
ಮಡಿಕೇರಿ ಸೆ.3 NEWS DESK : ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ಜನಪರ ಕಾಳಜಿಯೊಂದಿಗೆ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸುತ್ತಿದೆ. ಆದರೆ ಸರಕಾರಕ್ಕೆ ಪ್ರಚಾರದ ಕೊರತೆ ಇರುವುದರಿಂದ ರಾಜ್ಯದಿಂದ ಪಂಚಾಯ್ತಿ ಮಟ್ಟದವರೆಗೆ ಕಾಂಗ್ರೆಸ್ ಪ್ರಚಾರ ಸಮಿತಿಗಳನ್ನು ರಚಿಸಲಾಗುತ್ತಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವ ವಿಯಯ್ ಕುಮಾರ್ ಸೊರಕೆ ಅವರು ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವಿರೋಧ ಪಕ್ಷಗಳು ಶೇ.5ರಷ್ಟು ಕೆಲಸ ಮಾಡಿ ಶೇ.95 ರಷ್ಟು ಪ್ರಚಾರ ಗಿಟ್ಟಿಸಿಕೊಳ್ಳುತ್ತಿವೆ, ಆದರೆ ಕಾಂಗ್ರೆಸ್ ಸರಕಾರ ಶೇ.100ರಷ್ಟು ಸಾಧನೆ ಮಾಡಿದರೂ ಪ್ರಚಾರ ಪಡೆಯುವಲ್ಲಿ ವಿಫಲವಾಗುತ್ತಿದೆ. ಆದ್ದರಿಂದ ಸರಕಾರದ ಜನಪರ ಕಾರ್ಯಕ್ರಮಗಳನ್ನು ಜನರ ಬಳಿಗೆ ಕೊಂಡೊಯ್ಯುವ ಉದ್ದೇಶದಿಂದ ರಾಜ್ಯ, ಜಿಲ್ಲೆ, ತಾಲ್ಲೂಕು, ಹೋಬಳಿ ಮತ್ತು ಪಂಚಾಯ್ತಿ ಮಟ್ಟದವರೆಗೆ ಡಿಜಿಟಲ್ ಯೂತ್ ಸಮಿತಿಗಳನ್ನು ರಚಿಸಲಾಗುತ್ತಿದೆ ಎಂದರು. ರಾಜ್ಯ ವ್ಯಾಪಿ 59 ಸಾವಿರ ಬೂತ್ ಗಳಿವೆ, ಸುಮಾರು 1ಲಕ್ಷ ಕಾರ್ಯಕರ್ತರನ್ನು ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುತ್ತದೆ. ಇವರುಗಳು ಕಾಂಗ್ರೆಸ್ ಸೈನಿಕರಂತೆ ಕಾರ್ಯ ನಿರ್ವಹಿಸಲಿದ್ದಾರೆ. ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಆಶಯದಂತೆ ರಾಜ್ಯಮಟ್ಟ ಮತ್ತು ಜಿಲ್ಲಾ ಮಟ್ಟದಲ್ಲಿ ತರಬೇತಿ ಕಾರ್ಯಾಗಾರಗಳನ್ನು ನಡೆಸಿ ಸಮಿತಿಯ ಪದಾಧಿಕಾರಿಗಳು ಸರಕಾರದ ಪರ ಪ್ರಚಾರದಲ್ಲಿ ಸಕ್ರಿಯರಾಗುವಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದರು. ಕಾಂಗ್ರೆಸ್ ಸರಕಾರ ಕೇವಲ ಆಶ್ವಾನೆಗಳನ್ನು ನೀಡಿಲ್ಲ, ಅಧಿಕಾರಕ್ಕೆ ಬಂದ ಆರು ತಿಂಗಳಿನಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಆರ್ಥಿಕ ಸ್ವಾತಂತ್ರ್ಯದ ಮೂಲಕ ಜನರಿಗೆ ಬದುಕು ಕಟ್ಟಿಕೊಡುತ್ತಿದೆ, ನಮ್ಮ ಗ್ಯಾರಂಟಿ ಯೋಜನೆಗಳ ಯಶಸ್ಸು ಕಂಡು ಬೇರೆ ರಾಜ್ಯಗಳಲ್ಲಿ ಕೂಡ ಇದು ಅನುಷ್ಠಾನಗೊಳ್ಳುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ಸರಕಾರ ದಿವಾಳಿಯಾಗಿದೆ ಎಂದು ವಿರೋಧ ಪಕ್ಷಗಳು ಸುಳ್ಳು ಪ್ರಚಾರ ಮಾಡುತ್ತಿವೆ. ಸರಕಾರ ದಿವಾಳಿಯಾಗಿದ್ದರೆ ಸಾವಿರಾರು ಕೋಟಿ ಹಣವನ್ನು ಅಭಿವೃದ್ಧಿ ಕಾರ್ಯಗಳಿಗೆ ಬಿಡುಗಡೆ ಮಾಡಲು ಸಾಧ್ಯವಾಗುತ್ತಿತ್ತೇ, 7ನೇ ವೇತನ ಆಯೋಗದ ವರದಿಯಂತೆ 27 ಸಾವಿರ ಕೋಟಿ ನೀಡಲಾಗುತ್ತಿತ್ತೇ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರ ಸಂಭಾವನೆ ಏರಿಕೆ ಮಾಡಲು ಆಗುತ್ತಿತ್ತೇ ಎಂದು ಪ್ರಶ್ನಿಸಿದರು. ಗ್ಯಾರಂಟಿ ಯೋಜನೆಗಳಿಂದ ಸರಕಾರಕ್ಕೆ ಮತ್ತಷ್ಟು ಶಕ್ತಿ ಬಂದಿದ್ದು, ಪ್ರಚಾರದ ಕೊರತೆ ಇದೆಯಷ್ಟೆ. ಇದನ್ನು ಮನಗಂಡ ಡಿಕೆ.ಶಿವಕುಮಾರ್ ಅವರು ಪ್ರಚಾರಕ್ಕೆ ಆದ್ಯತೆ ನೀಡಲು ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ ಎಂದು ವಿಯಯ್ ಕುಮಾರ್ ಸೊರಕೆ ತಿಳಿಸಿದರು.









