. ಮಡಿಕೇರಿ ದಸರಾ ವಿಶಿಷ್ಟ ಹಾಗೂ ವಿಭಿನ್ನವಾಗಿದ್ದು, ಜನರ ಸುರಕ್ಷತೆ, ವಾಹನ ನಿಲುಗಡೆ ಮತ್ತಿತರ ಸಂಬಂಧ ಅಗತ್ಯ ಕ್ರಮಕೈಗೊಳ್ಳಬೇಕು ಮತ್ತು ಎಲ್ಲರೂ ಸಹಕರಿಸಬೇಕು ಎಂದು ತಿಳಿಸಿದರು. ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಾಗೂ ಅಧಿಕಾರಿಗಳ ಉಪಸ್ಥಿತಿಯಲ್ಲಿ ಮತ್ತೊಂದು ಸಭೆ ನಡೆಸಲಾಗುವುದು ಎಂದು ಡಾ.ಮಂತರ್ ಗೌಡ ಅವರು ಹೇಳಿದರು. ಸಭೆಯ ಆರಂಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಡಿಕೇರಿ ದಸರಾವು ನಾಡಿನ ಸಂಸ್ಕೃತಿ ಬಿಂಭಿಸುತ್ತದೆ. ಒಳ್ಳೆಯ ರೀತಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸುವುದು, ಮಹಿಳಾ, ಮಕ್ಕಳ, ಯುವ ಮತ್ತು ಕ್ರೀಡಾ ದಸರಾ ಆಚರಿಸುವುದು ಸೇರಿದಂತೆ ವಿವಿಧ ರೀತಿಯ ದಸರಾ ಆಚರಿಸುವುದು ವಿಶೇಷವಾಗಿದ್ದು, ಆ ದಿಸೆಯಲ್ಲಿ ಎಲ್ಲರೂ ಸಹಕರಿಸುವಂತೆ ಕೋರಿದರು. ಮಡಿಕೇರಿ ದಸರಾದಲ್ಲಿ ನಾಲ್ಕು ಶಕ್ತಿ ದೇವತೆಗಳಿಗೆ ಪೂಜೆ ಸಲ್ಲಿಸಿ ಕರಗ ಉತ್ಸವ ಮೂಲಕ ದಸರಾ ಆಚರಿಸುವುದು ವಿಶೇಷವಾಗಿದೆ. ವೇದಿಕೆ, ಬೆಳಕು, ಧ್ವನಿ ವ್ಯವಸ್ಥೆ ಹೀಗೆ ಹಲವು ರೀತಿಯ ಕಾರ್ಯಕ್ರಮಗಳು ಮಡಿಕೇರಿ ದಸರಾದಲ್ಲಿ ನಡೆಯುತ್ತಿರುವುದು ವಿಶೇಷ. ಆ ನಿಟ್ಟಿನಲ್ಲಿ ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಮಡಿಕೇರಿ ದಸರಾಗೆ ಎಲ್ಲರೂ ಸಹಕರಿಸುವಂತೆ ಮನವಿ ಮಾಡಿದರು. ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಆ ನಿಟ್ಟಿನಲ್ಲಿ ಸೆಸ್ಕ್ ಮತ್ತು ಪೌರಾಡಳಿತ ಇಲಾಖೆ ಅಧಿಕಾರಿಗಳು ಹಿಂದಿನಂತೆ ಸಹಕರಿಸುವಂತೆ ಸೂಚಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಮಾತನಾಡಿ ರಾತ್ರಿ ವೇಳೆಯಲ್ಲಿ ನಡೆಯುವ ಮಡಿಕೇರಿ ದಸರಾಗೆ ಹೆಚ್ಚಿನ ಜನರು ಆಗಮಿಸುತ್ತಾರೆ. ಆ ನಿಟ್ಟಿನಲ್ಲಿ ಜನರ ಸುರಕ್ಷತೆ ಅತೀ ಮುಖ್ಯ. ಆಸ್ತಿ ಪಾಸ್ತಿ ಹಾನಿಯಾಗದಂತೆ ಗಮನಹರಿಸುವುದು, ವಾಹನ ನಿಲುಗಡೆಗೆ ವ್ಯವಸ್ಥೆ ಮಾಡುವುದು, ಸಾರಿಗೆ ಸಂಚಾರ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವುದು, ಮತ್ತಿತರ ಕ್ರಮಗಳನ್ನು ಪೊಲೀಸ್ ಇಲಾಖೆ ವಹಿಸಲಿದೆ ಎಂದು ಹೇಳಿದರು. ದಶಮಂಟಪಗಳ ನಿರ್ಮಾಣ ಸಂಬಂಧ ಪ್ರಾದೇಶಿಕ ಸಾರಿಗೆ ಅಧಿಕಾರಿಯವರಿಂದ ಸುರಕ್ಷತೆಯ ಪ್ರಮಾಣ ಪತ್ರ ಪಡೆಯುವುದು ಅಗತ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಒತ್ತಿ ಹೇಳಿದರು. ದಶ ಮಂಟಪಗಳ ಪ್ರದರ್ಶನಕ್ಕೆ ತೆರಳುವಾಗ ಸುರಕ್ಷತೆ ಅತೀ ಮುಖ್ಯವಾಗಿದೆ. ಪ್ರಾದೇಶಿಕ ಸಾರಿಗೆ ಅಧಿಕಾರಿಯವರಿಂದ ಅನುಮತಿ ಪಡೆಯುವಂತಾಗಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಸಲಹೆ ಮಾಡಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಶಾಸಕರಾದ ಡಾ.ಮಂತರ್ ಗೌಡ ಅವರು ಇದುವರೆಗೆ ಪ್ರಾದೇಶಿಕ ಸಾರಿಗೆ ಅಧಿಕಾರಿಯವರಿಂದ ಪ್ರಮಾಣ ಪತ್ರ ಪಡೆಯುವುದಿಲ್ಲ. ಈಗಾಗಲೇ ದಶಮಂಟಪ ಸಮಿತಿಯವರಿಗೆ ಅನುಭವ ಇರುವುದರಿಂದ ಹಿಂದಿನಂತೆಯೇ ನಡೆಸಿಕೊಂಡು ಹೋಗುವಂತಾಗಬೇಕು. ಯಾವುದೇ ರೀತಿ, ಯಾರಿಗೂ ತೊಂದರೆಯಾಗದಂತೆ ಗಮನಹರಿಸಬೇಕು. ಸುರಕ್ಷತೆಗೆ ಒತ್ತು ನೀಡಬೇಕು ಎಂದು ಹೇಳಿದರು. ಬಳಿಕ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಜನ ಸಂದಣಿ ಇರುವ ಕಡೆಗಳಲ್ಲಿ ಪಟಾಕಿ ಸಿಡಿಸಬಾರದು. ಸುರಕ್ಷಿತ ಸ್ಥಳದಲ್ಲಿ ಪಟಾಕಿ ಸಿಡಿಸಬೇಕು ಎಂದರು. ಜನಸಂದಣಿ ನಿರ್ವಹಣೆ ಸಂಬಂಧಿಸಿದಂತೆ ಪ್ರಮಾಣಿತ ಕಾರ್ಯಚರಣೆ ವಿಧಾನ(ಎಸ್ಒಪಿ)ವನ್ನು ಪಾಲಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ಸೂಚಿಸಿದರು. ಚೆಕ್ ಪೋಸ್ಟ್ಗಳ ನಿರ್ವಹಣೆ, ವಾಹನ ನಿಲುಗಡೆಗೆ ವ್ಯವಸ್ಥೆ, ಸುಗಮ ಸಾರಿಗೆ ಸಂಚಾರಕ್ಕೆ ಅವಕಾಶ ಮಾಡುವುದು, ಧ್ವನಿವರ್ಧಕ ಸಂಬಂಧ ನಿಯಮಗಳನ್ನು ಪಾಲಿಸುವುದು. ಹೀಗೆ ಸರ್ಕಾರದ ನಿರ್ದೇಶನಗಳನ್ನು ಪಾಲಿಸುವುದು ಮತ್ತಿತರ ಕರ್ತವ್ಯವನ್ನು ನಿರ್ವಹಿಸಬೇಕು