

ಮಡಿಕೇರಿ ಸೆ.20 NEWS DESK : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಪತ್ರಿಕೋದ್ಯಮ ವಿಭಾಗ, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ ಹಾಗೂ ಕೊಡಗು ಪ್ರೆಸ್ಕ್ಲಬ್ ಸಹಯೋಗದಲ್ಲಿ ಸೆ.22 ರಂದು ಛಾಯಾಚಿತ್ರ ಪತ್ರಿಕೋದ್ಯಮದ ವ್ಯಾಪ್ತಿ ಮತ್ತು ಉದ್ಯೋಗಾವಕಾಶ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಕಾಲೇಜಿನ ವಿಚಾರ ಸಂಕಿರಣ ಕೊಠಡಿಯಲ್ಲಿ 10.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಟೈಮ್ಸ್ ಆಫ್ ಇಂಡಿಯಾ ದಿನ ಪತ್ರಿಕೆಯ ಮಂಗಳೂರು ಆವೃತ್ತಿಯ ಖ್ಯಾತ ಛಾಯಾಚಿತ್ರ ಪತ್ರಕರ್ತ ರವಿ ಪೊಸವಣಿಕೆ ಉಪನ್ಯಾಸ ನೀಡಲಿದ್ದಾರೆ. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಬಿ.ರಾಘವ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೊಡಗು ಪ್ರೆಸ್ಕ್ಲಬ್ ಮತ್ತು ಎಫ್.ಎಂ.ಕೆ.ಎಂ.ಸಿ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಬೊಳ್ಳಜಿರ ಬಿ.ಅಯ್ಯಪ್ಪ, ಪತ್ರಿಕೋದ್ಯಮ ವಿಭಾಗದ ಸಂಯೋಜಕರಾದ ಪ್ರೊ.ನಯನ ಕಶ್ಯಪ್, ಪತ್ರಿಕೋದ್ಯಮ ಉಪನ್ಯಾಸಕಿ ಎ.ಎನ್.ಮೋನಿಕ ಉಪಸ್ಥಿತರಿರಲಿದ್ದಾರೆ. :: ಛಾಯಾಚಿತ್ರ ಸ್ಪರ್ಧೆ :: ಕಾರ್ಯಕ್ರಮದ ಪ್ರಯುಕ್ತ ಕೊಡಗಿನ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ “ಕೊಡಗಿನ ವರ್ಷಧಾರೆ” ಎಂಬ ವಿಷಯದ ಕುರಿತು ಜಿಲ್ಲಾ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಲು ಒಂದು ವಿದ್ಯಾಸಂಸ್ಥೆಯಿಂದ ಐದು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.
ಛಾಯಾಚಿತ್ರಕ್ಕೆ ಅಡಿಬರಹ ಕಡ್ಡಾಯವಾಗಿರಬೇಕು. ವಿಜೇತರ ಹೆಸರುಗಳನ್ನು ಸೆ.22ರಂದು ನಡೆಯಲಿರುವ ಉಪನ್ಯಾಸ ಕಾರ್ಯಕ್ರಮದಲ್ಲಿ ಘೋಷಿಸಿ ಬಹುಮಾನ ವಿತರಿಸಲಾಗುವುದು. ಸ್ಪರ್ಧೆಯ ವಿಜೇತರಿಗೆ ಪ್ರಥಮ ರೂ.2000, ದ್ವಿತೀಯ ರೂ.1500, ತೃತೀಯ ರೂ.1000 ನೀಡಲಾಗುವುದು. ಅಲ್ಲದೇ 5 ಉತ್ತಮ ಛಾಯಾಚಿತ್ರಗಳಿಗೆ ಆಕರ್ಷಕ ಬಹುಮಾನವಿದ್ದು, ಎಲ್ಲಾ ಸ್ಪರ್ಧಿಗಳಿಗೆ ಪ್ರಮಾಣ ಪತ್ರ ನೀಡಲಾಗುವುದು ಎಂದು ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಚಂದನ್ ನಂದರಬೆಟ್ಟು ಹಾಗೂ ಕೊಡಗು ಪ್ರೆಸ್ಕ್ಲಬ್ನ ಪ್ರಧಾನ ಕಾರ್ಯದರ್ಶಿ ಎಂ.ಕೆ.ಆದರ್ಶ್ ಪತ್ರಿಕಾ ಪ್ರಟಣೆಯಲ್ಲಿ ತಿಳಿಸಿದ್ದಾರೆ.









