
ಮಡಿಕೇರಿ ಸೆ.1 NEWS DESK : ನಾಪೋಕ್ಲು ಬ್ಲಾಕ್ ಚೆಂಬು ಗ್ರಾಮದ ಆನೆಹಳ್ಳ ಗಿರಿಜನ ಕಾಲೋನಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿದರು. ಈ ಹಿಂದೆ ಹಲವು ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಇಲ್ಲಿನ ನಿವಾಸಿಗಳು ಶಾಸಕರಿಗೆ ಸಲ್ಲಿಸಿದ್ದರು. ಆ ಸಂದರ್ಭ ಶಾಸಕರು ಕಾಲೋನಿಗೆ ಭೇಟಿ ನೀಡಿ ಎಲ್ಲರೊಂದಿಗೆ ಮಾತನಾಡುವ ಭರವಸೆಯನ್ನು ನೀಡಿದ್ದರು. ಕೊಟ್ಟ ಮಾತಿನಂತೆ ಗ್ರಾಮಕ್ಕೆ ಆಗಮಿಸಿದ ಶಾಸಕರು ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ, ಆದ್ಯತೆ ಮೇರೆಗೆ ಮೂಲಭೂತ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದಾಗಿ ಭರವಸೆ ನೀಡಿದರು. ಅಲ್ಲದೇ ಸ್ಥಳದಲ್ಲೇ ಕಾಲೋನಿಯ ಸುಮಾರು 15 ಲಕ್ಷಕ್ಕೂ ಅಧಿಕದ ಮೊತ್ತದ ವಿವಿಧ ಕಾಮಗಾರಿಗಳಿಗೆ ಅನುದಾನ ಘೋಷಿಸಿದರು ಮತ್ತು ಮಳೆ ನಿಂತ ಕೂಡಲೇ ಕಾಮಗಾರಿ ಪ್ರಾರಂಭಿಸಲು ಸೂಚಿಸಿದರು. ಈ ಸಂದರ್ಭ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ವಲಯ ಕಾಂಗ್ರೆಸ್ ಅಧ್ಯಕ್ಷ ರವಿರಾಜ್ ಹೊಸೂರು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.