ಎಂದರು. ಮಡಿಕೇರಿ ದಸರಾದಲ್ಲಿ ಕೊಡಗು ಜಿಲ್ಲೆಯ ಕಲೆಗಳ ಪ್ರದರ್ಶನಕ್ಕೆ ಅವಕಾಶ ಆಗಬೇಕು. ಕಸವನ್ನ ಎಲ್ಲೆಂದರಲ್ಲಿ ಬಿಸಾಡಬಾರದು. ಸ್ವಚ್ಛತೆಗೆ ಒತ್ತು ನೀಡಬೇಕು ಎಂದರು. ರಕ್ಷಣೆ ಸಂಬಂಧ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗುವುದು. ಸಿಸಿಟಿವಿ ಕ್ಯಾಮರಾ ಅಳವಡಿಸಲಾಗುವುದು. ಸಹಾಯವಾಣಿ ಕೇಂದ್ರ ಆರಂಭಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಹೇಳಿದರು. ರಾಜಾಸೀಟು ರಸ್ತೆಯಲ್ಲಿ ಸುಗಮ ಸಾರಿಗೆ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕು. ಕುಟುಂಬದವರೊAದಿಗೆ ಮಡಿಕೇರಿ ದಸರಾವನ್ನು ಎಲ್ಲರೂ ವೀಕ್ಷಿಸುವಂತಾಗಲು ಆ ನಿಟ್ಟಿನಲ್ಲಿ ಶಬ್ದ/ ಧ್ವನಿಯನ್ನು ಕಡಿಮೆ ಮಾಡಬೇಕು ಎಂದು ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಉಪ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್ ದಶಮಂಟಪಗಳ ಸ್ಪರ್ಧೆ ಇರುವುದರಿಂದ ಪೈಪೋಟಿ ಹೆಚ್ಚಾಗಿದೆ. ಸ್ಪರ್ಧೆ ಇಲ್ಲದಿದ್ದರೆ ಒಳ್ಳೆಯದು ಎಂದು ಅಭಿಪ್ರಾಯಪಟ್ಟರು. ದಸರಾ ಸಮಿತಿ ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ ಅವರು ಮಾತನಾಡಿ ಅರಣ್ಯ ಇಲಾಖೆ ಅಧಿಕಾರಿಗಳ ಸಹಕಾರ ಹೆಚ್ಚಿನದ್ದಾಗಿದ್ದು, ಆ ನಿಟ್ಟಿನಲ್ಲಿ ಎಲ್ಲರೂ ಸಹಕರಿಸುವಂತೆ ಕೋರಿದರು. ದಸರಾ ಸಮಿತಿಯ ಧನಂಜಯ ಅವರು ಮಾತನಾಡಿ ಹಿಂದಿನಿಂದಲೂ ದಶಮಂಟಪಗಳ ಸಂಬAಧ ಆರ್ಟಿಒ ಕಚೇರಿಯಿಂದ ಅನುಮತಿ ಪಡೆದಿರುವುದಿಲ್ಲ. ಈ ಹಿಂದಿನಂತೆ ದಸರಾವನ್ನು ಆಚರಿಸಲು ಅವಕಾಶ ಮಾಡಬೇಕು ಎಂದರು. ದಸರಾ ಸಮಿತಿಯ ರಾಜೇಶ್ ಅವರು ಮಾತನಾಡಿ ಮಂಟಪಗಳಿಗೆ ಸಂಬಂಧ ನಿಯಮಗಳನ್ನು ಪಾಲಿಸಲಾಗುವುದು. ಆದರೆ ಒತ್ತಡ ಹೇರಬಾರದು. ಕಥಾ ಸಾರಾಂಶವನ್ನು ನೀಡಲು ಡಿ.ಜೆ. ಅತ್ಯಗತ್ಯ. ಆ ನಿಟ್ಟಿನಲ್ಲಿ ಎಲ್ಲರ ಸಹಕಾರ ಅತ್ಯಗತ್ಯ. ಹೆಚ್ಚು ನಿಬಂಧನೆಗಳನ್ನು ಹೇರಬಾರದು ಎಂದು ಕೋರಿದರು.
ನಗರಸಭೆ ಉಪಾಧ್ಯಕ್ಷರಾದ ಮಹೇಶ್ ಜೈನಿ ಅವರು ಮಾತನಾಡಿ ಮಂಟಪಗಳ ವೀಕ್ಷಣೆಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಹಾಗಾಗಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಅವರ ಅನುಮತಿ ಬೇಡ. ಮಡಿಕೇರಿ ದಸರಾದ ವೈಭವ ಕಡಿಮೆ ಮಾಡುವುದು ಬೇಡ, ಹೆಚ್ಚಿನ ನಿಬಂಧನೆಗಳನ್ನು ಅಳವಡಿಸುವುದರಿಂದ ಮಡಿಕೇರಿ ದಸರಾ ವೈಭವಕ್ಕೆ ತೊಂದರೆಯಾಗಲಿದೆ ಎಂದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಅವರು ಜನರ ಸುರಕ್ಷತೆ ಅತೀ ಮುಖ್ಯವಾಗಿದ್ದು, ಎಲ್ಲರ ಸುರಕ್ಷತೆಗೆ ಒತ್ತು ನೀಡುವುದು ಅತ್ಯಗತ್ಯ. ಆ ನಿಟ್ಟಿನಲ್ಲಿ ತಾವುಗಳೇ ಸ್ವಯಂ ಪ್ರೇರಣೆಯಿಂದ ಸುರಕ್ಷತೆಗೆ ಗಮನಹರಿಸಬೇಕು. ಆ ನಿಟ್ಟಿನಲ್ಲಿ ಮಂಟಪಗಳನ್ನು ತಯಾರು ಮಾಡಿಕೊಳ್ಳಬೇಕು ಎಂದು ಸಲಹೆ ಮಾಡಿದರು. ಪತ್ರಕರ್ತರಾದ ಸವಿತಾ ರೈ ಅವರು ಮಾತನಾಡಿ 2024 ರ ದಸರಾ ಲೆಕ್ಕಪತ್ರವನ್ನು ಪ್ರಕಟಿಸಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸರ್ಕಾರದಿಂದ ಬಿಡುಗಡೆಯಾಗಿರುವ ಹಣವನ್ನು ಖರ್ಚು ಮಾಡಲಾಗಿದೆ. ಆರ್ಟಿಜಿಎಸ್ ಮೂಲಕ ಅವರವರ ಖಾತೆಗೆ ಹಣ ಪಾವತಿಯಾಗಿದೆ. ಯಾವುದೇ ಗೋಲ್ಡ್ ಕಾರ್ಡ್ ಮಾಡಿಸಿಲ್ಲ. ಸಾರ್ವಜನಿಕರಿಂದ ವಂತಿಗೆ ಪಡೆದಿರುವುದಿಲ್ಲ ಎಂದರು. ನಗರಸಭೆ ಪೌರಾಯುಕ್ತರಾದ ಎಚ್.ಆರ್.ರಮೇಶ್, ಪೊಲೀಸ್ ಇಲಾಖೆ ಅಧಿಕಾರಿಗಳು, ದಸರಾ ಸಮಿತಿ ಪದಾಧಿಕಾರಿಗಳು ಇತರರು ಇದ್ದರು.








